ADVERTISEMENT

ಗದಗ| ಕಸಾಪ ಕನ್ನಡಿಗರ ಹೆಮ್ಮೆ: ಬಾಹುಬಲಿ

ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತ್ಯುತ್ಸವ

​ಪ್ರಜಾವಾಣಿ ವಾರ್ತೆ
Published 4 ಜೂನ್ 2023, 16:13 IST
Last Updated 4 ಜೂನ್ 2023, 16:13 IST

ಗದಗ: ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವನ್ನಾಗಿ ರೂಪಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರನ್ನು ವಿದ್ವಾಂಸರು, ಶಿಕ್ಷಣ ತಜ್ಞರೆಂದು, ಇತಿಹಾಸಕಾರರೆಂದು ‘ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಸಾಹಿತ್ಯ ಸಂಗೀತ ವಾಸ್ತುಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ಕೊಟ್ಟು 1915ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಪ್ರಾರಂಭಿಸಿದರು ಎಂದು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಬಾಹುಬಲಿ ಜೈನರ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ನಡೆದ ರಾಜರ್ಷಿ ನಾಲ್ಮಡಿ ಕೃಷ್ಣರಾಜ ಒಡೆಯರ್‌ ಅವರ 138ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೊಟ್ಟಮೊದಲ ವಿಶ್ವವಿದ್ಯಾಲಯವನ್ನು ಮೈಸೂರಿನಲ್ಲಿ ತೆರೆದು ದಾಖಲೆ ನಿರ್ಮಿಸಿದ ಕೀರ್ತಿ ನಾಲ್ವಡಿ ಅವರಿಗೆ ಸಲ್ಲುತ್ತದೆ.
ಕನ್ನಡ ನಾಡಿನಲ್ಲಿ ಕನ್ನಡ ಭಾಷೆ, ಕನ್ನಡ ನೆಲ, ಕನ್ನಡ ನುಡಿಯ ಹಿರಿಮೆಯನ್ನು ಎತ್ತಿ ಹಿಡಿಯಲು ಕನ್ನಡ ಸಾಹಿತ್ಯ ಪರಿಷತ್ತಿನಂತಹ ಸಂಸ್ಥೆ ಬೇಕು ಎನ್ನುವ ಚಿಂತನೆ ಮಾಡಿ ಸ್ಥಾಪಿಸಿದ ಸಂಸ್ಥೆ ಒಂದು ಶತಮಾನ ಕಂಡು ಕನ್ನಡಿಗರ ಹೆಮ್ಮೆಯ ಧ್ಯೋತಕವಾಗಿದೆ ಎಂದು ಹೇಳಿದರು.

ADVERTISEMENT

ವೇದಿಕೆ ಮೇಲೆ ಡಾ. ಅನ್ನದಾನಿ ಹಿರೇಮಠ, ಪ್ರೊ. ಕೆ.ಎಚ್.ಬೇಲೂರ, ಡಯಟ್ ಹಿರಿಯ ಉಪನ್ಯಾಸಕ ಎಸ್.ಆರ್.ಹೂಗಾರ, ತಾಲ್ಲೂಕು ಕಸಾಪ ಅಧ್ಯಕ್ಷೆ ಡಾ. ರಶ್ಮಿ ಅಂಗಡಿ, ಬಸವರಾಜ ಗಣಪ್ಪನವರ, ಶಿವಾನಂದ ಗಿಡ್ನಂದಿ, ಈರಣ್ಣ ಮಾದರ, ಬಸವರಾಜ ನೆಲಜೇರಿ, ಕರಬಸಪ್ಪ ಬಾಳಿಕಾಯಿ, ಮಂಜುನಾಥ ಜಕ್ಕಲಿ ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದಗೌಡ ಪಾಟೀಲ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಮೊಟ್ಟ ಮೊದಲ ಬಾರಿಗೆ ಸ್ತ್ರೀ ಶಿಕ್ಷಣವನ್ನು ಕಡ್ಡಾಯಗೊಳಿಸಿದರು. ಕುರುಡ ಮತ್ತು ಮೂಕ ಮಕ್ಕಳಿಗೆ ಶಾಲೆಗಳನ್ನು ಪ್ರಾರಂಭಿಸಿದರು. ಇವರ ಅವಧಿಯಲ್ಲಿ 1911ರಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಆರಂಭಿಸಲಾಯಿತು. 1918ರಲ್ಲಿ ಶಾಲಾ ಪ್ರವೇಶಕ್ಕೆ ಜಾತಿ ಪದ್ಧತಿಯನ್ನು ನಿರ್ಮೂಲನೆ ಮಾಡಲಾಯಿತು. ಶಿಕ್ಷಣ ಕೆಲವರಿಗಾಗಿ ಅಲ್ಲ ಎಲ್ಲರಿಗೂ ದೊರೆಯಲಿ ಎನ್ನುವ ಉನ್ನತ ಆಕಾಂಕ್ಷೆಯುಳ್ಳವರಾಗಿದ್ದರು ಎಂದು ತಿಳಿಸಿದರು.

ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಶಿವಾನಂದ ಭಜಂತ್ರಿ ಸ್ವಾಗತಿಸಿದರು. ಡಾ. ದತ್ತಪ್ರಸನ್ನ ಪಾಟೀಲ ವಂದಿಸಿದರು. ಶಿವಾನಂದ ಗಿಡ್ನಂದಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.