
ಗದಗ: ‘ಯಾವುದೇ ವ್ಯಕ್ತಿ ಜಾತಿಯಿಂದ ಮುಖ್ಯನಾಗಬಾರದು, ನೈತಿಕ ವ್ಯಕ್ತಿತ್ವದಿಂದ ಮುಖ್ಯನಾಗಬೇಕು ಎಂಬ ಪರಿಕಲ್ಪನೆ ಕುವೆಂಪು ಅವರದ್ದಾಗಿತ್ತು. ಹಾಗಾಗಿ ಕುವೆಂಪು ಅವರ ಜಾತ್ಯತೀತ ಮನೋಭಾವದಿಂದ ಮೂಡಿ ಬಂದ ಆಶಯವೇ ವಿಶ್ವಮಾನವ ಸಂದೇಶವಾಗಿದೆ’ ಎಂದು ಸಾಹಿತಿ ಚಂದ್ರಶೇಖರ ವಸ್ತ್ರದ ಹೇಳಿದರು.
ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ನಡೆದ ವಿಶ್ವಮಾನವ ದಿನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಕುವೆಂಪು ಅವರ ಜನ್ಮದಿನವನ್ನು ವಿಶ್ವಮಾನವ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಮನುಜ ಮತ ವಿಶ್ವಪಥ ಇದು ಕುವೆಂಪು ಅವರ ವಿಶ್ವಮಾನವ ಸಂದೇಶದ ತಿರುಳಾಗಿದೆ. ಅಂದರೆ, ಮನುಷ್ಯನ ಧರ್ಮವೇ ವಿಶ್ವದ ಪಥ ಎಂದು ಸಾರುವ ಮೂಲಕ ಎಲ್ಲ ಮಾನವರೂ ಒಂದೇ ಎಂಬ ಭಾವನೆಯನ್ನು ಬೆಳೆಸುವುದಾಗಿದೆ ಎಂದು ತಿಳಿಸಿದರು.
‘ಭೂಮಿ ಮೇಲೆ ಹುಟ್ಟುವ ಪ್ರತಿ ಮಗು ವಿಶ್ವಮಾನವ. ಆ ನಂತರ ಆ ಮಗುವನ್ನು ಜಾತಿ, ಮತದ ಕಟ್ಟುಪಾಡುಗಳಿಂದ ಬಂಧಿಸಲಾಗುತ್ತದೆ. ಹಾಗಾಗಬಾರದು. ಬುದ್ಧ ಮತ್ತು ಬಸವಣ್ಣನವರಂತೆ ಪ್ರತಿಯೊಬ್ಬ ವ್ಯಕ್ತಿಯೂ ಸ್ವತಂತ್ರವಾಗಿ, ವೈಚಾರಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು ಎಂದು ಕುವೆಂಪು ಹೇಳಿದ್ದಾರೆ’ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಮಾತನಾಡಿ, ‘ಜಾತಿ, ಮತ, ಭಾಷೆಗಳ ಅಂತರವನ್ನು ಮೀರಿ ಮಾನವತೆಯೇ ಧರ್ಮ ಎಂಬ ಸಂದೇಶವನ್ನು ಕುವೆಂಪು ತಮ್ಮ ಸಾಹಿತ್ಯದ ಮೂಲಕ ಸಮಾಜಕ್ಕೆ ನೀಡಿದ್ದಾರೆ. ಯುವಜನತೆ ಕುವೆಂಪು ಅವರ ಚಿಂತನೆಗಳನ್ನು ಅರ್ಥಮಾಡಿಕೊಂಡು ಸಾಮಾಜಿಕ ಬದಲಾವಣೆಗೆ ಕೈಜೋಡಿಸಬೇಕು’ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಮಾತನಾಡಿ, ‘ವಿಶ್ವಮಾನವನೆಂಬ ಧ್ಯೇಯವೇ ನಮ್ಮ ಬದುಕಿನ ದಾರಿಯಾಗಲಿ. ಎಲ್ಲರೂ ಸಮಾನರು, ಎಲ್ಲರಲ್ಲೂ ಮಾನವೀಯತೆಯೇ ಮೊದಲ ಧರ್ಮ. ಸತ್ಯ, ಪ್ರೀತಿ ಮತ್ತು ಸಹಾನುಭೂತಿಗಳಿಂದಲೇ ನಿಜವಾದ ಸಮಾಜ ನಿರ್ಮಾಣ ಸಾಧ್ಯ’ ಎಂದರು.
ಕಾರ್ಯಕ್ರಮದ ಆರಂಭದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರು ಕುವೆಂಪು ಅವರ ಸಾಹಿತ್ಯ, ದರ್ಶನ ಮತ್ತು ವಿಶ್ವಮಾನವ ತತ್ವದ ಪ್ರಸ್ತುತತೆಯ ಕುರಿತು ಮಾತನಾಡಿದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದ 20 ಮಕ್ಕಳು ಹಾಗೂ 10 ಮಂದಿ ಹಿರಿಯ ಹಾಗೂ 10 ಯುವ ಸಾಹಿತಿ, ಕವಿಗಳನ್ನು ಗೌರವಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ, ರಾಜ್ಯ ಜಾನಪದ ಅಕಾಡೆಮಿ ಸದಸ್ಯ ಶಂಕ್ರಣ್ಣ ಸಂಕಣ್ಣನವರ, ಶರೀಫ್ ಬಿಳೆಯಲಿ, ಡಾ. ರಾಜೇಂದ್ರ ಗಡಾದ, ಮುತ್ತು ಬಿಳೆಯಲಿ, ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಡಿಡಿಪಿಐ ಆರ್.ಎಸ್.ಬುರಡಿ, ಶ್ರೀಧರ ಚಿನಗುಡಿ ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ ಸ್ವಾಗತಿಸಿದರು. ಪ್ರೊ. ಬಾಹುಬಲಿ ಜೈನರ್ ಕಾರ್ಯಕ್ರಮ ನಿರ್ವಹಿಸಿದರು.
ಕುವೆಂಪು ಅವರು ನೀಡಿದ ಮನುಜ ಮತ ವಿಶ್ವಪಥ ಎಂಬ ಸಂದೇಶವನ್ನು ಸಾರುವ ಈ ದಿನವು ಮಾನವನ ಸರ್ವತೋಮುಖ ಬೆಳವಣಿಗೆ ಮತ್ತು ವಿಶ್ವ ಸಹೋದರತ್ವದ ಆಶಯವನ್ನು ಎತ್ತಿ ಹಿಡಿಯುತ್ತದೆ.ಚಂದ್ರಶೇಖರ, ವಸ್ತ್ರದ ಸಾಹಿತಿ
ಕುವೆಂಪು ಅವರು ಪ್ರತಿಪಾದಿಸಿದ ವಿಶ್ವಮಾನವ ತತ್ವವು ಇಂದಿನ ಸಮಾಜಕ್ಕೆ ದಾರಿದೀಪವಾಗಿದೆ. ಮಾನವೀಯತೆ ಸಮಾನತೆ ಸಹಾನುಭೂತಿ ಹಾಗೂ ಸೌಹಾರ್ದತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ.ಸಿ.ಎಸ್.ಶ್ರೀಧರ್, ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.