
ಗಜೇಂದ್ರಗಡ: ಪಟ್ಟಣದ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಗುರುವಾರ ಅಖಿಲ ಭಾರತ ಮುಷ್ಕರ ಬೆಂಬಲಿಸಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಘೋಷಣೆಗಳನ್ನು ಕೂಗಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಆರಂಭವಾದ ಪ್ರತಿಭಟನೆ ಬಳಿಕ ಕಾಲಕಾಲೇಶ್ವರ ವೃತ್ತ, ಜೋಡು ರಸ್ತೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ ಕಾಲಕಾಲೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಎಂ.ಎಸ್.ಹಡಪದ ಮಾತನಾಡಿ, ‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದ್ದು, ಒಪ್ಪಂದದಲ್ಲಿ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದು ಸೇರಿದಂತೆ ಹಲವು ನಿರ್ದೇಶನಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಿಟ್ಟಿದ್ದಾರೆ. ಉಲ್ಲಂಘಿಸಿದರೆ ಸುಂಕ ವಿಧಿಸುವ ಬೆದರಿಕೆಗೆ ಮಣಿದು ಮೋದಿ ಸರ್ಕಾರದ ಈ ಒಪ್ಪಂದ ಮಾಡಿಕೊಂಡಿದೆ. ಅಲ್ಲದೆ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಪರವಾದ ನೀತಿ ಸಂಹಿತೆಗಳಿಂದ ದೇಶದ ರೈತರು, ಕಾರ್ಮಿಕರು, ಬಡ ಜನರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಈ ನೀತಿ ಸಂಹಿತೆಗಳನ್ನು ಹಿಂಪಡೆಯಬೇಕುʼ ಎಂದು ಒತ್ತಾಯಿಸಿದರು.
ಕಾರ್ಮಿಕ ಮುಖಂಡ ಪೀರು ರಾಠೋಡ ಮಾತನಾಡಿದರು. ಈ ಸಂದರ್ಭದಲ್ಲಿ ಮೆಹಬೂಬ ಹವಾಲ್ದಾರ, ರೂಪೇಶ್ ಮಾಳೋತ್ತರ, ಅಂಬರೀಶ ಚವ್ಹಾಣ, ಅನಿಲ ರಾಠೋಡ, ವೀರೇಶ ರಾಠೋಡ, ರೂಪಲೇಶ ಮಾಳೊತ್ತರ, ಅಭಿಲಾಷ ರಾಠೋಡ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಇಲಾಖೆಗಳ ನೌಕರರು ಇದ್ದರು.