ADVERTISEMENT

ಲಕ್ಷ್ಮೇಶ್ವರ ತಾಲ್ಲೂಕು ಬಿಜೆಪಿ ಭದ್ರಕೋಟೆ: ಬೊಮ್ಮಾಯಿ

ಮುಖಂಡರು ಬಿಜೆಪಿಗೆ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 14:13 IST
Last Updated 27 ಮಾರ್ಚ್ 2024, 14:13 IST
ಗದಗ-ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರ ಸಮ್ಮುಖದಲ್ಲಿ ಲಕ್ಷ್ಮೇಶ್ವರ ಮುಖಂಡರಾದ ಸಣ್ಣವೀರಪ್ಪ ಹಳ್ಳೆಪ್ಪನವರ, ಮಂಜುನಾಥ ಮಾಗಡಿ, ಎಂ.ಎಸ್. ದೊಡ್ಡಗೌಡ್ರ ಮತ್ತಿತರರು ಪಕ್ಷಕ್ಕೆ ಸೇರ್ಪಡೆಗೊಂಡರು
ಗದಗ-ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿವರ ಸಮ್ಮುಖದಲ್ಲಿ ಲಕ್ಷ್ಮೇಶ್ವರ ಮುಖಂಡರಾದ ಸಣ್ಣವೀರಪ್ಪ ಹಳ್ಳೆಪ್ಪನವರ, ಮಂಜುನಾಥ ಮಾಗಡಿ, ಎಂ.ಎಸ್. ದೊಡ್ಡಗೌಡ್ರ ಮತ್ತಿತರರು ಪಕ್ಷಕ್ಕೆ ಸೇರ್ಪಡೆಗೊಂಡರು   

ಲಕ್ಷ್ಮೇಶ್ವರ: ಮುಖಂಡರಾದ ಸಣ್ಣವೀರಪ್ಪ ಹಳ್ಳೆಪ್ಪನವರ, ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಅಧ್ಯಕ್ಷ ಮಂಜುನಾಥ ಮಾಗಡಿ, ಎಂ.ಎಸ್. ದೊಡ್ಡಗೌಡ್ರ ಸೇರಿದಂತೆ ಮತ್ತಿತರರು ಬುಧವಾರ ಶಿಗ್ಗಾವಿ ಕ್ಷೇತ್ರದ ಶಾಸಕ ಹಾಗೂ ಗದಗ-ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಬಸವರಾಜ ಬೊಮ್ಮಾಯಿ ಮಾತನಾಡಿ, ‘ಶಿರಹಟ್ಟಿ ವಿಧಾನಸಭೆ ಮತಕ್ಷೇತ್ರದ ಲಕ್ಷ್ಮೇಶ್ವರ ತಾಲ್ಲೂಕು ಬಿಜೆಪಿಯ ಭದ್ರಕೋಟೆ. ಪಕ್ಷಕ್ಕೆ ಹೆಚ್ಚಿನ ಲೀಡ್ ಕೊಡುವ ಕ್ಷೇತ್ರ ಇದಾಗಿದೆ. ಹಳ್ಳೆಪ್ಪನವರ ಸೇರಿದಂತೆ ಮತ್ತಿತರ ಮುಖಂಡರು ಪಕ್ಷಕ್ಕೆ ಸೇರ್ಪಡೆ ಆಗಿದ್ದು ನಮಗೆ ಆನೆ ಬಲ ಬಂದಂತಾಗಿದೆ. ಎಲ್ಲರನ್ನೂ ಒಗ್ಗಟ್ಟಾಗಿ ಕಟ್ಟಿಕೊಂಡು ಪಕ್ಷವನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಪ್ರಯತ್ನ ಮಾಡುತ್ತೇನೆ’ ಎಂದರು.

‘ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಗಳನ್ನಾಗಿ ಮಾಡುವ ಸಂಕಲ್ಪ ನಮ್ಮೆಲ್ಲರ ಉದ್ಧೇಶ. ಈ ನಿಟ್ಟಿನಲ್ಲಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ  ಬದ್ಧನಾಗಿರುತ್ತೇನೆ’ ಎಂದು ಹೇಳಿದರು.

ADVERTISEMENT

ಸಣ್ಣವೀರಪ್ಪ ಹಳ್ಳೆಪ್ಪನವರ ಮಾತನಾಡಿ, ‘ಲೋಕಸಭಾ ಚುನಾವಣೆಯಲ್ಲಿ ನಾವೆಲ್ಲರೂ ನಮ್ಮ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರವಾಗಿ ಒಗ್ಗಟ್ಟಾಗಿ ದುಡಿದು ಅತ್ಯಂತ ಹೆಚ್ಚು ಮತಗಳಿಂದ ಅವರನ್ನು ಗೆಲ್ಲಿಸೋಣ, ನಮ್ಮ ನಮ್ಮಲ್ಲಿ ಏನೇ ಭಿನ್ನಾಭಿಪ್ರಾಯಗಳು ಇದ್ದರೂ ಅವುಗಳನ್ನು ಮರೆತು ಕೆಲಸ ಮಾಡೋಣ. ಪಕ್ಷ ನನಗೆ ಸತತವಾಗಿ ನಾಲ್ಕು ಭಾರಿ ಟಿಕೆಟ್ ಕೊಟ್ಟಿಲ್ಲ. ಆದರೂ ನಾನು ಬಿಜೆಪಿ ಬಿಡಲಿಲ್ಲ. ಆದರೆ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರಿಗೆ ಮೂರು ಬಾರಿ ಟಿಕೆಟ್ ಕೊಟ್ಟಿದ್ದರು. ಆದರೆ ಒಂದೇ ಸಲ ಟಿಕೆಟ್ ಸಿಗದ ಕಾರಣಕ್ಕೆ ಅವರು ಬೇರೆ ಪಕ್ಷಕ್ಕೆ ಹೋದರು. ಆದರೆ ನಾನು ಹಾಗಲ್ಲ. ನನಗೆ ಟಿಕೆಟ್ ನೀಡಲಿ ಬೀಡಲಿ ಬಿಜೆಪಿ ಬಿಡುವುದಿಲ್ಲ’ ಎಂದರು.

ಮಾಜಿ ಸಚಿವ ಸಿ.ಸಿ. ಪಾಟೀಲ ಮಾತನಾಡಿ, ‘ಗದಗ-ಹಾವೇರಿ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಅತೀ ಹೆಚ್ಚಿನ ಮತಗಳಿಂದ ಗೆಲ್ಲಿಸಲು ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ’ ಎಂದರು.

ಶಿರಹಟ್ಟಿ ಮಂಡಲದ ಬಿಜೆಪಿ ಅಧ್ಯಕ್ಷ ಸುನಿಲ ಮಹಾಂತಶೆಟ್ಟರ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಪ್ರವೀಣ ಬಾಳಿಕಾಯಿ ಮಾತನಾಡಿದರು. ಚಂಬಣ್ಣ ಬಾಳಿಕಾಯಿ, ಸೋಮಣ್ಣ ಡಾಣಗಲ್ಲ, ನೀಲಪ್ಪ ಹತ್ತಿ, ಎಂ.ಆರ್. ಪಾಟೀಲ, ನಾಗರಾಜ ಕುಲಕರ್ಣಿ, ಬಿಜೆಪಿ ಮುಖಂಡ ಪೂರ್ಣಾಜಿ ಖರಾಟೆ, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ, ರುದ್ರಪ್ಪ ಉಮಚಗಿ, ಜಾನು ಲಮಾಣಿ, ಶಂಕ್ರಣ್ಣ ಕಾಳೆ, ರಾಜು ಲಿಂಬಿಕಾಯಿ, ಶಿವನಗೌಡ ಕಂಠಿಗೌಡ್ರ, ಪ್ರಕಾಶ ಉಪನಾಳ, ಶಿವಾನಂದ ದೇಸಾಯಿ, ಅನಿಲ ಮುಳಗುಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.