ADVERTISEMENT

ಶೋಷಣೆ ಮುಕ್ತ ಸಮಾಜ ನಿರ್ಮಿಸೋಣ: ನ್ಯಾ.ನಾಗವೇಣಿ

ಕಾನೂನು ಸಾಕ್ಷರತಾ ಜಾಥಾ ಕಾರ್ಯಕ್ರಮ: ನ್ಯಾ.ನಾಗವೇಣಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 2:38 IST
Last Updated 5 ಫೆಬ್ರುವರಿ 2026, 2:38 IST
ಮುಂಡರಗಿ ತಾಲ್ಲೂಕಿನ ಡಂಬಳ ಗ್ರಾಮದ ತೋಂಟದಾರ್ಯ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಜಾಥಾಕ್ಕೆ ತೋಂಟದ ಸಿದ್ಧರಾಮ ಸ್ವಾಮೀಜಿ ಚಾಲನೆ ನೀಡಿದರು
ಮುಂಡರಗಿ ತಾಲ್ಲೂಕಿನ ಡಂಬಳ ಗ್ರಾಮದ ತೋಂಟದಾರ್ಯ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಜಾಥಾಕ್ಕೆ ತೋಂಟದ ಸಿದ್ಧರಾಮ ಸ್ವಾಮೀಜಿ ಚಾಲನೆ ನೀಡಿದರು   

ಮುಂಡರಗಿ: ‘ಕಾನೂನಿನ ಅರಿವಿಲ್ಲದ ಕಾರಣದಿಂದ ಸಮಾಜದಲ್ಲಿ ಕೆಲವು ಮುಗ್ಧರು ಶೋಷಣೆಗೆ ಒಳಗಾಗುತ್ತಿದ್ದಾರೆ. ಶೋಷಣೆ ಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಕಾನೂನು ಸಾಕ್ಷರತಾ ರಥ ಸಂಚರಿಸುತ್ತಿದ್ದು, ಅದರ ಮೂಲಕ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ಪ್ರಧಾನ ಜಿಲ್ಲಾ ಸೆಷನ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನಾಗವೇಣಿ ಹೇಳಿದರು.

ತಾಲ್ಲೂಕಿನ ತೋಂಟದಾರ್ಯ ಮದರ್ಧನಾರೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮತ್ತಿತರ ಇಲಾಖೆಗಳು ಮಂಗಳವಾರ ಡಂಬಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕಾನೂನು ಸಾಕ್ಷರತಾ ಜಾಥಾವು ಹಳ್ಳಿ ಹಳ್ಳಿಗಳಲ್ಲಿ ಸಂಚರಿಸಿ ಕಾನೂನು ಜಾಗೃತಿ ಮೂಡಿಸುವುದರ ಜೊತೆಗೆ ಕಾನೂನು ನೆರವು ನೀಡುತ್ತದೆ. ಜನತಾ ನ್ಯಾಯಾಲಯಗಳ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸುತ್ತಿದೆ’ ಎಂದು ತಿಳಿಸಿದರು.

ADVERTISEMENT

‘ಕಾನೂನು ಸೇವಾ ಪ್ರಾಧಿಕಾರದ ಮೂಲಕ ದೇಶದ ಶೇ80ರಷ್ಟು ಜನರು ಕಾನೂನು ಉಚಿತ ನೆರವು ಪಡೆಯಬಹುದಾಗಿದೆ. ಈ ಕುರಿತು ನಾವೆಲ್ಲ ಜನ ಸಾಮಾನ್ಯರಿಗೆ ಸೂಕ್ತ ಅರಿವು ಮೂಡಿಸಬೇಕಿದೆ. ಆ ಮೂಲಕ ಕಾನೂನು ತೊಡಕುಗಳಿಗೆ ಸಿಲುಕಿ ತೊಂದರೆ ಪಡುತ್ತಿರುವವರಿಗೆ ನೆರವಾಗಬೇಕಿದೆ’ ಎಂದು ಸಲಹೆ ನೀಡಿದರು.

ಗದುಗಿನ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ‘ಕಾನೂನು ತಿಳಿದುಕೊಳ್ಳಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆದರೆ ನಮ್ಮ ದೇಶ ಸ್ವಾತಂತ್ರ್ಯಗೊಂಡು ಎಂಟು ದಶಕ ಕಳೆದರೂ ನಮ್ಮಲ್ಲಿ ಶೇ 100ರಷ್ಟು ಸಾಕ್ಷರತೆ ಮೂಡದಿರುವುದು ದುರ್ದೈವದ ಸಂಗತಿ’ ಎಂದು ವಿಷಾದಿಸಿದರು.

‌ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ಮಾತನಾಡಿ, ‘ಕಾನೂನು ಸೇವಾ ಪ್ರಾಧಿಕಾರವು ಜನಸಾಮಾನ್ಯರಿಗೆ ಕಾನೂನು ಕುರಿತು ಹೆಚ್ಚಿನ ತಿಳಿವಳಿಕೆ ನೀಡುತ್ತಿದೆ. ಕಾನೂನು ತೊಡಕುಗಳಿಗೆ ಸಿಲುಕಿದವರಿಗೆ ಉಚಿತ ನೆರವು ನೀಡುವುದು ಹಾಗೂ ರಾಜಿ ಸಂಧಾನ ಮತ್ತು ಲೋಕ ಅದಾಲತ್ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡುತ್ತಿದೆ’ ಎಂದು ತಿಳಿಸಿದರು.

ಮುಂಡರಗಿ ಜೆ.ಎಂ.ಎಫ್.ಸಿ. ನ್ಯಾಯದೀಶೆ ಜ್ಯೋತಿ ಕಾಗಿನಕನ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆರ್.ಜಿ.ಕಲ್ಲೂರ, ಮುಖ್ಯ ಕಾನೂನು ನೆರವು ಅಭಿರಕ್ಷಕ ಎಸ್.ವಿ.ಗ್ರಾಮಪೂರೋಹಿತ, ಪಿಡಿಒ ಪಾರ್ವತಿ ಹೊಂಬಳ, ಡಿ.ವೈ.ಎಸ್.ಪಿ. ಪ್ರಭುಗೌಡ ಕಿರದಳ್ಳಿ, ಉಪತಹಶೀಲ್ದಾರ್ ಎಸ್.ಎಸ್.ಬಿಚ್ಚಾಲಿ, ಸಿಪಿಐ ಯಶವಂತ ಬಿಸನಳ್ಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪದ್ಮಾಮತಿ.ಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಲೀಲಾ ಬಂಡಿಹಾಳ, ಉಪಾಧ್ಯಕ್ಷೆ ಲಕ್ಷ್ಮವ್ವ ಕಾಶಭೋವಿ, ಜಾತ್ರಾ ಸಮಿತಿ ಅಧ್ಯಕ್ಷ ಯಲ್ಲಪ್ಪ ದಂಡಿನ, ಉರುಸು ಕಮಿಟಿ ಅಧ್ಯಕ್ಷ ಅಲ್ಲಿಸಾಬ ಮೂಲಿಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.