
ಗದಗ: ‘ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ಮುಂಗಾರು ಹಾಗೂ ಹಿಂಗಾರಿನ ಸಂದರ್ಭದಲ್ಲಿ ನಿರಂತರ ಮಳೆಗೆ ಸಿಲುಕಿರುವ ಮೆಕ್ಕೆಜೋಳ ಬೆಳೆದ ರೈತರು ಸಂಕಷ್ಟ ಎದುರಿಸುವಂತಾಗಿದೆ. ಸರ್ಕಾರ ತಕ್ಷಣವೇ ಬೆಂಬಲ ಬೆಲೆ ಘೋಷಣೆ ಮಾಡಿ, ಖರೀದಿ ಕೇಂದ್ರ ತೆರೆಯಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ಆಗ್ರಹಿಸಿದ್ದಾರೆ.
ತೇವಾಂಶ ಹೆಚ್ಚಳದಿಂದ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಕಂಡಿದ್ದು, ಕೈಗೆ ಬಂದ ಅಲ್ಪಸ್ವಲ್ಪ ಫಸಲಿಗೂ ಉತ್ತಮ ದರ ಸಿಗುತ್ತಿಲ್ಲ. ಹೆಚ್ಚಿನ ಆದಾಯ ನಿರೀಕ್ಷೆಯಲ್ಲಿದ್ದ ರೈತರಿಗೆ ಇದೀಗ ಮಾರುಕಟ್ಟೆಯಲ್ಲಿ ವೈಜ್ಞಾನಿಕ ಬೆಲೆ ಸಿಗದೇ ಇರುವ ಕಾರಣಕ್ಕೆ ನಿರಾಸೆಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ತಿಂಗಳಷ್ಟೇ ಮೆಕ್ಕೆಜೋಳದ ಬೆಲೆ ಕ್ವಿಂಟಲ್ಗೆ ₹2,400 ಇತ್ತು. ಸದ್ಯ ಮಾರುಕಟ್ಟೆಯಲ್ಲಿ ₹1,600 ಬೆಲೆ ಇದೆ. ಕಳೆದ ವರ್ಷ ಪ್ರತಿ ಕ್ವಿಂಟಲ್ಗೆ ₹2,600ರಿಂದ ₹2,800 ದರ ಇತ್ತು. ಈ ವರ್ಷ ದರ ಕುಸಿತದಿಂದ ರೈತರ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ ಎಂದು ತಿಳಿಸಿದ್ದಾರೆ.
‘ಒಂದು ಎಕರೆಯಲ್ಲಿ ಮೆಕ್ಕೆಜೋಳ ಬೆಳೆಯಬೇಕಾದರೆ ₹20 ಸಾವಿರದಿಂದ ₹30 ಸಾವಿರ ವೆಚ್ಚವಾಗುತ್ತದೆ. ಇದರಲ್ಲಿ ಬಿತ್ತನೆಬೀಜ, ಗೊಬ್ಬರ, ಕೀಟನಾಶಕ ಹಾಗೂ ಕೂಲಿ ಕಾರ್ಮಿಕರ ವೇತನ ಮತ್ತು ಕಾಳು ತೆಗೆಯುವ ವೆಚ್ಚ ಸೇರಿರುತ್ತದೆ. ಆದರೆ, ಪ್ರಸ್ತುತ ಮಾರುಕಟ್ಟೆಯ ದರ ಕುಸಿತದಿಂದ ರೈತರ ಶ್ರಮಕ್ಕೆ ತಕ್ಕಂತೆ ಪ್ರತಿಫಲ ಸಿಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ತಿಳಿಸಿದ್ದಾರೆ.
‘ಪ್ರತಿ ಬಾರಿ ರೈತರ ಫಸಲು ಮಾರುಕಟ್ಟೆಗೆ ಬರುತ್ತಿದ್ದಂತೆ ಖರೀದಿದಾರರು ದಿಢೀರ್ ಬೆಲೆ ಕಡಿಮೆ ಮಾಡುತ್ತಾರೆ. ಸಾಲ ಮಾಡಿ ಬೆಳೆ ಬೆಳೆದಿರುವ ರೈತರು ಸಾಲ ತೀರಿಸಿದರೆ ಸಾಕು ಎಂಬ ಹತಾಶೆಯಿಂದ ಸಿಕ್ಕಷ್ಟೇ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಆದಕಾರಣ, ಸರ್ಕಾರ ತಕ್ಷಣವೇ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಬೆಂಬಲ ಬೆಲೆ ಘೋಷಣೆ ಮಾಡಿ, ಖರೀದಿ ಕೇಂದ್ರ ತೆರೆಯಬೇಕು’ ಎಂದು ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ಎರಡು ವರ್ಷಗಳಿಂದ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಹಾಗಾಗಿ ಶಾಶ್ವತ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಬೇಕು. ಇದರಿಂದ ರೈತರಿಗೆ ದಲ್ಲಾಳಿಗಳಿಂದ ಆಗುವ ಅನ್ಯಾಯ ತಪ್ಪಲಿದೆಯಲ್ಲಪ್ಪ ಎಚ್. ಬಾಬರಿ ರೈತ ಮುಖಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.