
ಮುಂಡರಗಿ: ಪಟ್ಟಣದಲ್ಲಿ ಗೋವಿನಜೋಳ ಬೆಳೆ ಖರೀದಿ ಕೇಂದ್ರ ಪ್ರಾರಂಭ ಸೇರಿದಂತೆ ರೈತರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ವಿವಿಧ ರೈತ ಸಂಘಟನೆ ಕಾರ್ಯಕರ್ತರು ಶನಿವಾರ ಗ್ರೇಡ್-2 ತಹಶೀಲ್ದಾರ್ ಕೆ.ರಾಧಾ ಅವರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಕ್ವಿಂಟಲ್ ಗೋವಿನಜೋಳಕ್ಕೆ ₹2,400 ಬೆಂಬಲ ಬೆಲೆ ಘೋಷಿಸಿದೆ. ಆದರೆ, ಇಲ್ಲಿಯ ಮಾರುಕಟ್ಟೆಯಲ್ಲಿ ಕೇವಲ ₹1,200ರಿಂದ ₹1,500 ಬೆಲೆಗೆ ಮಾರಾಟವಾಗುತ್ತಿದ್ದು, ರೈತರಿಗೆ ನಷ್ಟ ಉಂಟಾಗುತ್ತಿದೆ. ಸರ್ಕಾರ ತಕ್ಷಣ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿದರು.
ತಾಲ್ಲೂಕಿನ ಗಂಗಾಪುರ ಗ್ರಾಮದ ವಿಜಯ ನಗರ ಶುಗರ್ಸ್ ಸಕ್ಕರೆ ಕಾರ್ಖಾನೆಯು ಕಳೆದ ವರ್ಷ ಕ್ವಿಂಟಲ್ ಗೋವಿನಜೋಳಕ್ಕೆ ₹2,800 ಬೆಲೆ ನೀಡಿದ್ದರು. ಈ ವರ್ಷ ಮಧ್ಯವರ್ತಿಗಳ ಮೂಲಕ ರೈತರ ಬೆಲೆ ಖರೀದಿಸುತ್ತಿದ್ದು, ರೈತರಿಗೆ ಕಡಿಮೆ ಬೆಲೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸದಿದ್ದಲ್ಲಿ ಅ.27ರಂದು ಸಕ್ಕರೆ ಕಾರ್ಖಾನೆ, ತಹಶೀಲ್ದಾರ್ ಕಚೇರಿ ಹಾಗೂ ಎಪಿಎಂಸಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುವುದು ಎಂದು ರೈತರು ಎಚ್ಚರಿಸಿದರು.
ಜಿಲ್ಲಾ ಹಸಿರು ಸೇನೆ ಅಧ್ಯಕ್ಷ ಶಂಕರಗೌಡ ಜಾಯನಗೌಡರ, ಕೆ.ಎ. ದೇಸಾಯಿ, ಚಂದ್ರಕಾಂತ ಉಳ್ಳಾಗಡ್ಡಿ, ಮುದಿಯಪ್ಪ ತಿಪ್ಪಣ್ಣವರ, ದ್ರುವಕುಮಾರ ಹೂಗಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.