ADVERTISEMENT

ಗದಗ| ಸರ್ಕಾರ ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲಿ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2025, 4:51 IST
Last Updated 12 ನವೆಂಬರ್ 2025, 4:51 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಗದಗ: ‘ರಾಜ್ಯ ಸರ್ಕಾರ ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ ರೈತರ ಬೇಡಿಕೆಯಂತೆ ಎಂಎಸ್‌ಪಿಗಿಂತ ಹೆಚ್ಚಿನ ಬೆಲೆಗೆ ಖರೀದಿ ಮಾಡಬೇಕು. ಇಲ್ಲದಿದ್ದರೆ ರೈತರು ಕಬ್ಬಿನ ದರಕ್ಕಾಗಿ ಮಾಡಿದ ರೀತಿ ಹೋರಾಟ ಅನಿವಾರ್ಯವಾಗಲಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

‘ರಾಜ್ಯದಲ್ಲಿ ಸುಮಾರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರು ಮೆಕ್ಕೆಜೋಳ ಬೆಳೆಯುತ್ತಾರೆ. ಪ್ರತಿ ವರ್ಷ ಮೆಕ್ಕೆಜೋಳ ಬೆಳೆಯುವ ಪ್ರದೇಶ ಹೆಚ್ಚಾಗುತ್ತಿದೆ. ಕಳೆದ ವರ್ಷ 54 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗಿತ್ತು. ಈ ವರ್ಷ ಕೂಡ 54 ಲಕ್ಷ ಟನ್ ಉತ್ಪಾದನೆಯಾಗಿದೆ. ಎರಡು ಲಕ್ಷ ಹೆಕ್ಟೇರ್ ಪ್ರದೇಶ ಹೆಚ್ಚಿಗೆ ಬಿತ್ತನೆಯಾದರೂ ಇಳುವರಿ ಅಷ್ಟೇ ಬಂದಿದೆ. ಸುಮಾರು 2 ಲಕ್ಷಕ್ಕಿಂತ ಹೆಚ್ಚು ಪ್ರದೇಶದಲ್ಲಿ ಗೋವಿನ ಜೋಳ ನಷ್ಟವಾಗಿದೆ. ಗೋವಿನ ಜೋಳ ನಷ್ಟ ಪರಿಹಾರ ನೀಡುವಲ್ಲಿ ಬಹಳಷ್ಟು ತಾರತಮ್ಯ ನಡೆಯುತ್ತಿದೆ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಸಮೀಕ್ಷೆ ಸರಿಯಾಗಿ ನಡೆಸಿಲ್ಲ. ಕೆಲವು ತಾಲ್ಲೂಕುಗಳಲ್ಲಿ ಬೆಳೆದಿರುವ ಒಟ್ಟು ಪ್ರದೇಶದಲ್ಲಿ ಶೇ 10ರಷ್ಟು ಮಾತ್ರ ನಷ್ಟ ಆಗಿದೆ ಎಂದು ಅತ್ಯಂತ ಅವೈಜ್ಞಾನಿಕ ಮತ್ತು ಸುಳ್ಳಿನಿಂದ ಕೂಡಿರುವ ಸರ್ವೆ ಮಾಡಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನಲ್ಲಿ ಸಮೀಕ್ಷೆ ನಡೆಸಿದರೂ ಒಂದು ಎಕರೆಯೂ ನಷ್ಟವಾಗಿಲ್ಲ ಎಂದು ವರದಿ ಕೊಟ್ಟಿದ್ದಾರೆ. ಈ ರೀತಿಯಾದರೆ ರೈತರಿಗೆ ಬಹಳಷ್ಟು ಅನ್ಯಾಯವಾಗುತ್ತದೆ. ₹2,400 ಎಂಎಸ್‌ಪಿ ಆಗಿದೆ, ಅದು ಸಾಲುವುದಿಲ್ಲ ಎಂದು ರೈತರು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಖರೀದಿ ಕೇಂದ್ರವನ್ನು ತೆರೆದು, ಖರೀದಿ ಪ್ರಾರಂಭಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಕೆಎಂಎಫ್‌ನವರು ಸುಮಾರು 2ರಿಂದ 2.5 ಲಕ್ಷ ಟನ್ ಬಳಕೆ ಮಾಡುತ್ತಾರೆ. ಅದನ್ನು ಖರೀದಿಸಲು ಆದೇಶ ಮಾಡಬೇಕು. ಅವರು ವ್ಯಾಪಾರಾಸ್ಥರ ಬಳಿ, ಏಜೆಂಟರ ಬಳಿ ಖರೀದಿ ಮಾಡುವ ಬದಲು ರೈತರ ಬಳಿ ಖರೀದಿಸಲು ಹೇಳಬೇಕು. ಅವರು 2.5 ಲಕ್ಷ ಟನ್ ಖರೀದಿ ಮಾಡಿದರೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗುತ್ತದೆ. ದರ ಹೆಚ್ಚಾಗುತ್ತದೆ. ಅದರ ಜತೆಗೆ ರಾಜ್ಯ ಸರ್ಕಾರವೂ ಖರೀದಿ ಪ್ರಾರಂಭ ಮಾಡಬೇಕು. ಇಲ್ಲದಿದ್ದರೆ ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಈಗಾಗಲೇ ರೈತರು ಧರಣಿ ಮಾಡಿ ಮನವಿ ಮಾಡಿದ್ದಾರೆ. ರೈತರ ಬೇಡಿಕೆಯಂತೆ ಎಂಎಸ್‌ಪಿಗಿಂತ ಹೆಚ್ಚಿನ ಬೆಲೆಗೆ ಗೋವಿನಜೋಳ ಖರೀದಿ ಮಾಡಬೇಕು ಎಂದು ಆಗ್ರಹಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.