
ಗದಗ: ‘ಮಲ್ಲಕಂಬ ನಮ್ಮ ದೇಶದ ಪ್ರಾಚೀನ ಕ್ರೀಡೆ. ಆದರೆ, ಇಲ್ಲೀವರೆಗೆ ಈ ಕ್ರೀಡೆ ಏಷ್ಯನ್ ಗೇಮ್ಸ್ ಅಥವಾ ಒಲಿಂಪಿಕ್ಸ್ಗೆ ಸೇರ್ಪಡೆಯಾಗಿಲ್ಲ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ಸರ್ಕಾರ, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
‘ನಮ್ಮ ದೇಶದಲ್ಲಿ ಕ್ರಿಕೆಟ್, ಫುಟ್ಬಾಲ್ಗಿಂತ ಬೇರೆ ಯಾವುದೇ ಕ್ರೀಡೆ ಮುನ್ನಲೆಗೆ ಬರದಿರುವುದು ಬೇಸರದ ವಿಷಯ. ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಆದನಂತರ ಕ್ರೀಡೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಖೇಲೋ ಇಂಡಿಯಾ ಸ್ಥಾಪಿಸಿ, ಅದಕ್ಕೆ ಮಲ್ಲಕಂಬವನ್ನೂ ಜೋಡಿಸಲಾಗಿದೆ. ಹಾಗಾಗಿ, ಈ ಕ್ರೀಡೆಯನ್ನು ಇನ್ನೂ ಜನಪ್ರಿಯಗೊಳಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕಿದೆ’ ಎಂದರು.
‘ರಾಜ್ಯದಲ್ಲಿ 35 ಶೈಕ್ಷಣಿಕ ಜಿಲ್ಲೆಗಳಿದ್ದು, ಮಲ್ಲಕಂಬ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ 20 ಜಿಲ್ಲೆಯ ಕ್ರೀಡಾಪಟುಗಳು ಮಾತ್ರ ಭಾಗವಹಿಸಿದ್ದಾರೆ. ಶಾಲಾ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಇಲ್ಲದ ಕಾರಣ ಈ ಕ್ರೀಡೆ ರಾಜ್ಯದೆಲ್ಲೆಡೆ ಪ್ರಚಲಿತಕ್ಕೆ ಬಂದಿಲ್ಲ’ ಎಂದರು.
ಡಿಡಿಪಿಐ ಆರ್.ಎಸ್.ಬುರಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎ.ಯರಗುಡಿ ನಿರೂಪಿಸಿದರು. ಬಿಇಒ ವಿ.ವಿ.ನಡುವಿನಮನಿ ವಂದಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಳ್ಳಾರಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಫ್. ಪೂಜಾರ, ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಎಂ.ಕೆ. ಲಮಾಣಿ, ಕೊಡ್ಲಿ, ಪ್ರಕಾಶ ಮ್ಯಾಗೇರಿ, ಸಿ.ಕೆ. ಚೆನ್ನಾಳ, ಶರಣು ಗೋಗೇರಿ, ಎಸ್.ಎನ್. ಬಳ್ಳಾರಿ ಇದ್ದರು.
ಮಲ್ಲಕಂಬ ಶ್ರೇಷ್ಠ ಕ್ರೀಡೆ. ಇದು ಭಾರತದ ಪ್ರಾಚೀನ ಕ್ರೀಡೆಯಾಗಿದ್ದು ಇತ್ತೀಚಿನ ದಿನಗಳಲ್ಲಿ ವಿಶೇಷ ಮಹತ್ವ ಪಡೆದುಕೊಳ್ಳುತ್ತಿದೆ
- ಎಚ್.ಕೆ. ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ
ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸಲು ಶಾಲಾ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಇರಬೇಕು. ಆದರೆ ಕಳೆದ 15 ವರ್ಷಗಳಿಂದ ರಾಜ್ಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯೇ ನಡೆದಿಲ್ಲ
- ಎಸ್.ವಿ. ಸಂಕನೂರ ವಿಧಾನ ಪರಿಷತ್ ಸದಸ್ಯ
ಮಲ್ಲಕಂಬ ರೋಮಾಂಚನಕಾರಿ ಕ್ರೀಡೆ ‘
ಮಲ್ಲಕಂಬ ರೋಮಾಂಚನಕಾರಿ ಕ್ರೀಡೆ. ದೈಹಿಕ ಮತ್ತು ಮಾನಸಿಕ ಸಮತೋಲನದಿಂದ ಕೂಡಿರುವ ಈ ಕ್ರೀಡೆಯನ್ನು ಅಭ್ಯಾಸ ಮಾಡುವುದರಿಂದ ಮಕ್ಕಳಲ್ಲಿ ಆತ್ಮಸ್ಥರ್ಯ ಮೂಡುತ್ತದೆ’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು. ‘ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಬೆಳೆಸುವ ಮಲ್ಲಕಂಬದಂತಹ ಕ್ರೀಡೆ ಇನ್ನೂ ಜನಪ್ರಿಯಗೊಳ್ಳಬೇಕಿದ್ದು ಈ ನಿಟ್ಟಿನಲ್ಲಿ ಮಲ್ಲಕಂಬ ಪಠ್ಯದ ಒಂದು ಭಾಗವಾಗಬೇಕಿದೆ’ ಎಂದರು. ‘ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆಯಲ್ಲಿ 20 ಜಿಲ್ಲೆಗಳ 310 ಮಂದಿ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಸೋಲು ಗೆಲುವು ಮುಖ್ಯವಲ್ಲ. ಕ್ರೀಡೆಯಲ್ಲಿ ಕ್ರೀಡಾಮನೋಭಾವದಿಂದ ಭಾಗವಹಿಸುವುದು ಮುಖ್ಯ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.