ADVERTISEMENT

ಗಮನ ಸೆಳೆದ ‘ಮಾಸ್ಕ್’ ಜಾಥಾ

ಜಿಲ್ಲೆಯಲ್ಲಿ ಕೊರೊನಾ ಹತೋಟಿ: ಸಂಸದ ಡಾ.ಉಮೇಶ ಜಾಧವ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 15:11 IST
Last Updated 18 ಜೂನ್ 2020, 15:11 IST
‘ಮಾಸ್ಕ್‌ ದಿನಾಚರಣೆ’ ಅಂಗವಾಗಿ ಕಲಬುರ್ಗಿಯಲ್ಲಿ ಗುರುವಾರ ನಡೆದ ಜಾಗೃತಿ ಜಾಥಾದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಲ್ಗೊಂಡರು
‘ಮಾಸ್ಕ್‌ ದಿನಾಚರಣೆ’ ಅಂಗವಾಗಿ ಕಲಬುರ್ಗಿಯಲ್ಲಿ ಗುರುವಾರ ನಡೆದ ಜಾಗೃತಿ ಜಾಥಾದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಲ್ಗೊಂಡರು   

ಕಲಬುರ್ಗಿ: ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಮಾಸ್ಕ್ ದಿನಾಚರಣೆ‘ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಸಂಸದ ಡಾ.ಉಮೇಶ ಜಾಧವ ಚಾಲನೆ ನೀಡಿದರು. ಜಾಥಾದಲ್ಲಿ ಭಾಗವಹಿಸಿದ ಜಿಮ್ಸ್ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಆವರಣ ಪ್ರವೇಶಿಸುತ್ತಿದ್ದಂತೆ ಮಾನವ ರಿಂಗ್‌ ಏರ್ಪಡಿಸಿ ಕೈಯಲ್ಲಿ ಭಿತ್ತಿ ಪತ್ರ ಹಿಡಿದು ಅರಿವು ಮೂಡಿಸಿದರು. ಮಾಸ್ಕ್ ಇಲ್ಲದೇ ರಸ್ತೆ ಮೇಲೆ ಓಡಾಡುತ್ತಿದ್ದ ಜನರಿಗೆ ಸ್ಥಳದಲ್ಲಿಯೇ ಮಾಸ್ಕ್‌ ನೀಡಿ ತಿಳಿ ಹೇಳಿದರು.

ಈ ವೇಳೆ ಮಾತನಾಡಿದ ಸಂಸದ ಡಾ.ಉಮೇಶ ಜಾಧವ, ‘ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದರಿಂದ ಕೊರೊನಾ ಸೋಂಕಿನಿಂದ ಶೇಕಡ 75ರಷ್ಟು ರಕ್ಷಣೆ ಪಡೆಯಬಹುದು. ಮುಂದಿನ ಆರು ತಿಂಗಳು ಕೊರೊನಾ ವಿರುದ್ಧ ನಮ್ಮ ಹೋರಾಟ ನಿರಂತರ ನಡೆಯಬೇಕು’ ಎಂದರು.

ADVERTISEMENT

‘ಸೋಂಕಿಗೆ ಭಯಪಟ್ಟು ಮನೆಯಲ್ಲಿ ಕುಳಿತುಕೊಳ್ಳುವ ಸಮಯ ಇದಲ್ಲ. ಬದಲಾಗಿ ಎಚ್ಚರಿಕೆ ಮತ್ತು ಸುರಕ್ಷತಾ ಕ್ರಮವಹಿಸಿ ಆರ್ಥಿಕ ಚೇತರಿಕೆ ಕಾಣಬೇಕಾಗಿದೆ. ದೇಶದಲ್ಲಿ ಸೋಂಕಿನಿಂದ ಮರಣ ಪ್ರಮಾಣ ಕಡಿಮೆ ಇದೆ. ಜಿಲ್ಲೆಯಲ್ಲಿಯೂ ಹತೋಟಿಯಲ್ಲಿದೆ. ಜನ ಭಯ ಪಡಬೇಕಿಲ್ಲ’ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಮಾಲಾಜಿ, ನಗರ ಪೊಲೀಸ್ ಆಯುಕ್ತ ಎನ್.ಸತೀಷಕುಮಾರ, ಡಿಸಿಪಿ ಕಿಶೋರ ಬಾಬು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎ.ಜಬ್ಬಾರ್, ಜಾಥಾದಲ್ಲಿ ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಫಿಯುದ್ದಿನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕಕರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವೆಂಟರಾವ ಇಟಗಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು, ಅರೋಗ್ಯ ಇಲಾಖೆಯ ಸಿಬ್ಬಂದಿ ಜಾಥಾದಲ್ಲಿ ಸಾಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.