ADVERTISEMENT

ಉಪಚುನಾವಣೆಯಲ್ಲಿ ಗೆಲುವು ನಮ್ಮದೇ; ಸಚಿವ ಜಗದೀಶ್‌ ಶೆಟ್ಟರ್‌ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2020, 15:20 IST
Last Updated 17 ಅಕ್ಟೋಬರ್ 2020, 15:20 IST
ಜಗದೀಶ್‌ ಶೆಟ್ಟರ್‌
ಜಗದೀಶ್‌ ಶೆಟ್ಟರ್‌   

ಗದಗ: ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ನೂರಕ್ಕೆ ನೂರರಷ್ಟು ಗೆಲುವು ಸಾಧಿಸಲಿದೆ. ನಮ್ಮ ಪಕ್ಷದ ಅಭ್ಯರ್ಥಿಗಳು ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಚಿವ ಜಗದೀಶ್‌ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದರು.

ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್‌.ವಿ.ಸಂಕನೂರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಶನಿವಾರ ಗದಗಕ್ಕೆ ಭೇಟಿ ನೀಡಿದ ಸಂದರ್ಭ, ಅವರು ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದರು.

‘ಉಪ ಚುನಾವಣೆ ಜತೆಗೆ ಎರಡು ಶಿಕ್ಷಕರ ಕ್ಷೇತ್ರ ಮತ್ತು ಎರಡು ಪದವೀಧರ ಕ್ಷೇತ್ರದ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ವಿಧಾನ ಪರಿಷತ್‌ ಚುನಾವಣೆ ಸಂಬಂಧವಾಗಿ ಗದಗ, ಹಾವೇರಿ, ಕಾರವಾರ ಮತ್ತು ಧಾರವಾಡ ಜಿಲ್ಲೆಗಳ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಗದಗ ಜಿಲ್ಲೆಯಲ್ಲಿ ಶನಿವಾರ ನಡೆದ ನಾಲ್ಕೈದು ಸಭೆಯಲ್ಲಿ ಭಾಗವಹಿಸಿದ್ದೆ. ಕೊರೊನಾ ಇರುವುದರಿಂದ ಸಭೆಗಳಿಗೆ ಮತದಾರರು ಬರುತ್ತಾರೋ ಇಲ್ಲವೋ ಎಂಬ ಬಗ್ಗೆ ಅನುಮಾನ ಇತ್ತು. ಆದರೆ, ನಾನು ಭಾಗವಹಿಸಿದ ಎಲ್ಲ ಸಭೆಗಳಿಗೂ ನೂರರಿಂದ ಇನ್ನೂರು ಮತದಾರರು ಬಂದಿದ್ದಾರೆ. ಇದನ್ನು ನೋಡಿದಾಗ ಬಿಜೆಪಿ ಪರವಾದ ಅಲೆ ಇದೆ ಎಂಬುದು ತಿಳಿಯತ್ತದೆ’ ಎಂದು ಅವರು ಹೇಳಿದರು.

ADVERTISEMENT

‘ಕಳೆದ ವರ್ಷದ ಪ್ರವಾಹ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಅತಿಹೆಚ್ಚು ಪರಿಹಾರ ನೀಡಿದೆ. ಈ ವರ್ಷವೂ ಪ್ರವಾಹ ಸಂತ್ರಸ್ತರಿಗೆ ನೆರವು ನೀಡುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸುತ್ತಿದ್ದಾರೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.