ಗದಗ: ‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಿಸುವ ವಿಷಯದಲ್ಲಿ ಸರ್ಕಾರ ಮತ್ತು ಸಮಾಜದ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತೇನೆ. ಆದ್ದರಿಂದ ಯಾವುದೇ ಕಾರಣಕ್ಕೂ ಸತ್ಯಾಗ್ರಹಕ್ಕೆ ಮುಂದಾಗಬಾರದು’ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಮನವಿ ಮಾಡಿದರು.
ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಭಾನುವಾರ ನಡೆದ ಪಂಚಮಸಾಲಿ 2ಎ ಮೀಸಲಾತಿ ಹಕ್ಕೊತ್ತಾಯಿಸಿ ಪ್ರತಿಜ್ಞಾ ಪಂಚಾಯತ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಮೀಸಲಾತಿ ಕುರಿತು ಇಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಅನೇಕ ಸಲ ಚರ್ಚೆ ನಡೆಸಲಾಗಿದ್ದು, ಅವರಿಗೂ ಈ ಎಲ್ಲ ವಿಷಯಗಳ ಸಂಪೂರ್ಣ ಅರಿವಿದೆ. ಅನ್ಯ ಜಾತಿಯವರಿಗೆ ಅನ್ಯಾಯವಾಗದಂತೆ ಸಮಾಜಕ್ಕೆ ನ್ಯಾಯ ಕೊಡಿಸುವ ಕಾರ್ಯ ಮಾಡುತ್ತೇನೆ ಎಂದಿದ್ದಾರೆ’ ಎಂದು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಸರ್ಕಾರ ಕೇಳಿದ್ದ ಆರು ತಿಂಗಳ ಗಡುವು ಸೆ.15ಕ್ಕೆ ಪೂರ್ಣಗೊಂಡಿದ್ದು, ಅಕ್ಟೋಬರ್ 1ರಿಂದ ಮತ್ತೆ ಸತ್ಯಾಗ್ರಹ ನಡೆಸಲು ಚಿಂತಿಸಲಾಗಿದೆ. ಆದರೆ, ಸತ್ಯಾಗ್ರಹ ಮಾಡಬಾರದು ಎಂದು ಸರ್ಕಾರದ ಭಾಗವಾಗಿರುವ ಸಮಾಜದ ಮುಖಂಡ ಸಿ.ಸಿ.ಪಾಟೀಲ ಮನವಿ ಮಾಡಿಕೊಂಡಿದ್ದರಿಂದ ಈ ಕುರಿತು ಹಿರಿಯರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.