ಗದಗ: ‘ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದಾಗಿನಿಂದ ಈವರೆಗೆ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಕೇವಲ ಊಹಾಪೋಹಗಳಿಗೆ ಕಿವಿಗೊಡುವುದು ಬೇಡ. ಮುಂದಿನ ಎರಡು ವರ್ಷ ಅವರೇ ಸಿಎಂ ಆಗಿರುತ್ತಾರೆ. ಜತೆಗೆ ಮುಂದಿನ ಚುನಾವಣೆಯನ್ನೂ ಅವರ ನೇತೃತ್ವದಲ್ಲೇ ಎದುರಿಸುತ್ತೇವೆ’ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಅವರು ಮಾತನಾಡಿ, ‘ಕೋವಿಡ್ ಬಿಕ್ಕಟ್ಟಿನಂತಹ ಪರಿಸ್ಥಿತಿಯಲ್ಲಿ ಕೆಲವೊಂದು ವಿಚಾರಗಳಿಂದ ಮುಖ್ಯಮಂತ್ರಿಗೆ ಬೇಜಾರು ಆಗಿದೆ. ಈ ಕಾರಣದಿಂದ ಅವರು ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ಕೊಡುವುದಾಗಿ ಹೇಳಿದ್ದಾರೆ. ಮನೆ ಅಂದ ಮೇಲೆ ಸಣ್ಣ ಪುಟ್ಟ ಮುನಿಸುಗಳ ಸಹಜ. ಕಾಲಕ್ರಮೇಣ ಅವು ಸರಿಹೋಗುತ್ತದ’ ಎಂದು ಹೇಳಿದರು.
ಸಹಿ ಸಂಗ್ರಹಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಸಹಿ ಸಂಗ್ರಹಣೆ ಕುರಿತು ನನಗೆ ಮಾಹಿತಿ ಇಲ್ಲ. ನಾನು ಯಾವುದಕ್ಕೂ ಸಹಿ ಮಾಡಿಲ್ಲ’ ಎಂದು ಹೇಳಿದರು.
‘ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ಧತೆ ನಡೆದಿದೆ. ರಾಜ್ಯದ ಸರ್ಕಾರ ಆಸ್ಪತ್ರೆಗಳಲ್ಲಿ ಚಿಕ್ಕಮಕ್ಕಳ ತಜ್ಞ ಕೊರತೆ ಇದೆ. ಈ ವಿಚಾರವಾಗಿ ಸಿಎಂ, ಆರೋಗ್ಯ ಸಚಿವರ ಬಳಿ ಚರ್ಚಿಸಿದ್ದೇವೆ. ಮೂರನೇ ಅಲೆಯ ಸಂದರ್ಭದಲ್ಲಿ ಖಾಸಗಿ ತಜ್ಞ ವೈದ್ಯರನ್ನು ಬಳಕೆ ಮಾಡಿಕೊಳ್ಳುವ ಯೋಚನೆ ಇದೆ. ಜತೆಗೆ ಸರ್ಕಾರಿ ಆಸ್ಪತ್ರೆಗಳಿಗೆ ಮಕ್ಕಳ ತಜ್ಞರನ್ನು ನೇಮಕ ಮಾಡಲು ಆರೋಗ್ಯ ಸಚಿವರು ಕ್ರಮ ವಹಿಸಲಿದ್ದಾರೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.