ಗದಗ: ಮಲಪ್ರಭಾ ಜಲಾಶಯದ ಮಟ್ಟ 2,070 ಅಡಿಗೆ ತಲುಪಿದ ತಕ್ಷಣ ನದಿ ಹಾಗೂ ಕಾಲುವೆಗಳಿಗೆ ನೀರು ಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಸಿ.ಪಾಟೀಲ ಅವರು ಬೆಳಗಾವಿ ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ.
ಕೆಲವು ದಿನಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಯಾವುದೇ ಸಂದರ್ಭದಲ್ಲಾದರೂ ಮಲಪ್ರಭಾ ಜಲಾಶಯ ಭರ್ತಿ ಆಗುವ ಲಕ್ಷಣವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಅವರು ಪತ್ರ ಬರೆದಿದ್ದಾರೆ.
‘ಗದಗ ಜಿಲ್ಲೆಯ ನರಗುಂದ ಭಾಗದಲ್ಲಿ ಕಳೆದ ವರ್ಷ ಸಂಭವಿಸಿದ ಪ್ರವಾಹ ಸಂದರ್ಭದಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅಪಾರ ಅನುಭವವಿದೆ. ಹೀಗಾಗಿ ನೆರೆಯ ಭೀಕರತೆ, ಹಾನಿ ಮತ್ತು ಜನಸಾಮಾನ್ಯರಿಗೆ ಅದರಿಂದ ಉಂಟಾಗುವ ತೊಂದರೆಗಳ ಸಂಪೂರ್ಣ ಪರಿಕಲ್ಪನೆ ನಿಮಗಿದೆ. ಅಲ್ಲದೇ, ಕೋವಿಡ್-19 ಸೋಂಕಿನ ತೀವ್ರತೆಯ ಸಮಯದಲ್ಲಿ ಪ್ರವಾಹ ಬಂದರೆ, ಅಧಿಕಾರಿಗಳಿಗೆ ಪ್ರವಾಹದ ಸಂದಿಗ್ಧ ಪರಿಸ್ಥಿತಿ ಎದುರಿಸುವುದು ತುಂಬಾ ಕಷ್ಟವಾಗುತ್ತದೆ. ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಬೇಕು’ ಎಂದು ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.