ಮುಂಡರಗಿ: ‘ಇತ್ತೀಚಿನ ದಿನಗಳಲ್ಲಿ ಹಲವು ಕಾಯಿಲೆಗಳು ತೀವ್ರವಾಗಿ ಹರಡುತಿದ್ದು, ಅವುಗಳ ವಿರುದ್ಧ ಹೋರಾಡಬೇಕಿದೆ. ಕುಟುಂಬದ ಆರೋಗ್ಯದ ಜೊತೆಗೆ ಸಮುದಾಯದ ಆರೋಗ್ಯಕ್ಕೂ ಮಹತ್ವ ನೀಡಬೇಕು’ ಎಂದು ಹಿರಿಯ ವೈದ್ಯ ಅನ್ನದಾನಿ ಮೇಟಿ ತಿಳಿಸಿದರು.
ಇಲ್ಲಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆಡಳಿತಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಮಲೇರಿಯಾ ಮಾಸಾಚರಣೆಯಲ್ಲಿ ಅವರು ಮಾತನಾಡಿದರು.
ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಹೆಚ್.ಎಲ್.ಗಿರಡ್ಡಿ ಮಾತನಾಡಿ, ‘ಸಾರ್ವಜನಿಕರಿಗೆ ವಿಶೇಷ ಆರೋಗ್ಯ ಸೇವೆ ನೀಡುವುದರ ಜೊತೆಗೆ ಕೇಂದ್ರ ಸರ್ಕಾರವು ಮಲೇರಿಯಾ ನಿರ್ಮೂಲನೆ ಮಾಡಲು ಪ್ರಯತ್ನಿಸುತ್ತಿದೆ. ನಾವು ಸರ್ಕಾರದ ಕೆಲಸಗಳಿಗೆ ಕೈಜೋಡಿಸಬೇಕು’ ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಲಕ್ಷ್ಮಣ ಪೂಜಾರ ಮಾತನಾಡಿ, ‘ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ಸಿಬ್ಬಂದಿ ಮಲೇರಿಯಾ ರೋಗ ನಿಯಂತ್ರಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಮಲೇರಿಯಾ ರೋಗ ನಿರ್ಮೂಲನೆಗೆ ಸಹಕರಿಸಬೇಕು’ ಎಂದರು.
ಡಾ.ಚಂದ್ರಕಾಂತ ಇಟಗಿ, ಅನ್ನಪೂರ್ಣ ಶೆಟ್ಟರ ಮಾತನಾಡಿದರು. ರೇಶ್ಮಾ ಹುಬ್ಬಳ್ಳಿ, ಎಸ್.ಎಲ್.ಕೋರಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎಸ್.ಸಜ್ಜನರ, ಪಿ.ವಿ.ಬಿದರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.