
ನರಗುಂದ: ‘ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರು ಬೆಳೆ ಖರೀದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿ ಒಂದು ತಿಂಗಳು ಕಳೆದರೂ ಖರೀದಿ ಕೇಂದ್ರ ಆರಂಭಗೊಂಡಿಲ್ಲ. ಇದರಿಂದ ರೈತರಿಗೆ ತೀವ್ರ ಅನ್ಯಾಯವಾಗುತ್ತಿದೆ’ ಎಂದು ರೈತ ಸೇನಾ ಮುಖಂಡ ವೀರಬಸಪ್ಪ ಹೂಗಾರ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಮಹದಾಯಿ, ಕಳಸಾಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಭಾನುವಾರ ನಡೆದ ಧರಣಿಯಲ್ಲಿ ಮಾತನಾಡಿದ ಅವರು, ‘ಮುಂಗಾರು ಹಂಗಾಮಿನಲ್ಲಿ ರೈತರ ಬೆಳೆದ ಹೆಸರು ಬೆಳೆಗೆ ಮಾರುಕಟ್ಟೆಯಲ್ಲಿ ಯೋಗ್ಯ ಬೆಲೆಯಿಲ್ಲ. ಅಧಿಕಾರಿಗಳು ಶೀಘ್ರವೇ ಹೆಸರು ಬೆಳೆ ಖರೀದಿ ಕೇಂದ್ರ ಆರಂಭಿಸಬೇಕು’ ಎಂದರು.
ರಾಜ್ಯ ಸರ್ಕಾರ ಸೆಪ್ಟೆಂಬರ್ 26ರಂದು ಹೆಸರು ಬೆಳೆ ನೋಂದಣಿ, ಖರೀದಿ ಪ್ರಕ್ರಿಯೆ ಆರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶ ನೀಡಿತ್ತು. ಜಿಲ್ಲಾಧಿಕಾರಿಗಳ ಮೂಲಕ ಪಟ್ಟಣ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳ ಸಹಕಾರಿ ಸಂಘಗಳಲ್ಲಿ ಖರೀದಿ ಕೇಂದ್ರ ಗುರುತಿಸಲಾಗಿದ್ದು, ಕೆಲವೆಡೆ ಮಾತ್ರ ನೋಂದಣಿ ಪ್ರಕ್ರಿಯೆ ನಡೆಸಿದ್ದು, ಖರೀದಿ ಆರಂಭಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್.ಬಿ. ಜೋಗಣ್ಣವರ, ಸಿ.ಎಸ್. ಪಾಟೀಲ, ಸುಭಾಸ ಗಿರಿಯಣ್ಣವರ, ಹನಮಂತ ಸರನಾಯ್ಕರ, ಪರಮೇಶ ಅಣ್ಣಿಗೇರಿ, ಸೋಮಲಿಂಗಪ್ಪ ಆಯಟ್ಟಿ, ಫಕೀರಪ್ಪ ಅಣ್ಣಿಗೇರಿ, ಅರ್ಜುನ ಮಾನೆ, ಯಲ್ಲಪ್ಪ ಚಲವಣ್ಣವರ, ವಾಸು ಚವ್ಹಾಣ ಇದ್ದರು.
ಹೆಸರು ಖರೀದಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಆದೇಶ ನೀಡಿದರೂ ಪ್ರಕ್ರಿಯೆ ಆರಂಭಿಸಿಲ್ಲ. ಕೂಡಲೇ ಹೆಸರು ಖರೀದಿ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಪ್ರತ್ಯೇಕ ಹೋರಾಟ ನಡೆಸಲಾಗುವುದುವೀರಬಸಪ್ಪ ಹೂಗಾರ ರೈತ ಸೇನಾ ಮುಖಂಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.