
ಗದಗ: ‘ಕೃಷಿ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಸಂಸ್ಥೆಗಳು ಮಹತ್ವದ ಪಾತ್ರ ವಹಿಸಬೇಕಿದೆ’ ಎಂದು ಪ್ರಭಾರ ಕುಲಪತಿ ಪ್ರೊ. ಸುರೇಶ ವಿ.ನಾಡಗೌಡರ ಹೇಳಿದರು.
ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ರೈತರು ದೇಶದ ಆಹಾರ ಭದ್ರತೆ ಮತ್ತು ಆರ್ಥಿಕ ಸ್ಥಿರತೆಗೆ ಬೆನ್ನೆಲುಬಾಗಿದ್ದಾರೆ. ರೈತರ ಶ್ರಮ ಮತ್ತು ಸಮರ್ಪಣೆಯನ್ನು ಗೌರವಿಸುವುದು ಸಮಾಜದ ಕರ್ತವ್ಯವಾಗಿದೆ’ ಎಂದರು.
ಗದಗ ಜಿಲ್ಲಾ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಭಾವಗೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಎಚ್.ವೈ.ಹೊನ್ನಿನಾಯ್ಕರ್ ಮಾತನಾಡಿ, ‘ರೈತರು ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆದಾಯವೃದ್ಧಿಗೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.
ಜತೆಗೆ ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ನಾವೀನ್ಯತೆ, ಮೌಲ್ಯವರ್ಧನೆ, ಪಶುಸಂಗೋಪನೆ ಹಾಗೂ ಸಮಗ್ರ ಕೃಷಿ ಪದ್ಧತಿಯ ಅಗತ್ಯತೆ ಕುರಿತು ವಿವರಿಸಿದರು.
ಇದೇ ಸಂದರ್ಭದಲ್ಲಿ ರೈತ ಸ್ನೇಹಿ ನೀತಿಗಳು, ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ಮೂಲಕ ಗ್ರಾಮೀಣ ಅಭಿವೃದ್ಧಿ ಸಾಧಿಸುವ ಕುರಿತು ಚರ್ಚೆ ನಡೆಯಿತು.
ಕೊಪ್ಪಳ ಜಿಲ್ಲೆಯ ಪ್ರಗತಿಪರ ರೈತ ಬಸಯ್ಯ ಹಿರೇಮಠ ಅವರು ಸತತ ಕೃಷಿ, ಹವಾಮಾನ ಬದಲಾವಣೆಯ ಸವಾಲುಗಳು, ಜೈವಿಕ ಕೃಷಿ ಹಾಗೂ ರೈತರ ಜೀವನಮಟ್ಟ ಸುಧಾರಣೆ ಕುರಿತು ತಮ್ಮ ಅನುಭವ ಆಧಾರಿತ ವಿಚಾರಗಳನ್ನು ಹಂಚಿಕೊಂಡರು.
ಫ್ಯೂಚರ್ ಗ್ರೀನ್ ಸಂಸ್ಥೆಯ ಬಿ. ಆರ್. ಅಥಣಿ, ರೇಷ್ಮೆ ವಿಸ್ತರಣಾ ಅಧಿಕಾರಿ ಪವಿತ್ರಾ ವಗ್ಗನ್ನವರ, ಹಣಕಾಸು ಅಧಿಕಾರಿ ಪ್ರಶಾಂತ್ ಜಿ.ಸಿ., ಉಡಚಪ್ಪ ಪೂಜಾರ್, ಲಿಂಗರಾಜ್ ನಿಡುವಣಿ, ಆನಂದಗೌಡ ಫಕೀರಗೌಡರ ಹಾಗೂ ವಿಶ್ವವಿದ್ಯಾಲಯದ ಅಧ್ಯಾಪಕರು, ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ರೈತರು ಭಾಗವಹಿಸಿದ್ದರು.
ವಿದ್ಯಾರ್ಥಿನಿ ಶ್ರವಣ ಬೇವೂರ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.