ಲಕ್ಷ್ಮೇಶ್ವರ: ಶಾಲೆ ಪ್ರಾರಂಭೋತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಮುಖ್ಯ ಶಿಕ್ಷಕರು, ಸಹಶಿಕ್ಷಕರು ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಬಿಇಒ ಎಚ್.ಎನ್. ನಾಯಕ ಹೇಳಿದರು.
ಪಟ್ಟಣದ ಬಿಸಿಎನ್ ಸ್ಪೆಕ್ಟ್ರಮ್ ಶಾಲೆಯ ಸಭಾಂಗಣದಲ್ಲಿ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲ್ಲೂಕುಗಳ ಸರ್ಕಾರಿ, ಅನುದಾನಿತ, ಅನುದಾನರಹಿತ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ಮೇ 29ರಿಂದ ಶಾಲೆಗಳು ಪ್ರಾರಂಭವಾಗಲಿದ್ದು, ಶಾಲೆ ಆರಂಭಕ್ಕೆ ಮಕ್ಕಳನ್ನು ಅದ್ದೂರಿಯಾಗಿ ಸ್ವಾಗತಿಸೋಣ. ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಎನ್ನುವ ನಿಟ್ಟಿನಲ್ಲಿ ಪ್ರತಿಯೊಂದು ಶಾಲೆಯ ಮೂಲ ಸೌಲಭ್ಯಗಳಾದ ಶೌಚಾಲಯ, ಕುಡಿಯುವ ನೀರು ಮತ್ತು ಸ್ವಚ್ಛತೆ ಬಗ್ಗೆ ಕ್ರಮ ವಹಿಸಬೇಕು. ಸಮವಸ್ತ್ರ, ಪಠ್ಯ ಪುಸ್ತಕ, ಶೂ ವಿತರಣೆಯಲ್ಲಿ ಕಾಳಜಿ ವಹಿಸಬೇಕು. ಶೌಚಾಲಯ ನಿರ್ವಹಣೆಗೆ ಕ್ರಮವಹಿಸಿ, ಅಲಕ್ಷ್ಯ ವಹಿಸಿದರೆ ಸಂಬಂಧಿಸಿದವರನ್ನು ಹೊಣೆಗಾರನ್ನಾಗಿ ಮಾಡಲಾಗುವುದು’ ಎಂದು ಎಚ್ಚರಿಸದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಶಾಲೆಗಳ ಸುಧಾರಣೆ ಬಗ್ಗೆ ವಿಶೇಷ ಆದ್ಯತೆ ನೀಡಿದ್ದಾರೆ. ದೆಹಲಿ ಮಾದರಿಯಲ್ಲಿ ಸರ್ಕಾರಿ ಶಾಲೆಗಳ ಸುಧಾರಣೆಗೆ ಕ್ರಮ ವಹಿಸುವ ಬಗ್ಗೆ ಸಚಿವರು ಆಸಕ್ತಿ ತೋರಿಸಿದ್ದಾರೆ. ಅಕ್ಷರದಾಸೋಹ, ಶಿಷ್ಯ ವೇತನ ಸರಿಯಾಗಿ ಒದಗಿಸುವುದು ಶಿಕ್ಷಕರ ಕರ್ತವ್ಯ. ಮಳೆಗಾಲದಲ್ಲಿ ದುರಸ್ತಿ ಆಗಬೇಕಾಗಿರುವ ಕೊಠಡಿಗಳಲ್ಲಿ ಮಕ್ಕಳನ್ನು ಕೂಡಿಸುವುದನ್ನು ನಿರ್ಬಂಧಿಸಿ ವಿಶೇಷ ಕಾಳಜಿ ತೆಗೆದುಕೊಳ್ಳಬೇಕು’ ಎಂದರು.
ಆಡಳಿತಾಧಿಕಾರಿ ನಾಗರಾಜ ಯಂಡಿಗೇರಿ, ತಾಲ್ಲೂಕು ಪಿಎಮ್ ಪೋಷಣಾ ಅಭಿಯಾನದ ಸಹ ನಿರ್ದೇಶಕ ಎಚ್.ಎಸ್. ರಾಮನಗೌಡ್ರ, ಬಿಆರ್ಪಿ ಈಶ್ವರ ಮೆಡ್ಲೇರಿ, ವಾಸು ದೀಪಾವಳಿ, ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎಮ್.ಎಮ್. ಹವಳದ, ಶಿರಹಟ್ಟಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಸ್. ಕಳಸಾಪೂರ, ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.