ಗದಗ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬಾರದು ಎಂಬ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರ ಹೇಳಿಕೆ ಖಂಡಿಸಿ ಗದಗ ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜದವರು ಶುಕ್ರವಾರ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಗಾಂಧಿ ಪ್ರತಿಮೆ ಬಳಿ ಜಮಾಯಿಸಿದ ಪಂಚಮಸಾಲಿ ಸಮಾಜದ ಯುವಕರು, ಹಿರಿಯರು ಮುಖ್ಯಮಂತ್ರಿ ಚಂದ್ರು ವಿರುದ್ಧ ಘೋಷಣೆ ಕೂಗಿದರು. ಬಳಿಕ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಚಂದ್ರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯದಿದ್ದರೆ ಅವರ ವಿರುದ್ಧ ರಾಜ್ಯದೆಲ್ಲೆಡೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮಾಜದ ಸ್ವಾಮೀಜಿಗಳ ನೇತೃತ್ವದಲ್ಲಿ ಈಗಾಗಲೇ ಸಾಕಷ್ಟು ಹೋರಾಟ, ಪಾದಯಾತ್ರೆಗಳನ್ನು ನಡೆಸಲಾಗಿದೆ. ನಮ್ಮ ಹೋರಾಟಕ್ಕೆ ಅಂತಿಮ ರೂಪ ಬರುವ ಹೊತ್ತಿನಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಸರಿಯಲ್ಲ. ಮತ್ತೊಂದು ಸಮಾಜಕ್ಕೆ ಮೀಸಲಾತಿ ನೀಡಬಾರದು ಎಂಬ ಅವರ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ’ ಎಂದು ಕಿಡಿಕಾರಿದರು.
ಗದಗ ಜಿಲ್ಲಾ ಲಿಂಗಾಯತ ಪಂಚಮಸಾಲಿ ಸಮಾಜ ಅಧ್ಯಕ್ಷ ಅಯ್ಯಪ್ಪ ಅಂಗಡಿ, ಮುಖಂಡರಾದ ಅನಿಲಕುಮಾರ ಪಾಟೀಲ, ಮಹೇಶ ಕರಿಬಿಷ್ಟಿ, ಶಿವರಾಜ ಶಿವನಗೌಡರ, ಬಸವರಾಜ ಮನಗುಂಡಿ, ಸಂಗಮೇಶ ಕವಳಿಕಾಯಿ, ಅರುಣ ಆದಿ, ಸುರೇಶ ಚಿತ್ತರಗಿ, ರವಿ ಮಾನೇದ, ರಮೇಶ ಕುಮಾರ, ಬಸವರಾಜ ಗಡ್ಡೆಪ್ಪನವರ, ಸಂಗಮೇಶ ಅಂಗಡಿ, ಅಪ್ಪು ಮುಳವಾಡ, ಶರಣಪ್ಪ ಗೊಳಗೊಳಕಿ, ಮಹಾಂತೇಶ ನಲವಡಿ, ರಮೇಶ ರೋಣದ, ರಮೇಶ ಬಂಡಿ, ಪ್ರಶಾಂತಕುಮಾರ ಬೆಟಗೇರಿ ಹಾಗೂ ಸಮಾಜದ ಹಿರಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.