ADVERTISEMENT

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 5:09 IST
Last Updated 13 ಜುಲೈ 2021, 5:09 IST
ಗದಗ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರ ಮುಖಾಂತರ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಪ್ರತಿಭಟನಕಾರರು ಮನವಿಪತ್ರ ಸಲ್ಲಿಸಿದರು
ಗದಗ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರ ಮುಖಾಂತರ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹಾಗೂ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಪ್ರತಿಭಟನಕಾರರು ಮನವಿಪತ್ರ ಸಲ್ಲಿಸಿದರು   

ಗದಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಗದುಗಿನ ಕಟ್ಟಡ ನಿರ್ಮಾಣ ಕಾರ್ಮಿಕರ ಮಹಾಸಂಘ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು), ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವವರ ಸಂಘ (ಎಐಟಿಯುಸಿ) ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಗೆಹರಿಯದ ಬಹುಕಾಲದ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ತಪ್ಪಿದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಗದುಗಿನ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಹಾಸಂಘದ ಅಧ್ಯಕ್ಷ ಎಂ.ಐ.ನವಲೂರ ಮಾತನಾಡಿ, ‘ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ಸರ್ಕಾರ ₹3 ಸಾವಿರ ಪರಿಹಾರಧನ ಘೋಷಿಸಿದೆ. ಆದರೆ, ಕೆಲವು ಕಾರ್ಮಿಕರಿಗೆ ಈ ಹಣ ತಲುಪಿಲ್ಲ. ಆಧಾರ್‌ ಸಂಖ್ಯೆ ಗೊಂದಲ, ಬ್ಯಾಂಕ್‌ಗಳ ವಿಲೀನ ಹಾಗೂ ಕೆಲವು ಕಾರ್ಮಿಕರು ತಮ್ಮ ಖಾತೆಗಳನ್ನು ಚಾಲ್ತಿಯಲ್ಲಿ ಇರಿಸದ ಕಾರಣದಿಂದ ಹಣ ದೊರೆತಿಲ್ಲ. ಈ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ಶೀಘ್ರವೇ ಹಣ ಒದಗಿಸಬೇಕು. ಜತೆಗೆ ಪರಿಹಾರ ಹಣದ ಮೊತ್ತವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ದಿನಸಿ ಕಿಟ್, ಟೂಲ್ ಕಿಟ್, ಸುರಕ್ಷತಾ ಕಿಟ್ ಖರೀದಿಯಲ್ಲಿ ಪಾರದರ್ಶಕತೆ ಇಲ್ಲ. ಇವುಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ದಿನಸಿ ಕಿಟ್‌ಗೆ ಸಂಬಂಧಿಸಿದ ವಸ್ತುಗಳನ್ನು ದುಪ್ಪಟ್ಟು ಹಣ ನೀಡಿ ಖರೀದಿಸಲಾಗಿದೆ. ಜತೆಗೆ ಕಳಪೆ ಆಹಾರ ಸಾಮಗ್ರಿ ನೀಡಿದ್ದಾರೆ. ಕಾರ್ಮಿಕ ಮಂಡಳಿ ನೀಡಿರುವ ಕಿಟ್‍ಗಳ ಮೇಲೆ ರಾಜಕೀಯ ಪಕ್ಷದ ಕಾರ್ಯಕರ್ತರು ತಮ್ಮ ಪೋಟೊಗಳನ್ನು ಅಂಟಿಸಿ ಹಂಚಿರುವುದು ಕಾನೂನಿನ ಉಲ್ಲಂಘನೆಯಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವವರ ಸಂಘದ ಅಧ್ಯಕ್ಷ ಎಂ.ಬಿ.ಬನ್ನೂರ ಮಾತನಾಡಿ, ‘ಕಾರ್ಮಿಕರಿಗೆ ನೀಡುವ ಮದುವೆ ಸಹಾಯಧನವನ್ನು ಶೀಘ್ರವಾಗಿ ಒದಗಿಸುವುದರ ಜತೆಗೆ ಮೊತ್ತವನ್ನು ₹1 ಲಕ್ಷಕ್ಕೆ ಹೆಚ್ಚಿಸಬೇಕು. ಕಾರ್ಮಿಕರ ಸಹಜ ಮರಣದ ಪರಿಹಾರಧನದ ಮೊತ್ತವನ್ನು ₹2 ಲಕ್ಷಕ್ಕೆ ಹೆಚ್ಚಿಸಬೇಕು. ಮನೆ ನಿರ್ಮಾಣಕ್ಕೆ ₹5 ಲಕ್ಷ ಸಹಾಯಧನ ನೀಡಬೇಕು’ ಎಂದು ಆಗ್ರಹಿಸಿದರು.

ಕಾರ್ಮಿಕ ಮುಖಂಡರಾದ ಯೇಸುಜಾನ ಶೌರಿ, ಜೆ.ಐ.ಹಣಗಿ, ಅಲ್ಲಾಸಾಬ ನದಾಫ, ಮಾರುತಿ ಚಿಟಗಿ, ಪೀರು ರಾಥೋಡ್‌, ಮಂಜುನಾಥ ಚಲವಾದಿ, ಲಕ್ಷ್ಮಣ ವಡ್ಡರಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.