ಗದಗ: ಉತ್ತರ ಪ್ರದೇಶದಲ್ಲಿ ಪರಿಶಿಷ್ಟ ಜಾತಿಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಆಕೆಯನ್ನು ಕ್ರೂರವಾಗಿ ಹತ್ಯೆಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಜೈ ಭೀಮ ಸೇನಾ ಸಂಘಟನೆಯ ಸದಸ್ಯರು ಆಗ್ರಹಿಸಿದರು.
ಜೈ ಭೀಮ ಸೇನಾ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ವೈ. ಹುಬ್ಬಳ್ಳಿ ನೇತೃತ್ವದಲ್ಲಿ ಗುರುವಾರ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಕಾರರು ಬಳಿಕ ಗದಗ ತಹಶೀಲ್ದಾರ್ ಮುಖಾಂತರ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.
ಗಣೇಶ ಹುಬ್ಬಳ್ಳಿ ಮಾತನಾಡಿ, ‘ದೇಶದಾದ್ಯಂತ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ತ್ವರಿತವಾಗಿ ವಿಚಾರಣೆ ನಡೆಸಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡುವ ವಿಶೇಷ ಕಾನೂನು ಜಾರಿಗೆ ತರಬೇಕು’ ಎಂದು ಆಗ್ರಹಿಸಿದರು.
‘ಆರೋಪಿಗಳಿಗೆ ತ್ವರಿತವಾಗಿ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ದಲಿತರೆಲ್ಲರೂ ಸೇರಿಕೊಂಡು ಉಗ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಮಂಜುನಾಥ ಎಫ್. ತೌಜಲ್, ರಾಷ್ಟ್ರೀನ್ ಜೋಸೆಫ್, ಹೇಮಂತ ಹುಬ್ಬಳ್ಳಿ, ರಾಜೇಶ ವಿ. ಶೆಟ್ಟರ್, ವಿಜಯ ಪೂಜಾರ, ಬಸವರಾಜ ಬದಾಮಿ, ಪರಶುರಾಮ ಪಾತ್ರೋಟ, ದಲಿತ ಮುಖಂಡರಾದ ಬಾಬು ಬಳ್ಳಾರಿ, ಪ್ರೇಮಾ ಹುಬ್ಬಳ್ಳಿ, ಬಾಷಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.