
ಗದಗ ನಗರದ ಗಂಗಿಮಡಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಸತಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ಖಾನ್ ಮಾತನಾಡಿದರು
ಗದಗ: ‘ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ₹4,500 ಕೋಟಿ ಬಜೆಟ್ ಒದಗಿಸಿದೆ. ಈ ಅನುದಾನದ ಪ್ರಮುಖ ಭಾಗವನ್ನು ಮಕ್ಕಳ ಶಿಕ್ಷಣಕ್ಕೆ ಬಳಸಲಾಗುತ್ತಿದೆ’ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಹೇಳಿದರು.
ನಗರದ ಗಂಗಿಮಡಿಯಲ್ಲಿ ನಿರ್ಮಾಣಗೊಂಡಿರುವ ಕರ್ನಾಟಕ ಮೌಲಾನಾ ಅಜಾದ್ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಮಂಗಳವಾರ ಲೋಕಾರ್ಪಣೆ ಮಾಡಿ ಮಾತನಾಡಿದರು.
ರಾಜ್ಯದಲ್ಲಿ 2.38 ಲಕ್ಷಕ್ಕೂ ಅಧಿಕ ಮಕ್ಕಳು ವಸತಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಅನೇಕ ವಸತಿ ಶಾಲೆಗಳು ಆರಂಭವಾಗಿದ್ದು, ಇದೀಗ ಮತ್ತಷ್ಟು ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. 100 ಮದರಸಾಗಳಲ್ಲಿ 9–10ನೇ ತರಗತಿ ಓದುತ್ತಿರುವ ಸುಮಾರು 5,000 ಮಕ್ಕಳು ಉತ್ತೀರ್ಣರಾಗುತ್ತಿದ್ದಾರೆ. ಮದರಸಾಗಳಲ್ಲಿಯೂ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಬೇಕು ಎಂಬ ಕಳಕಳಿಯಿಂದ ಸರ್ಕಾರ ಕೆಲಸ ಮಾಡುತ್ತಿದೆ” ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮಾತನಾಡಿ, ‘ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ₹235 ಲಕ್ಷ ಹಾಗೂ ಹೆಚ್ಚುವರಿ ತರಗತಿಗಳ ಕಟ್ಟಡ ನಿರ್ಮಾಣಕ್ಕೆ ₹143 ಲಕ್ಷ ವೆಚ್ಚದ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಕಟ್ಟಡ ಗುಣಮಟ್ಟದ ಕಾಮಗಾರಿ ಆಗಿದ್ದು, ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು. ಈ ಕಟ್ಟಡದಲ್ಲಿ ಅಭ್ಯಾಸ ಮಾಡುವ ಎಲ್ಲ ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದರು.
ಗದಗ–ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ, ಕೃಷ್ಣಗೌಡ ಪಾಟೀಲ, ಫಾರೂಕ್ ಹುಬ್ಬಳ್ಳಿ, ಎ.ಎಂ.ಹಿಂಡಸಗೇರಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಕೆ.ಆರ್.ಐ.ಡಿ.ಎಲ್. ಕಾರ್ಯನಿರ್ವಾಹಕ ಎಂಜಿನಿಯರ್ ಅನಿಲ ಪಾಟೀಲ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಮಿತ್ ಬಿದರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.