ರೋಣ: 2025-26ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಅಂಗವಾಗಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ತಾಲ್ಲೂಕಿನ ಮುದೇನಗುಡಿ, ಹಿರೇಮಣ್ಣೂರು, ತಳ್ಳಿಹಾಳ, ಅಸೂಟಿ, ಕರಮುಡಿ ಹಾಗೂ ಮೇಲಮಠ ಗ್ರಾಮಗಳಲ್ಲಿ ಶುಕ್ರವಾರ ನಡೆಸಲಾಯಿತು.
ಐಸಿಎಆರ್- ಹುಲಕೋಟಿಯ ಕೆ.ಎಚ್.ಪಾಟೀಲ ಕೃಷಿ ವಿಜ್ಞಾನ ಕೇಂದ್ರ, ಕೃಷಿ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ಜೂನ್ 12ರವರೆಗೆ ಜಿಲ್ಲೆಯಾದ್ಯಂತ ಅಭಿಯಾನ ನಡೆಯಲಿದೆ.
ಈ ಅಭಿಯಾನದಲ್ಲಿ ಬೀಜೋಪಚಾರ, ಸುಧಾರಿತ ತಳಿಗಳು, ತೋಟಗಾರಿಕೆ ಬೆಳೆಗಳು, ಸಿರಿಧಾನ್ಯ ಹಾಗೂ ಅವುಗಳ ಮಹತ್ವ, ಕೃಷಿ ಯಂತ್ರೋಪಕರಣಗಳು, ಸಮಗ್ರ ಕೃಷಿ ಪದ್ಧತಿಗಳ ಕುರಿತಾಗಿ ರೈತರಿಗೆ ತರಬೇತಿ ನೀಡಲಾಯಿತು.
ಐಸಿಎಆರ್- ಗೋಡಂಬಿ ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿಗಳು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಕೃಷಿ ಅಧಿಕಾರಿಗಳು, ಕೃಷಿ ಸಖಿಯರು, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು, ಪಶುಸಖಿಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ರೈತ ಮುಖಂಡರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.
ಮುಂಗಾರು ಬೆಳೆಗಳ ಬೇಸಾಯ ಕ್ರಮಗಳು, ಕೀಟ ಹಾಗೂ ರೋಗ ನಿರ್ವಹಣೆ ಬಗ್ಗೆ ಮಾಹಿತಿ ಕೈಪಿಡಿ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಯೋಜನೆಗಳ ಬಗ್ಗೆ ಹಸ್ತಪ್ರತಿಗಳನ್ನು ವಿತರಿಸಲಾಯಿತು.
ರೋಣ ತಾಲ್ಲೂಕಿನ ಒಟ್ಟು 6 ಗ್ರಾಮಗಳ 433 ಮಂದಿ ರೈತರು ಹಾಗೂ ರೈತ ಮಹಿಳೆಯರು ಅಭಿಯಾನದಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.