ADVERTISEMENT

ವೇಳಾಪಟ್ಟಿ,ಮಾರ್ಗಸೂಚಿ ಪ್ರಕಟ

ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ- –2020

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 3:01 IST
Last Updated 2 ಅಕ್ಟೋಬರ್ 2020, 3:01 IST

ಗದಗ: ‘ಪಶ್ಚಿಮ ಪದವೀಧರ ಕ್ಷೇತ್ರ ದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸುವ ಕುರಿತು ಚುನಾ ವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ’ ಎಂದು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾ ವಣಾಧಿಕಾರಿ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

‘ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನವಾಗಿದ್ದು, ಅ.9ರಂದು ನಾಮಪತ್ರ ಪರಿಶೀಲನೆ ನಡೆಯುವುದು. ನಾಮಪತ್ರ ಹಿಂಪಡೆ ಯಲು ಅ.12 ಕೊನೆಯ ದಿನವಾಗಿದೆ. ಅ.28ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ನ.2ರಂದು ಮತಎಣಿಕೆ ನಡೆಯಲಿದೆ. ನ.5ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಪಶ್ಚಿಮ ಪದವೀಧ ರರ ಕ್ಷೇತ್ರ ವ್ಯಾಪ್ತಿಯ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿ ಆಗಿರುತ್ತಾರೆ’ ಎಂದು ಅವರು ತಿಳಿಸಿದ್ದಾರೆ.

ಚುನಾವಣೆಗೆ ಸ್ಪರ್ಧಿಸುವವರು ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಧಾರವಾಡ ಕಚೇರಿಯಲ್ಲಿ ನಾಮಪತ್ರ ನಮೂನೆ 2ಎ, ಪರಿಷ್ಕೃತ ಪ್ರಮಾಣ ಪತ್ರ ನಮೂನೆ-26 ಹಾಗೂ ಇತರೆ ನಮೂನೆಗಳನ್ನು ಅಕ್ಟೋಬರ್ 1ರಿಂದ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ನಮೂನೆಗಳನ್ನು ಅ.1ರಿಂದ ಅ.8ರವರೆಗೆ ಸಾರ್ವತ್ರಿಕ ರಜಾ ದಿನ ಹೊರತುಪಡಿಸಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಪ್ರಮಾಣಪತ್ರ ಮತ್ತು ನಮೂನೆ ಎಎ ಮತ್ತು ನಮೂನೆ ಬಿಬಿಗಳನ್ನು ನಾಮಪತ್ರದೊಂದಿಗೆ ಸಲ್ಲಿಸದಿದ್ದಲ್ಲಿ ನಾಮಪತ್ರ ಸಲ್ಲಿಸುವ ಕೊನೆ ದಿನವಾದ ಅ. 8ರಂದು ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ADVERTISEMENT

ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯ ವೇಳೆ ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಕಲಂ 34ರ ಮೇರೆಗೆ ಸಾಮಾನ್ಯ ವರ್ಗದವರು ₹10 ಸಾವಿರ ಹಾಗೂ ಪರಿಶಿಷ್ಟ ಜಾತಿ, ಪಂಗಡದವರು ₹5 ಸಾವಿರ ಠೇವಣಿ ಇಡಬೇಕು.

ಸುಪ್ರೀಂ ಕೋರ್ಟ್‌ನ 2013 ಸೆಪ್ಟಂಬರ್ 13ರ ಆದೇಶದಂತೆ ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸುವ ಪ್ರಮಾಣಪತ್ರದಲ್ಲಿನ ಎಲ್ಲ ಅಂಕಣಗಳನ್ನು ಸೂಕ್ತ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ.

ಅಭ್ಯರ್ಥಿಗಳು, ರಾಜಕೀಯ ಪಕ್ಷದವರು ಚುನಾವಣೆ ಸಂದರ್ಭದಲ್ಲಿ ಪ್ರಚಾರ ಹಾಗೂ ಇನ್ನಿತರೆ ಕಾರ್ಯಗಳಲ್ಲಿ ಚುನಾವಣಾ ಆಯೋಗವು ಹೊರಡಿಸಿರುವ ಕೋವಿಡ್-19ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.