ಗದಗ: ‘ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಸರ್ಕಾರ ನರೇಗಾ ಯೋಜನೆ ಅಡಿ ದುಡಿಯುವ ಕೈಗಳಿಗೆ ಉದ್ಯೋಗ ಕಲ್ಪಿಸುತ್ತಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ ಹೇಳಿದರು.
ಗದಗ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆದ ಬಡತನ ನಿರ್ಮೂಲನೆ ಯೋಜನೆ ಜನ ಜಾಗೃತಿ ಮೂಡಿಸುವ ಕಾನೂನು ಪದವೀಧರರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರತಿಯೊಬ್ಬ ನಾಗರಿಕನು ಈ ದೇಶದ ಆಸ್ತಿ. ಪ್ರತಿಯೊಬ್ಬರ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಜನರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಅವು ಜನರ ಕಲ್ಯಾಣಕ್ಕೆ, ದೇಶದ ಅಭಿವೃದ್ಧಿಗೆ ಸದ್ಭಳಕೆ ಆಗಬೇಕು. ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ಉದ್ದೇಶ ಈಡೇರುತ್ತದೆ’ ಎಂದು ಅಭಿಪ್ರಾಯಪಟ್ಟರು.
ಸರ್ಕಾರದ ಯೋಜನೆಗಳಾದ ವೃದ್ಯಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ಅಂಗವಿಕಲರು ಹಾಗೂ ವಸತಿ ಯೋಜನೆ ಹೀಗೆ ಸಾಮಾಜಿಕ ಭದ್ರತಾ ಯೋಜನೆಗಳಡಿ ಸಾಕಷ್ಟು ಯೋಜನೆಗಳಿದ್ದು, ಪರಿಣಾಮಕಾರಿ ಅನುಷ್ಠಾನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ರಾಷ್ಟ್ರೀಯ ಯೋಜನೆಯಾದ ಬಡತನ ನಿರ್ಮೂಲನಾ ಯೋಜನೆ-2015ರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
‘ಸೌಲಭ್ಯಗಳು ಫಲಾನುಭವಿಗಳಿಗೆ ತಲುಪಿವೆಯೋ ಇಲ್ಲವೋ ಎಂದು ಮನೆ ಮನೆಗೆ ತೆರಳಿ ಸರ್ವೇ ನಡೆಸಬೇಕು. ಸೌಲಭ್ಯಗಳು ಸಿಗದಿದ್ದಲ್ಲಿ ಅರ್ಜಿ ಪಡೆದು ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿ, ಯೋಜನೆ ತಲುಪಿಸಲು ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಕಾನೂನು ಸೇವಾ ಅಧಿಕಾರಿಗಳು ಹಾಗೂ ತರಬೇತಿ ಭತ್ಯೆ ಪಡೆಯುತ್ತಿರುವ ಕಾನೂನು ಪದವೀಧರರು ಯೋಜನೆಯೊಂದಿಗೆ ಕೈಜೋಡಿಸಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಅಲ್ಲದೇ, ಸರ್ಕಾರದ ಯೋಜನೆಗಳು ಮಧ್ಯವರ್ತಿಗಳ ಪಾಲಾಗದೇ ನೇರವಾಗಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿರಸ್ತೇದಾರ್ ಬಸವರಾಜ ಕುಕನೂರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.