ಗದಗ: ‘ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿ ಮಕ್ಕಳಿಗೆ ಶಿಕ್ಷಕರ ಮೇಲೆ ಅಪಾರ ಗೌರವ ಇರುತ್ತದೆ. ಎಲ್ಲ ವೃತ್ತಿಗಳಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದುದು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅಭಿಪ್ರಾಯಪಟ್ಟರು.
ನಗರದಲ್ಲಿ ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆ ವತಿಯಿಂದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
‘ಪೋಷಕರು ತಮ್ಮ ಮಕ್ಕಳ ಭವಿಷ್ಯ ಉಜ್ವಲವಾಗಲೆಂದು ಶಾಲೆಗೆ ಕಳುಹಿಸುತ್ತಾರೆ. ಅವರಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಎಲ್ಲ ಶಿಕ್ಷಕರ ಜವಾಬ್ದಾರಿ. ಗದಗ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಎಲ್ಲ ಪ್ರೌಢಶಾಲೆಗಳ ಮುಖ್ಯಗುರುಗಳು ಹಾಗೂ ವಿಷಯವಾರು ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಫಲಿತಾಂಶ ಸುಧಾರಣೆಗೆ ಪ್ರಯತ್ನಿಸಬೇಕು’ ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಮಾತನಾಡಿ, ‘ನಾಲ್ಕೈದು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಕಡಿಮೆಯಾಗುತ್ತಿರುವುದು ಕಳವಳಕಾರಿ ವಿಷಯ. ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಫಲಿತಾಂಶ ಕಡಿಮೆ ಆಗುತ್ತಿದೆ. ಈ ಕುರಿತು ಶಿಕ್ಷಕ ವರ್ಗ ಆತ್ಮಾವಲೋಕನ ಮಾಡಿಕೊಂಡು ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಪ್ರಯತ್ನಿಸಬೇಕು’ ಎಂದು ಹೇಳಿದರು.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ‘ಪ್ರೇರಣಾ ನುಡಿಗಳು’ ವಿಷಯವಾಗಿ ನಿವೃತ್ತ ಉಪ ನಿರ್ದೇಶಕ ಎಸ್.ವೈ.ಹಳಿಂಗಳಿ ಮಾತನಾಡಿದರು.
ಡಿಡಿಪಿಐ ಜಿ.ಎಂ.ಬಸವಲಿಂಗಪ್ಪ, ಡಯಟ್ ಪ್ರಾಚಾರ್ಯ ಎಸ್.ಡಿ.ಗಾಂಜಿ, ಎಂ.ಎ.ರಡ್ಡೇರ, ಆರ್.ಎಸ್.ಬುರಡಿ, ಕೆಳದಿಮಠ, ರಾಮಕೃಷ್ಣ ಸದಲಗಿ, ಕೆ.ವಿ.ಪಾಟೀಲ, ಡಾ.ಶರಣು ಗೋಗೇರಿ, ಎಸ್.ಸಿ.ಹಡಗಲಿ, ಆರ್.ಎಫ್.ಲೊಟಗೇರಿ, ಕೆ.ಎಸ್.ಹೂಲಗೇರಿ, ರಾಮಚಂದ್ರ ಪವಾರ, ಕಾರ್ಯಾಗಾರದ ನಿರ್ದೇಶಕ ಡಾ.ಶರಣು ಗೋಗೇರಿ, ಎಚ್.ಬಿ.ರಡ್ಡೇರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.