ADVERTISEMENT

ಗದಗ| ಒತ್ತಡಮುಕ್ತ ಬದುಕಿಗೆ ಕ್ರೀಡೆ ಚೇತೋಹಾರಿ: ಎಸ್‌.ವಿ.ಸಂಕನೂರ

ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಹಬ್ಬ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 7:50 IST
Last Updated 4 ಜನವರಿ 2026, 7:50 IST
ಗದಗ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಹಬ್ಬವನ್ನು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಉದ್ಘಾಟಿಸಿದರು
ಗದಗ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಹಬ್ಬವನ್ನು ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಉದ್ಘಾಟಿಸಿದರು   

ಗದಗ: ‘ಸರ್ಕಾರದ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಮಹತ್ವದ್ದಾಗಿದೆ. ನೌಕರರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡಾಗ ಮಾತ್ರ ಕಚೇರಿ ಕೆಲಸ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ಶನಿವಾರ ನಡೆದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿಯೊಬ್ಬರಿಗೂ ಆರೋಗ್ಯವೇ ಭಾಗ್ಯವಾಗಿದೆ. ಸರ್ಕಾರಿ ನೌಕರರ ಇಡೀ ಕುಟುಂಬವು ಅವರ ಮೇಲೆಯೇ ಅವಲಂಬಿತವಾಗಿರುತ್ತದೆ. ಒಂದು ವೇಳೆ ಕೆಲಸದ ಒತ್ತಡದಿಂದ ನೌಕರರಿಗೆ ಆರೋಗ್ಯ ಸಮಸ್ಯೆ ಉಂಟಾದಲ್ಲಿ ಅವರ ಕುಟುಂಬ ಸಂಕಷ್ಟಕ್ಕೆ ಒಳಗಾಗುತ್ತದೆ. ಈ ನಿಟ್ಟಿನಲ್ಲಿ ಕೆಲಸದ ಒತ್ತಡದಿಂದ ಹೊರಬಂದು ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕಾದರೆ ಪ್ರತಿದಿನ ಕನಿಷ್ಠ 1 ಗಂಟೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ‘ಸರ್ಕಾರದ ಧ್ಯೇಯೋದ್ದೇಶಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರು ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರಿ ನೌಕರರಿಗೆ ಈ ಕ್ರೀಡಾ ಉತ್ಸವವು ಒಂದು ಸಂತಸದ ಅವಕಾಶವನ್ನು ಕೊಟ್ಟಿದೆ’ ಎಂದರು.

‘ಕ್ರೀಡೆಯಲ್ಲಿ ಸೋಲು– ಗೆಲುವು ಮುಖ್ಯವಲ್ಲ, ಪಾಲ್ಗೊಳ್ಳುವಿಕೆ ಮುಖ್ಯ. ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳು ಕೂಡ ನೌಕರರಿಗೆ ಮಾನಸಿಕ ಸದೃಢತೆ ತಂದುಕೊಡುತ್ತವೆ’ ಎಂದು ತಿಳಿಸಿದರು.

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ‘ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಮೂಲಕ ದೈಹಿಕ ಹಾಗೂ ಮಾನಸಿಕ ಸದೃಢತೆ ಹೊಂದಬೇಕು. ಜಿಲ್ಲೆಯ ಅನೇಕ ಕ್ರೀಡಾಪಟುಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದಾರೆ’ ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳಿಂದ ನಿರ್ಮಿಸಲಾದ ಮಳಿಗೆಗಳನ್ನು ಉದ್ಘಾಟಿಸಲಾಯಿತು. ಗದಗ– ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎಸ್.ಎನ್. ಬಳ್ಳಾರಿ, ರಾಜು ಕುರಡಗಿ, ಪ್ರೇಮನಾಥ ಗರಗ, ರವಿ ಗುಂಜೀಕರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಗೌರವಾಧ್ಯಕ್ಷ ಡಿ.ಎಸ್. ತಳವಾರ, ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಇದ್ದರು.

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಸ್ವಾಗತಿಸಿದರು, ಎಂ.ಎಸ್.ಕುಚಬಾಳ ವಂದಿಸಿದರು, ಪ್ರೊ. ಬಾಹುಬಲಿ ಜೈನರ್ ಕಾರ್ಯಕ್ರಮ ನಿರೂಪಿಸಿದರು.

ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿದ ಸರ್ಕಾರಿ ನೌಕರರು
ನೌಕರರು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಕ್ರೀಡಾ ಮನೋಭಾವ ಬೆಳೆಯುತ್ತದೆ. ಯೋಗ ಧ್ಯಾನ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಿತ್ಯದ ಬದುಕಿನಲ್ಲಿ ಒತ್ತಡಮುಕ್ತ ವಾತಾವರಣ ನಿರ್ಮಿಸಿಕೊಳ್ಳಬೇಕು
ಎಸ್‌.ವಿ.ಸಂಕನೂರ ವಿಧಾನ ಪರಿಷತ್‌ ಸದಸ್ಯ
ಗದಗ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಎರಡು ದಿನ ನಡೆಯಲಿವೆ. ನೌಕರರು ಕುಟುಂಬದೊಂದಿಗೆ ಆಗಮಿಸಿ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳನ್ನು ಆಸ್ವಾದಿಸಬೇಕು
ಬಸವರಾಜ ವೆಂ.ಬಳ್ಳಾರಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ