ಗದಗ: ‘ಜಿಲ್ಲೆಯ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ತರಬೇತಿ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮ ಹಾಗೂ ಮಕ್ಕಳ ಸುರಕ್ಷತೆ ಖಚಿತಪಡಿಸುವುದು ಹಾಗೂ ವಿದ್ಯಾರ್ಥಿಗಳ ಆರೋಗ್ಯ ವೃದ್ಧಿಗಾಗಿ ನಿರಂತರ ಸಮೀಕ್ಷೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚಿಸಿದರು.
ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ತಡೆಗಟ್ಟುವಿಕೆ ಹಾಗೂ ಮಾನಸಿಕ ಆರೋಗ್ಯ ಕಾಳಜಿ ಕ್ರಮಗಳನ್ನು ಜಾರಿಗೆ ತರಲು ರಚಿಸಿರುವ ಜಿಲ್ಲಾಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ವಿದ್ಯಾರ್ಥಿಗಳು ಕೆಲವೊಂದು ಸಂದಿಗ್ದ ಸಂದರ್ಭಗಳಲ್ಲಿ ಪರಿಸ್ಥಿತಿ ಎದುರಿಸಲಾಗದೇ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡು ತಮ್ಮ ಅಮೂಲ್ಯ ಬದುಕನ್ನು ಕಳೆದುಕೊಳ್ಳುತ್ತಿದ್ದಾರೆ. ಅವರಲ್ಲಿ ಆತ್ಮಸ್ಥೆರ್ಯ ತುಂಬಲು ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿಗೆ ಮಾನಸಿಕ ಆರೋಗ್ಯದ ಕುರಿತು ತರಬೇತಿ ಏರ್ಪಡಿಸಬೇಕು. ವಿದ್ಯಾರ್ಥಿಗಳ ಪಾಲಕರು ಸಹಿತ ತಮ್ಮ ಮಕ್ಕಳೊಂದಿಗೆ ಸಮಯ ಕಳೆಯುವುದು ಇಂದಿನ ಅವಶ್ಯಕತೆಯಾಗಿದೆ’ ಎಂದು ಹೇಳಿದರು.
‘ಎಲ್ಲ ಶಿಕ್ಷಣ ಸಂಸ್ಥೆಗಳು ವಿಶೇಷವಾಗಿ ತರಬೇತಿ ಸಂಸ್ಥೆಗಳು, ಮಾನಸಿಕ ಆರೋಗ್ಯ ಸೇವೆಗಳು, ಸ್ಥಳೀಯ ಆಸ್ಪತ್ರೆಗಳು ಹಾಗೂ ಆತ್ಮಹತ್ಯೆ ತಡೆಗಟ್ಟುವಿಕೆ ಸಹಾಯವಾಣಿಗಳ ತ್ವರಿತ ಸೇವೆ ಪಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.
‘ಟೆಲಿಮಾನಸ್ ಮತ್ತು ಇತರೆ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಗಳ ಮಾಹಿತಿಯನ್ನು ಹಾಸ್ಟೆಲ್ಗಳು, ತರಗತಿ ಕೊಠಡಿಗಳು, ಸಾಮಾನ್ಯ ಸ್ಥಳಗಳು ಮತ್ತು ವೆಬ್ಸೈಟ್ಗಳಲ್ಲಿ ಸ್ಪಷ್ಟವಾಗಿ ಪ್ರದರ್ಶಿಸಬೇಕು’ ಎಂದು ಸೂಚಿಸಿದರು.
ಡಿವೈಎಸ್ಪಿ ಮಹಾಂತೇಶ ಸಜ್ಜನರ, ಡಿಎಚ್ಒ ಡಾ.ಎಸ್.ಎಸ್.ನೀಲಗುಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಜಿಮ್ಸ್ ಉಪವೈದ್ಯಕೀಯ ಅಧೀಕ್ಷಕ ಡಾ.ಸೋಮಶೇಖರ ಬಿಜ್ಜಳ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ರಫೀಕಾ ಹಳ್ಳೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಶಾಲೆಗಳಲ್ಲಿ ಮಕ್ಕಳ ಸಲಹಾ ಪೆಟ್ಟಿಗೆ ಮಾಡಬೇಕು. ಮಕ್ಕಳ ಸುರಕ್ಷತಾ ಸಮಿತಿ ರಚನೆ ಮಾಡಬೇಕುಆರ್.ಎಸ್.ಬುರುಡಿ ಉಪನಿರ್ದೇಶಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.