ಗದಗ: ‘ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ರೈತರ ಬೇಡಿಕೆಗಳಿಗೆ ಸ್ಪಂದಿಸದೆ ಹೋರಾಟ ಹತ್ತಿಕ್ಕುತ್ತಿರುವುದು ಘೋರ ಅಪರಾಧ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಕೆ.ಪಾಟೀಲ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೂಡಲೇ ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯುವ ಮೂಲಕ ಅನ್ನದಾತರ ಹಿತ ಕಾಪಾಡಬೇಕು. ರೈತರ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲಿಸಲಿದೆ ಎಂದು ಹೇಳಿದರು.
ಗಣರಾಜ್ಯೋತ್ಸವದ ದಿನದಂದು ಅನ್ನದಾತರನ್ನು ಕಡೆಗಣಿಸಲಾಗಿದೆ. ಇಂದು ರೈತರ ಪ್ರತಿಭಟನೆಗೆ ಅಡ್ಡಿಪಡಿಸುವ ಮೂಲಕ ಗಣರಾಜ್ಯೋತ್ಸವದ ಮಹತ್ವ ಹಾಗೂ ಘನತೆ ಕಡಿಮೆ ಮಾಡಿದ್ದಾರೆ. ರೈತ ಹೋರಾಟಗಾರರ ಆಕ್ರೋಶ ಸ್ಫೋಟಗೊಳ್ಳಲು ಅವಕಾಶ ನೀಡದೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಒತ್ತಾಯಿಸಿದರು.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಈರಪ್ಪ ನಾಡಗೌಡ್ರ, ಅಶೋಕ ಮಂದಾಲಿ ಇದ್ದರು.
***
ರೈತರ ಹೋರಾಟ ಹತ್ತಿಕ್ಕುವ ಕೆಲಸವನ್ನು ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಮಾಡುವುದಿಲ್ಲ. ಎರಡೂ ಸರ್ಕಾರಗಳು ರೈತರ ಪರವಾಗಿವೆ.
-ಸಿ.ಸಿ.ಪಾಟೀಲ, ಉಸ್ತುವಾರಿ ಸಚಿವ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.