
ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿಯ ಶತಮಾನೋತ್ಸವ ಸಮಾರಂಭದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು
ಮುಂಡರಗಿ: ‘ಜಾಗತೀಕರಣ, ಉದಾರೀಕರಣ ಹಾಗೂ ಖಾಸಗಿಕರಣಗಳ ಭರಾಟೆಯಲ್ಲಿ ನಾವೆಲ್ಲ ಅಂತಃಕರಣ ಮರೆಯುತ್ತಿದ್ದೇವೆ. ದೇವರು ಹಾಗೂ ಧರ್ಮದ ಹೆಸರಿನಲ್ಲಿ ಭಯೋತ್ಪಾದನೆಯ ಹೇಳಿಕೆಗಳು ಜಗತ್ತಿನಲ್ಲಿ ಆತಂಕ ಮೂಡಿಸುತ್ತಿವೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಲ್ಲಿಯ ಜಗದ್ಗುರು ಅನ್ನದಾನೀಶ್ವರ ವಿದ್ಯಾ ಸಮಿತಿಯ ಶತಮಾನೋತ್ಸವದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ, ಹಿರಿಯ ವಿದ್ಯಾರ್ಥಿಗಳ ಸಮಾವೇಶ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಕಲಿಕೆಯು ನಿರಂತರ ಪ್ರಕ್ರಿಯೆಯಾಗಿದ್ದು, ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಕಲಿಯುತ್ತಲೇ ಇರಬೇಕು. ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆಯುವ ಉದ್ದೇಶದ ಕಲಿಕೆಗಿಂತ ತನ್ನನ್ನು ತಾನರಿಯಲು ಕಲಿಯುವ ಕಲಿಕೆ ಶ್ರೇಷ್ಠ ಎಂದು ತಿಳಿಸಿದರು.
ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ಕಳೆದ ನೂರು ವರ್ಷಗಳಿಂದ ಅನ್ನದಾನೀಶ್ವರ ಸ್ವಾಮೀಜಿ ಈ ನಾಡಿನ ಎಲ್ಲ ವರ್ಗದ ಮಕ್ಕಳಿಗೆ ಜ್ಞಾನ ನೀಡುವ ಮೂಲಕ ಲಕ್ಷಾಂತರ ಮಕ್ಕಳಿಗೆ ದಾರಿದೀಪವಾಗಿದ್ದಾರೆ ಎಂದು ಹೇಳಿದರು.
ಶಾಸಕ ಚಂದ್ರು ಲಮಾಣಿ ಮಾತನಾಡಿ, ಅನ್ನದಾನೀಶ್ವರ ಸ್ವಾಮೀಜಿ ಅವರು ತಾಲ್ಲೂಕಿನ ಅಭಿವೃದ್ಧಿಗೆ ಬೆಲೆ ಬಾಳುವ ಜಮೀನನ್ನು ಉಚಿತವಾಗಿ ನೀಡಿ ತಾಲ್ಲೂಕಿನ ಅಭಿವೃದ್ಧಿಗೆ ನೆರವು ನೀಡುತ್ತಿದ್ದಾರೆ ಎಂದು ಹರ್ಷವ್ಯಕ್ತಪಡಿಸಿದರು.
ದಾನಿಗಳು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು. ಬಿ.ಜಿ.ಜವಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗುರುದೇವ ಸ್ವಾಮಿಜಿ ನಿರೂಪಿಸಿದರು. ಎಸ್.ಆರ್.ರಿತ್ತಿ ವಂದಿಸಿದರು.
ರಾಮಕೃಷ್ಣಾಶ್ರಮದ ನಿರ್ಭಯಾನಂದ ಸ್ವಾಮೀಜಿ ಮಾತನಾಡಿದರು. ಅನ್ನದಾನೀಶ್ವರ ಸ್ವಾಮೀಜಿ, ಆರ್.ಎಲ್.ಪೊಲೀಸಪಾಟೀಲ, ಮಲ್ಲಿಕಾರ್ಜುನ ಮಹಾಸ್ವಾಮಿಜಿ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಮಾಜಿ ಸಚಿವ ಎಸ್.ಎಸ್.ಪಾಟೀಲ, ಕೆ.ವಿ.ಹಂಚಿನಾಳ, ಎಂ.ಎಸ್.ಶಿವಶಟ್ಟರ, ಎಸ್.ಎಸ್.ಶಟ್ಟರ, ಅನ್ನದಾನಿ ಮೇಟಿ ಇದ್ದರು.
ನೂತನ ರೈಲು ಮಾರ್ಗ ಮಂಜೂರು ಮಾಡಬೇಕೆಂದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದು, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕುಷ್ಟಗಿಯಿಂದ ಗಜೇಂದ್ರಗಡ, ನರೆಗಲ್ಲ, ಗದಗ, ಮುಂಡರಗಿ, ಹೂವಿನಹಡಗಲಿ ಮಾರ್ಗವಾಗಿ ಹರಪನಹಳ್ಳಿಗೆ ನೂತನ ರೈಲು ಮಾರ್ಗ ಸಮೀಕ್ಷಾ ಕಾರ್ಯ ನಡೆಸಿ ಆದ್ಯತೆ ಮೇರೆಗೆ ನೂತನ ರೈಲು ಮಾರ್ಗ ನಿರ್ಮಿಸಲಾಗುವುದು ಎಂದು ಸಂಸದ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.