
ಗದಗ: ನಗರದ ಎಪಿಎಂಸಿ ರಸ್ತೆಯಲ್ಲಿರುವ ಶಾಂತಿ ಚಿತ್ರಮಂದಿರದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಿಂದ ಅಪಾರ ಹಾನಿಯಾಗಿದೆ.
ಶಾಂತಿ ಚಿತ್ರಮಂದಿರದಲ್ಲಿ ಸೋಮವಾರ ಬೆಳಿಗ್ಗೆ 8.15ರ ಸುಮಾರಿಗೆ ದಟ್ಟ ಹೊಗೆ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ಚಿತ್ರಮಂದಿರದ ಸಿಬ್ಬಂದಿ ಸೇರಿದಂತೆ ಯಾರೂ ಇರಲಿಲ್ಲ. ದಟ್ಟ ಹೊಗೆ ನೋಡಿದ ಸಾರ್ವಜನಿಕರು ತಕ್ಷಣವೇ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಚಿತ್ರಮಂದಿರದೊಳಗಿನ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಈ ವೇಳೆಗಾಗಲೇ ಚಿತ್ರಮಂದಿರದ ಕುರ್ಚಿಗಳು ಸುಟ್ಟು ಭಸ್ಮವಾಗಿದ್ದವು. ಜತೆಗೆ ಫ್ಯಾನ್, ಎಸಿ, ಒಳಾಂಗಣ ವಿನ್ಯಾಸಕ್ಕೆ ಬಳಸಿದ್ದ ಆಲಂಕಾರಿಕ ಮರದ ವಸ್ತುಗಳೆಲ್ಲವೂ ಹಾನಿಗೊಂಡಿದ್ದವು.
‘ಸಿನಿಮಾ ಪ್ರದರ್ಶನಕ್ಕೂ ಮುನ್ನ ಬೆಂಕಿ ಅವಘಡ ಸಂಭವಿಸಿದ್ದರಿಂದ ಸಂಭವನೀಯ ಅನಾಹುತ ತಪ್ಪಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಹಾನಿ ಎಷ್ಟಾಗಿದೆ ಎಂಬುದರ ವಿವರ ಇನ್ನೂ ಲಭ್ಯವಾಗಿಲ್ಲ’ ಎಂದು ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ವಿ.ಎಸ್.ಠಕ್ಕೇಕರ್ ತಿಳಿಸಿದ್ದಾರೆ.
ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕದಳದ 11 ಮಂದಿ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.