ADVERTISEMENT

‘ಥರ್ಡ್‌ ಐ’ನಿಂದ ಅಪರಾಧಗಳ ಸಂಖ್ಯೆ ಇಳಿಮುಖ: ಸಚಿವ ಎಚ್‌.ಕೆ.ಪಾಟೀಲ

​ಪ್ರಜಾವಾಣಿ ವಾರ್ತೆ
Published 6 ಜುಲೈ 2025, 4:23 IST
Last Updated 6 ಜುಲೈ 2025, 4:23 IST
ಗದಗ ನಗರದ ಹೊರ ವಲಯದಲ್ಲಿರುವ ಮಲ್ಲಸಮುದ್ರ ಗದಗ ಜಿಲ್ಲಾ ಪೊಲೀಸ್‌ ಮೀಸಲು ಪಡೆ ಮೈದಾನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಮಾತನಾಡಿದರು
ಗದಗ ನಗರದ ಹೊರ ವಲಯದಲ್ಲಿರುವ ಮಲ್ಲಸಮುದ್ರ ಗದಗ ಜಿಲ್ಲಾ ಪೊಲೀಸ್‌ ಮೀಸಲು ಪಡೆ ಮೈದಾನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಮಾತನಾಡಿದರು   

ಗದಗ: ‘ಪೊಲೀಸ್ ಇಲಾಖೆಯಿಂದ ಅವಳಿ ನಗರ ಗದಗ ಬೆಟಗೇರಿಯಲ್ಲಿ ಥರ್ಡ್‌ ಐ ಯೋಜನೆ ಜಾರಿಗೊಳಿಸಿರುವ ಪರಿಣಾಮ ಕಾನೂನು ಸುವ್ಯವಸ್ಥೆ ಬಿಗಿಯಾಗಿದೆ. ಅಪರಾಧ, ಅಪಘಾತಗಳ ಸಂಖ್ಯೆಯೂ ಇಳಿಮುಖವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ನಗರದ ಹೊರ ವಲಯದಲ್ಲಿರುವ ಮಲ್ಲಸಮುದ್ರ ಗದಗ ಜಿಲ್ಲಾ ಪೊಲೀಸ್‌ ಮೀಸಲು ಪಡೆ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಶನಿವಾರ ಭೂಮಿ‌ಪೂಜೆ ನೆರವೇರಿಸಿ ಮಾತನಾಡಿದರು.

‘ಸಾರ್ವಜನಿಕರು ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಅಲ್ಲದೇ ವಿವಿಧ ಅಪರಾಧ ಪ್ರಕರಣಗಳಡಿ ಪ್ರಕರಣ ಭೇದಿಸಲು ಸಹ ಪೊಲೀಸರಿಗೆ ಥರ್ಡ್‌ ಐ ಸಹಕಾರಿಯಾಗಿದೆ. ಆ ಮೂಲಕ ಪ್ರಕರಣಗಳ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ’ ಎಂದು ಹೇಳಿದರು.

ADVERTISEMENT

‘ಪೊಲೀಸ್ ಇಲಾಖೆಗೆ ಎರಡು ವಾಹನಗಳನ್ನು ಹಸ್ತಾಂತರಿಸಲಾಗಿದ್ದು, ಇವು ಪೊಲೀಸ್‌ ಇಲಾಖೆಗೆ ಸಹಕಾರಿಯಾಗಲಿದೆ’ ಎಂದರು.

ಇದೇ ಸಂದರ್ಭದಲ್ಲಿ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿದ್ದ ಅಡೆತಡೆಗಳನ್ನು ನಿವಾರಿಸಿದ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಸಚಿವರು, ಪೊಲೀಸ್ ಇಲಾಖೆಯಿಂದ ಅಭಿನಂದನಾ ಪತ್ರ ನೀಡಿ, ಗೌರವಿಸಲಾಯಿತು.

ಅಲ್ಲದೆ ರಸ್ತೆ ನಿರ್ಮಾಣಕ್ಕೆ ನಿವೇಶನ, ಜಾಗ ಬಿಟ್ಟು ಕೊಟ್ಟು ಸಹಕಾರ ನೀಡಿದ ಸಾರ್ವಜನಿಕರನ್ನೂ ಇದೇ ಸಂದರ್ಭದಲ್ಲಿ ಗೌರವಿಸಲಾಯಿತು.

ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ‌.ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ್‌ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‌ ಕುಮಾರ್‌ ಇದ್ದರು.

ರಾಜ್ಯ ಹೆದ್ದಾರಿಯಿಂದ ಮಲ್ಲಸಮುದ್ರ ಪೊಲೀಸ್‌ ಮೀಸಲು ಪಡೆ ಕ್ಯಾಂಪಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯು ಗುಣಮಟ್ಟದಲ್ಲಿ ರಾಜ್ಯಕ್ಕೆ ಮಾದರಿಯಾಗುವಂತೆ ಇರಬೇಕು
–ಎಚ್.ಕೆ.ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ
ಶಾಸಕರಿಗೆ ಪೊಲೀಸ್‌ ಇಲಾಖೆಯಿಂದ ಧನ್ಯವಾದ
‘1.6 ಕಿಲೋಮೀಟರ್ ರಸ್ತೆ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ₹1 ಕೋಟಿ ಹಾಗೂ ಸ್ಥಳೀಯ ಶಾಸಕರ ಪ್ರದೇಶ ಅಭಿವೃದ್ಧಿ ಅನುದಾನದಲ್ಲಿ ₹50 ಲಕ್ಷ ನೀಡುವ ಮೂಲಕ ರಸ್ತೆ ನಿರ್ಮಾಣಕ್ಕೆ ಸಚಿವ ಎಚ್.ಕೆ.ಪಾಟೀಲ ಅವರು ಅನುದಾನ ಒದಗಿಸಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಹೇಳಿದರು. ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ‌.ಎಸ್.ಪಾಟೀಲ ಅವರು ನಿಗಮದಿಂದ ಒಂದು ವಾಹನ‌ ನೀಡಿದ್ದಾರೆ. ಅದೇರೀತಿ ಶಾಸಕರ ಪ್ರದೇಶ ಅಭಿವೃದ್ಧಿ ಅನುದಾನದ ಅಡಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಇಲಾಖೆಗೆ ಒಂದು ವಾಹನ ಒದಗಿಸಿದ್ದಾರೆ’ ಎಂದು ಧನ್ಯವಾದ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.