
ಗದಗ: ಮಹಾಯೋಗಿ ವೇಮನರ ತತ್ವ ಸಿದ್ಧಾಂತಗಳು ಇಂದಿನ ಸಮಾಜಕ್ಕೆ ಹೆಚ್ಚು ಪ್ರಸ್ತುತವಾಗಿವೆ. ಅವುಗಳನ್ನು ಇನ್ನಷ್ಟು ಪ್ರಚುರಪಡಿಸಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ, ಮಹಾಯೋಗಿ ವೇಮನ ಮತ್ತು ಗದಗ ಜಿಲ್ಲಾ ರೆಡ್ಡಿ ಸಮಾಜ ಸಂಘದ ಸಹಯೋಗದಲ್ಲಿ ಸೋಮವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಕನ್ನಡ ನಾಡಿಗೆ ಮಹಾಯೋಗಿ ವೇಮನರನ್ನು ಪರಿಚಯಿಸಿದವರು ಎಸ್.ಆರ್.ಪಾಟೀಲರು. ಬಾಯಿಂದ ಬಾಯಿಗೆ ಹರಿದಾಡುತ್ತಿದ್ದ ವೇಮನರ ಸಾಹಿತ್ಯವನ್ನು ಸಿ.ಪಿ.ಬ್ರೌನ್ ಅವರು ಇಂಗ್ಲಿಷ್ ಭಾಷೆಗೆ ಅನುವಾದಿಸಿ ವಿಶ್ವಕ್ಕೆ ಪರಿಚಯಿಸಿದ್ದಾರೆ. ವೇಮನರ 20 ಸಾವಿರಕ್ಕೂ ಅಧಿಕ ಪ್ರತಿಗಳನ್ನು ಮುದ್ರಿಸಿ ಹಂಚಿಕೆ ಮಾಡಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ವೇಮನ ಪೀಠ ಸ್ಥಾಪನೆಯಾಗಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಹೇಳಿದರು.
‘ಸಾರಸ್ವತ ಲೋಕಕ್ಕೆ ವೇಮನರ ವಿಚಾರಧಾರೆಯನ್ನು ಪರಿಚಯಿಸುವ ಉದ್ದೇಶದಿಂದ ಅವರ ಕುರಿತಾದ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಮುಂದಿನ 15 ದಿನಗಳೊಳಗೆ ರೆಡ್ಡಿ ಸಮಾಜದ ಸಮುದಾಯ ಭವನಕ್ಕೆ ಜಾಗ ದೊರೆಯಲಿದೆ. ಮುಂದಿನ ವರ್ಷ ಅಲ್ಲಿಯೇ ಮಹಾಯೋಗಿ ವೇಮನ ಜಯಂತಿ ಆಚರಿಸಲಾಗುವುದು’ ಎಂದು ಹೇಳಿದರು.
ಪ್ರೊ.ಅನಿಲ ವೈದ್ಯ ಉಪನ್ಯಾಸ ನೀಡಿ, ಮಹಾಯೋಗಿ ವೇಮನರು ತಮ್ಮ ವಚನಗಳಲ್ಲಿ ನಿಜವನರಿತವನು ನೀತಿವಂತನು ಎಂದು ಹೇಳಿದ್ದಾರೆ. ಆಸೆಗಳನ್ನು ತ್ಯಜಿಸಿ ಸತ್ಯವನರಿತು ನಿಜಮಾನವರಾಗಬೇಕು. ವೇಮನರು ವಿಶ್ವಮಾನವರಾಗಿ ಧರ್ಮ ಜಾಗೃತಿ ಮಾಡಿದರು. ವೇಮನರ ಚರಿತ್ರೆಗಳನ್ನು ಶಾಲೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕು ಎಂದರು.
ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವೇಮನರ ಕುರಿತು ನಾಲ್ಕು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.
ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಕೃಷ್ಣಗೌಡ ಪಾಟೀಲ, ಎಚ್.ಎಸ್.ಶಿವನಗೌಡ್ರ, ವಾಸಣ್ಣ ಕುರಡಗಿ, ಶ್ರೀನಿವಾಸ ದ್ಯಾವನಗೌಡ್ರ, ಆರ್.ಎಸ್.ಪಾಟೀಲ ಇದ್ದರು.
ರವಿ ಮೂಲಿಮನಿ ಸ್ವಾಗತಿಸಿದರು. ಸುಧಾ ಹುಚ್ಚಣ್ಣವರ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ ವಂದಿಸಿದರು.
ರೆಡ್ಡಿ ಸಮಾಜ ಅನೇಕ ಶ್ರೇಷ್ಠ ವ್ಯಕ್ತಿಗಳನ್ನು ಸಮಾಜಕ್ಕೆ ನೀಡಿದೆ. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಹಾಗೂ ಮಹಾಯೋಗಿ ವೇಮನರಂತಹ ಸಮಾಜದ ಮಹಾನ್ ವ್ಯಕ್ತಿತ್ವಗಳುಎಚ್.ಕೆ. ಪಾಟೀಲ ಸಚಿವ
ವೇಮನ ವಿಚಾರಗಳು ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ವೇಮನರು ತಮ್ಮ ವಚನಗಳ ಮೂಲಕ ದೇಶಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆಬಿ.ಆರ್. ಯಾವಗಲ್ ಮಾಜಿ ಸಚಿವ
‘ಸಮಾಜಕ್ಕಾಗಿ ಬದುಕಿದ ವೇಮನರು’ ‘ತಮಗಾಗಿ ಬದುಕದೇ ಸಮಾಜಕ್ಕಾಗಿ ಶ್ರಮಿಸಿದ ಮಹಾನ್ ವ್ಯಕ್ತಿಗಳ ಜಯಂತಿಗಳನ್ನು ನಾವು ಆಚರಿಸುತ್ತೇವೆ. ಅಂತಹ ಮಹಾನ್ ವ್ಯಕ್ತಿಗಳಲ್ಲಿ ಮಹಾಯೋಗಿ ವೇಮನರು ಒಬ್ಬರು’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು. ‘ವೇಮನರು ಸಾಕಷ್ಟು ಕವನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಅವರ ಕವನಗಳು ಸರಿಯಾಗಿ ದಾಖಲೀಕರಣವಾಗಿರಲಿಲ್ಲ. ಅನೇಕ ಕವನಗಳು ತಾಳೆಗರಿಗಳಲ್ಲಿ ಇದ್ದು ಅವುಗಳನ್ನು ಸಂರಕ್ಷಿಸಲು ಬ್ರಿಟಿಷ್ ಸರ್ಕಾರವೇ ಮುಂದಾಯಿತು ಎಂದರೆ ವೇಮನರ ಕವಿತೆಗಳ ಶಕ್ತಿ ಎಷ್ಟಿತ್ತು ಎಂಬುದನ್ನು ಅರಿಯಬಹುದು’ ಎಂದರು. ‘ಈ ಶತಮಾನ ಜ್ಞಾನದ ಯುಗ ಪಾಂಡಿತ್ಯದ ಯುಗ. ಸಮಾಜದ ಎಲ್ಲ ಮಕ್ಕಳಿಗೂ ಸಮರ್ಪಕ ಜ್ಞಾನ ಹಾಗೂ ಶಿಕ್ಷಣ ನೀಡಬೇಕು. ಸಮುದಾಯ ಭವನ ನಿರ್ಮಾಣಕ್ಕಾಗಿ ₹10 ಲಕ್ಷ ಅನುದಾನ ನೀಡಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.