ಸಾಂದರ್ಭಿಕ ಚಿತ್ರ
ಗದಗ: ‘ಆರೋಗ್ಯಕರ ಆರಂಭಗಳು; ಭರವಸೆಯ ಭವಿಷ್ಯ’ ಎಂಬುದು ಈ ವರ್ಷದ ವಿಶ್ವ ಆರೋಗ್ಯ ದಿನಾಚರಣೆಯ ಥೀಮ್ ಆಗಿದೆ. ಜತೆಗೆ ಈ ವರ್ಷದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದಂತಹ ಸೇವೆಗಳನ್ನು ಮತ್ತಷ್ಟು ಬಲಿಷ್ಠಗೊಳಿಸುವುದು ಆರೋಗ್ಯ ಇಲಾಖೆಯ ಧ್ಯೇಯವಾಗಿದೆ.
‘ಖುಷಿ ಕುಟುಂಬದ ಸೂತ್ರ ತಾಯಿ ಮತ್ತು ಮಕ್ಕಳ ಆರೋಗ್ಯದಲ್ಲಿದೆ. ಈ ನಿಟ್ಟಿನಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ತೀವ್ರ ಪ್ರಮಾಣದಲ್ಲಿ ಕಡಿಮೆಗೊಳಿಸುವ ಗುರಿಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿದೆ. ಮಹಿಳೆಯರ ದೀರ್ಘಕಾಲೀನ ಆರೋಗ್ಯ ಮತ್ತು ಯೋಗಕ್ಷೇಮ ಇಲಾಖೆಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ತಪಾಸಣೆ ನಡೆಸುವ ತಜ್ಞ ವೈದ್ಯರ ನೇಮಕ ಹಾಗೂ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಎನ್ಐಸಿಯುಗಳ ಹೆಚ್ಚಳಕ್ಕೆ ಸರ್ಕಾರ ಕ್ರಮವಹಿಸಲಿದೆ’ ಎನ್ನುತ್ತಾರೆ ಗದಗ ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು.
‘ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಗದಗ ಜಿಲ್ಲೆಯಲ್ಲಿ ತಾಯಿ ಮತ್ತು ಮಗುವಿನ ಮರಣ ಪ್ರಮಾಣ ಕಡಿಮೆ ಇದೆ. ಬಾಣಂತಿಯರ ಸಾವಿನ ಪ್ರಮಾಣ ಕೂಡ ಶೂನ್ಯವಾಗಿದೆ’ ಎಂದು ಗದಗ ತಾಲ್ಲೂಕು ವೈದ್ಯಾಧಿಕಾರಿ ಡಾ. ಪ್ರೀತ್ ಖೋನ ತಿಳಿಸಿದ್ದಾರೆ.
ಕೆಲವು ಮಹಿಳೆಯರು ಗರ್ಭಿಣಿಯಾದ ನಂತರ ಸಾಕಷ್ಟು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಅಂತಹವರಲ್ಲಿ ಕೆಲವರು ಪ್ರಸವ ಸಮಯದಲ್ಲಿ ಸಾವನ್ನಪ್ಪುತ್ತಾರೆ. ಇಂತಹ ಪ್ರಕರಣಗಳನ್ನೂ ಕನಿಷ್ಠ ಮಟ್ಟಕ್ಕೆ ಇಳಿಸುವ ಉದ್ದೇಶದಿಂದ ಪ್ರಧಾನಮಂತ್ರಿ ಸುರಕ್ಷಾ ಮಾತೃತ್ವ ಯೋಜನೆ ಜಾರಿಯಲ್ಲಿದ್ದು, ಗದಗ ಜಿಲ್ಲೆಯಲ್ಲಿ ಪ್ರತಿ ತಿಂಗಳ 9 ಮತ್ತು 24ನೇ ರಂದು ಹೈರಿಸ್ಕ್ ಹೊಂದಿರುವ ಗರ್ಭಿಣಿಯರನ್ನು ವಿಶೇಷವಾಗಿ ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಾರಂಭದಲ್ಲೇ ಮುಂಜಾಗ್ರತೆ ವಹಿಸುತ್ತಿರುವುದರಿಂದ ತಾಯಿ ಮರಣ ಪ್ರಮಾಣ ಕಡಿಮೆ ಆಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು.
ಗದಗ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ವ್ಯವಸ್ಥೆ ಚೆನ್ನಾಗಿರುವ ಕಾರಣ ಅಕ್ಕಪಕ್ಕದ ಜಿಲ್ಲೆಯವರೂ ಇಲ್ಲಿಗೆ ಬರುತ್ತಾರೆ. ಪ್ರತಿ ತಿಂಗಳು 1,500ಕ್ಕೂ ಹೆಚ್ಚು ಸಹಜ ಹೆರಿಗೆಗಳು ಆಗುತ್ತವೆ ಎನ್ನುತ್ತಾರೆ ವೈದ್ಯರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.