ADVERTISEMENT

ಯುವಶಕ್ತಿಯಿಂದ ದೇಶದ ಭವಿಷ್ಯ ನಿರ್ಮಾಣ

ಪದವಿಪೂರ್ವ ಮಹಾವಿದ್ಯಾಲಯಗಳ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಸಚಿವ ಚಾಲನೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2025, 6:59 IST
Last Updated 26 ಅಕ್ಟೋಬರ್ 2025, 6:59 IST
ಗದಗ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಎಚ್‌.ಕೆ. ಪಾಟೀಲ ಕ್ರೀಡಾಜ್ಯೋತಿ ಸ್ವೀಕರಿಸಿದರು
ಗದಗ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಸಚಿವ ಎಚ್‌.ಕೆ. ಪಾಟೀಲ ಕ್ರೀಡಾಜ್ಯೋತಿ ಸ್ವೀಕರಿಸಿದರು   

ಗದಗ: ‘ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಂಡರೆ ಶಾರೀರಿಕ ಆರೋಗ್ಯ ಮಾತ್ರವಲ್ಲ; ಮಾನಸಿಕ ದೃಢತೆ ಹಾಗೂ ನಾಯಕತ್ವ ಗುಣಗಳು ಬೆಳೆಯುತ್ತವೆ. ಇಂತಹ ಯುವಶಕ್ತಿಯೇ ದೇಶದ ಭವಿಷ್ಯವನ್ನು ರೂಪಿಸುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿಪೂರ್ವ), ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ತೋಂಟದ ಸಿದ್ದೇಶ್ವರ ವಿಜ್ಞಾನ ವಾಣಿಜ್ಯ ಹಾಗೂ ಕಲಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಶನಿವಾರ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಮಹಾವಿದ್ಯಾಲಯಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

‘ಕ್ರೀಡೆ ಯುವಕರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತದೆ. ಸೋಲಿನಲ್ಲಿ ಸಹ ಕಲಿಯುವ ನೈತಿಕತೆ, ಗೆಲುವಿನಲ್ಲಿ ಸಹ ವಿನಮ್ರತೆ ಇರಬೇಕೆಂಬ ಗುಣ ಕ್ರೀಡೆಯಿಂದಲೇ ಬರುವುದು. ವಿದ್ಯಾರ್ಥಿಗಳು ಕೇವಲ ಪಠ್ಯ ವಿಷಯಗಳಲ್ಲ, ಕ್ರೀಡಾಂಗಣದಲ್ಲೂ ಸಮರ್ಥರಾಗಬೇಕು. ನಿಜವಾದ ಶಿಕ್ಷಣವು ಶರೀರ, ಮನಸ್ಸು ಹಾಗೂ ಆತ್ಮದ ಸಮತೋಲನದಲ್ಲಿದೆ’ ಎಂದು ಹೇಳಿದರು.

ADVERTISEMENT

ಗದಗ ಜಿಲ್ಲೆಯ ವಿದ್ಯಾರ್ಥಿಗಳು ಕ್ರೀಡೆ ಮತ್ತು ವಿದ್ಯಾಭ್ಯಾಸದಲ್ಲಿ ರಾಜ್ಯಕ್ಕೆ ಮಾದರಿಯಾಗಬೇಕು. ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿಯೂ ಜಿಲ್ಲೆ ಮುಂಚೂಣಿಯಲ್ಲಿರಬೇಕು ಎಂಬ ಆಶಯ ವ್ಯಕ್ತಪಡಿಸಿದರು.

‘ಗದಗ ಜಿಲ್ಲೆಯು ಕಬಡ್ಡಿ, ಹಾಕಿ, ಅಥ್ಲೆಟಿಕ್ಸ್‌, ಫುಟ್ಬಾಲ್ ಕ್ರೀಡೆಗಳಲ್ಲಿ ಮಹತ್ವದ ಸಾಧನೆ ಮಾಡುವ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕೀರ್ತಿ ತಂದುಕೊಟ್ಟಿದೆ. ಇದು ನಮ್ಮ ಹೆಮ್ಮೆ. ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಕೊರತೆ ಇಲ್ಲ; ಜತೆಗೆ ತರಬೇತಿ ಹಾಗೂ ಕ್ರೀಡಾ ಸೌಲಭ್ಯವನ್ನು ಸರ್ಕಾರದಿಂದ ಹೆಚ್ಚು ಒದಗಿಸಲಾಗಿದೆ’ ಎಂದು ಹೇಳಿದರು.

‘ಯುವಜನರು ಸವಲತ್ತುಗಳ ಉಪಯೋಗ ಪಡೆಯುವ ಮೂಲಕ ಕ್ರೀಡಾ ಸಾಧನೆ ಮಾಡಬೇಕು. ದುಷ್ಟಗಳಿಂದ ಮುಕ್ತರಾಗಿ ಉತ್ತಮ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕು’ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ ಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಎಸ್.ಎನ್.ಬಳ್ಳಾರಿ, ಶಿವಾನಂದ ಪಟ್ಟಣಶೆಟ್ಟಿ, ಬಸವರಾಜ ಕಡೇಮನಿ, ಯೋಗೇಶ್ ಕುಮಾರ, ಎಸ್‌ಪಿ ರೋಹನ್ ಜಗದೀಶ್, ಎಡಿಸಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಿಡಿಪಿಯು ಸಿದ್ಧಲಿಂಗ ಮಸನಾಯಕ, ಶರಣು ಗೊಗೇರಿ, ಕೊಟ್ರೇಶ ವಿಭೂತಿ, ಕೊಟ್ರೇಶ ಮೆಣಸಿನಕಾಯಿ ಸೇರಿದಂತೆ ವಿವಿಧ ಕಾಲೇಜುಗಳ ಪ್ರಾಚಾರ್ಯರು, ದೈಹಿಕ ಶಿಕ್ಷಣ ಶಿಕ್ಷಕರು, ನಿರ್ಣಾಯಕರು, ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.