ಮೈಸೂರು: `ಜು. 16ರಂದು ನಡೆಸಲು ಉದ್ದೇಶಿಸಿರುವ ವಿಧಾನ ಮಂಡಲ ಅಧಿವೇಶನವನ್ನು ಯಾವುದೇ ಕಾರಣಕ್ಕೂ ಮುಂದೂಡಬಾರದು~ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಆಗ್ರಹಿಸಿದರು.
`ಈಗಾಗಲೇ ದಿನಾಂಕ ನಿಗದಿ ಮಾಡಲಾಗಿದೆ. ಆದ್ದರಿಂದ ಅಧಿವೇಶನ ಮುಂದೂಡಬಾರದು ಎಂದು ರಾಜ್ಯಪಾಲರನ್ನು ಒತ್ತಾಯಿಸಲಾಗುವುದು. ರಾಜ್ಯದ 148 ತಾಲ್ಲೂಕುಗಳು ಬರ ಪೀಡಿತ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರಿಗೆ ರಾಜ್ಯದ ಸಂಕಷ್ಟದ ಬಗ್ಗೆ ಅರಿವಿದೆ. ಆದರೆ, ಆಡಳಿತಾರೂಢ ಬಿಜೆಪಿಗೆ ಬರದ ತೀವ್ರತೆ ಗೊತ್ತಾಗುತ್ತಿಲ್ಲ~ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
`ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಶೇ 50ರಷ್ಟು ಬೆಳೆ ನಷ್ಟವಾಗಿದೆ. ರಾಜ್ಯದ 224 ಕ್ಷೇತ್ರಗಳಲ್ಲೂ ಸಂಕಷ್ಟದ ಪರಿಸ್ಥಿತಿ ಇದೆ. ಅಧಿವೇಶನದಲ್ಲಿ ಬರಗಾಲ ಹಾಗೂ ಪರ್ಯಾಯ ಕ್ರಮಗಳ ಬಗ್ಗೆ ಚರ್ಚೆ ಆಗಬೇಕು. ಬಡ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಆಗಬೇಕೆಂದು ಪಕ್ಷಾತೀತ ನಿರ್ಣಯ ಅಂಗೀಕರಿಸಬೇಕು~ ಎಂದು ಆಗ್ರಹಿಸಿದರು.
`ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದೆ. ವಿದ್ಯುತ್ ಅಭಾವದಿಂದ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ವಿದ್ಯಾರ್ಥಿಗಳು ಸಂಜೆಯಾದರೆ ಓದಿಗೆ ಪರದಾಡುವಂತಾಗಿದೆ. ಸಂಜೆ 6 ರಿಂದ ರಾತ್ರಿ 10 ಗಂಟೆ ವರೆಗೆ ಸಿಂಗಲ್ ಫೇಸ್ ವಿದ್ಯುತ್ ಕೊಡಲು ಆಗದಿದ್ದರೆ ಈ ಸರ್ಕಾರ ಏಕೆ ಇರಬೇಕು?~ ಎಂದು ಪ್ರಶ್ನಿಸಿದರು.
`ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿರುವ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಸರ್ಕಾರ ನಡೆಸುವುದಾಗಿ ಹೇಳಿದ್ದಾರೆ. ಪ್ರಾಮಾಣಿಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಹೇಳುವ ಶೆಟ್ಟರ್, ಇನ್ನೊಂದೆಡೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ತನಿಖೆ ಎದುರಿಸುತ್ತಿರುವ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಸರ್ಕಾರ ನಡೆಸಲಾಗುವುದು ಎಂದು ಹೇಳುವ ಮೂಲಕ, ತಮ್ಮ ಸರ್ಕಾರ ಯಾವ ಹಾದಿ ಹಿಡಿಯಲಿದೆ ಎಂಬುದರ ಮುನ್ಸೂಚನೆ ನೀಡಿದ್ದಾರೆ~ ಎಂದು ಟೀಕಿಸಿದರು.
`ಹಾಲಾಡಿ ಶ್ರೀನಿವಾಸ ಶೆಟ್ಟಿಯಂತ ಸಭ್ಯ ಶಾಸಕರಿಗೆ, ಸಂಜೆ ಮಂತ್ರಿಯಾಗಲು ಸಿದ್ಧವಾಗಿ ಎಂದು ಹೇಳಿ ಬೆಳಗ್ಗೆ ನಿರಾಕರಿಸಿದ್ದಾರೆ. ಪಕ್ಷ ಯಾವುದೇ ಇರಲಿ ಶ್ರೀನಿವಾಸ ಶೆಟ್ಟಿ ಪ್ರಾಮಾಣಿಕರು, ಗುಂಪು ರಾಜಕಾರಣ ಮಾಡಿದವರಲ್ಲ, ಅಂತಹವರಿಗೆ ಬಿಜೆಪಿ ಮೋಸ ಮಾಡಿದೆ.
ಬಿಜೆಪಿ ವೋಟ್ ಬ್ಯಾಂಕ್ ಆಗಿರುವ ಕರಾವಳಿ ಪ್ರದೇಶಕ್ಕೆ ಮಂತ್ರಿ ಸ್ಥಾನ ಸಿಗದೆ ಇರುವುದು ಆ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ತೋರಿಸುತ್ತದೆ~ ಎಂದರು. ಶಾಸಕ ಸಾ.ರಾ.ಮಹೇಶ್, ಮಾಜಿ ಮೇಯರ್ ಸಂದೇಶ್ಸ್ವಾಮಿ, ಉಪ ಮೇಯರ್ ಮಹಾದೇವಪ್ಪ, ಮಾಜಿ ಉಪ ಮೇಯರ್ ಎಂ.ಜೆ.ರವಿಕುಮಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.