ಹಾಸನ: ಎಂಡೋಸಲ್ಫಾನ್ ನಿಷೇಧ ಹಾಗೂ ರೈತರಿಗೆ ಕಡಿಮೆ ದರದಲ್ಲಿ ಡೀಸೆಲ್ ಒದಗಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಕೇಂದ್ರದ ರೈತ ವಿರೋಧಿ ನೀತಿ ವಿರುದ್ಧ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
`ಹಲವು ರಾಷ್ಟ್ರಗಳಲ್ಲಿ ಎಂಡೋಸಲ್ಫಾನ್ ನಿಷೇಧ ಮಾಡಲಾಗಿದೆ. ನಮ್ಮಲ್ಲೂ ನಿಷೇಧಿಸಬೇಕು ಎಂದು ಕೇಂದ್ರ ಪ್ರಕೃತಿ ವಿಜ್ಞಾನಾಲಯ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೂಚಿಸಿದ್ದರೂ ಬಹು ರಾಷ್ಟ್ರೀಯ ಕಂಪೆನಿಗಳ ಒತ್ತಡಕ್ಕೆ ಮಣಿದು ಇದನ್ನು ನಿಷೇಧಿಸಲು ಹಿಂದೇಟು ಹಾಕುತ್ತಿದೆ.
`ಡೀಸೆಲ್ ಬೆಲೆ ಏರಿಕೆಯಿಂದ ಕೃಷಿಯ ವೆಚ್ಚ ಹೆಚ್ಚಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಕೃಷಿಗೆ ಉಪಯೋಗಿಸುವ ಟ್ರ್ಯಾಕ್ಟರ್, ಮೀನುಗಾರರು ಬಳಸುವ ಬೋಟ್ಗಳಿಗೆ ರಿಯಾಯಿತಿ ದರದಲ್ಲಿ ಡೀಸೆಲ್ ಒದಗಿಸಬೇಕು ಬತ್ತ, ತೊಗರಿ ಮುಂತಾದ ಧಾನ್ಯಗಳಿಗೆ ವೈಜ್ಞಾನಿಕವಾಗಿ ಬೆಲೆ ನಿಗದಿಮಾಡಬೇಕು~ಎಂದು ಆಗ್ರಹಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದ ಪ್ರತಿಭಟನಾಕಾರರು ಅಲ್ಲಿ ಈ ಎಲ್ಲ ಬೇಡಿಕೆಗಳನ್ನುಳ್ಳ ಮನವಿಪತ್ರವನ್ನು ಜಿಲ್ಲಾಧಿಕಾರಿಗೆ ಹಸ್ತಾಂತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.