ADVERTISEMENT

ಕನ್ನಡ ವ್ಯಾವಹಾರಿಕ ಭಾಷೆಯಾಗಲಿ'

​ಪ್ರಜಾವಾಣಿ ವಾರ್ತೆ
Published 25 ಜೂನ್ 2013, 7:57 IST
Last Updated 25 ಜೂನ್ 2013, 7:57 IST

ಅರಸೀಕೆರೆ: `ಕೇವಲ ಭಾಷಣಗಳ ಮೂಲಕ ಕನ್ನಡವನ್ನು ಉಳಿಸಲು ಸಾಧ್ಯವಿಲ್ಲ. ಕನ್ನಡ ಉಳಿಯಬೇಕು ಎಂದರೆ ಎಲ್ಲ ವ್ಯವಹಾರಗಳು ಕನ್ನಡದಲ್ಲೇ ಆಗಬೇಕು' ಎಂದು ಹಿರಿಯ ಸಾಹಿತಿ ಡಾ. ಹಿ.ಶಿ ರಾಮಚಂದ್ರೇಗೌಡ ಸೋಮವಾರ ತಿಳಿಸಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಬಸವರಾಜೇಂದ್ರ ಪ್ರೌಢಶಾಲೆ ಆವರಣದ ಉಮಾದೇವಿ ವೇದಿಕೆಯಲ್ಲಿ ಸೋಮವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ 5ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಕನ್ನಡವನ್ನು ಉಳಿಸಿ- ಉಳಿಸಿ ಎಂದು ಕೂಗುತ್ತಿರುವ ಜನರು ಕನ್ನಡ ಭಾಷೆಯನ್ನು ಬೆಳೆಸುವ ಕಡೆ ಗಮನ ನೀಡುತ್ತಿಲ್ಲ ಎಂದು ವಿಷಾದಿಸಿದರು.

ಸಾಹಿತ್ಯ ಸಮ್ಮೇಳನ ಸಂಸ್ಕೃತಿ ಮೇಳವಾದಾಗ ಮಾತ್ರ ಸಮಾಜವನ್ನು ಸಾಂಸ್ಕೃತಿಕವಾಗಿ ಕಟ್ಟಬಹುದು. ಆಧುನಿಕ ಶಿಕ್ಷಣ ನೀಡುವ ಜತೆಗೆ ನೈತಿಕ ಶಿಕ್ಷಣ ನೀಡಬೇಕಿದೆ. ಪಾಶ್ಚಾತ್ಯ ಸಂಸ್ಕೃತಿಗೆ ದಾಸರಾಗುತ್ತಿರುವ ಬಹುತೇಕ ಶಿಕ್ಷಕರು ದೇಸಿ ಸಂಸ್ಕೃತಿಯ ಬಗ್ಗೆ ಅಸಡ್ಡೆ ತೋರುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಆಶಯ ನುಡಿಗಳನ್ನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಲ್. ಜನಾರ್ದನ್, ಜಿಲ್ಲೆಯ ಎ್ಲ್ಲಲ ತಾಲ್ಲೂಕುಗಳಲ್ಲಿ ನಡೆದ ಸಾಹಿತ್ಯ ಸಮ್ಮೇಳನಕ್ಕಿಂತ ಅರಸೀಕೆರೆಯಲ್ಲಿ ಇಂದು ನಡೆಯುತ್ತಿರುವ ಅಕ್ಷರ ಜಾತ್ರೆ ತುಂಬಾ ಅರ್ಥಪೂರ್ಣವಾಗಿದೆ. ಅಲ್ಲದೆ ಸಾಹಿತ್ಯದ ಬಗ್ಗೆ ಎಲ್ಲರಲ್ಲೂ ಒಂದು ರೀತಿ ಸಂಚಲನ ಮೂಡಿಸಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ವಸಂತಾ ಹೊನ್ನಪ್ಪ, ಮಾಜಿ ಅಧ್ಯಕ್ಷ ಹಾರನಹಳ್ಳಿ ಶಿವಮೂರ್ತಿ,  ಪುರಸಭೆ ಮಾಜಿ ಅಧ್ಯಕ್ಷ ಎನ್.ಎಸ್. ಸಿದ್ದರಾಮಶೆಟ್ಟಿ  ತಹಶೀಲ್ದಾರ್ ಕೇಶವಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ನಟರಾಜ್, ಸಮಾಜ ಕಲ್ಯಾಣ ಇಲಾಖೆಯ ಮಹೇಶ್, ಲೋಕೋಪಯೋಗಿ ಇಲಾಖೆಯ ಎ.ಇ.ಇ. ಹೊನ್ನಾವರ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವೇಗೌಡ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.