ಬೇಲೂರು: `ಜೆಡಿಎಸ್ ಮುಖಂಡ ಕೆ.ಎಸ್.ಪೂರ್ಣೇಶ್ ಕಾಂಗ್ರೆಸ್ ಪಕ್ಷ ಸೇರಿರುವ ವಿಚಾರವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ಶಿವರಾಂ ಸಣ್ಣ ವಿಚಾರವನ್ನು ದೊಡ್ಡದು ಮಾಡುತ್ತಿದ್ದಾರೆ~ ಎಂದು ಶಾಸಕ ವೈ.ಎನ್.ರುದ್ರೇಶ್ಗೌಡ ಹೇಳಿದರು.
ಬೇರೆ ಪಕ್ಷದ ಮುಖಂಡರು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಅಧಿಕಾರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗಿದೆ. ಅದರಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎನ್.ಮಾಧವೇಗೌಡ ಪೂರ್ಣೇಶ್ ಅವರನ್ನು ಅಧಿಕೃತವಾಗಿ ಎ.ಐ.ಸಿ.ಸಿ. ನಿಯಮದಂತೆ ಪ್ರಾಥಮಿಕ ಸದಸ್ಯತ್ವ ನೀಡಿ ಸೇರ್ಪಡೆ ಮಾಡಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರೂ ಪೂರ್ಣೇಶ್ ಸೇರ್ಪಡೆಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧ್ಯಕ್ಷ ರಾದ ಬಿ.ಶಿವರಾಂ ಅವರಿಗೂ ದೂರ ವಾಣಿಯ ಮೂಲಕ ಈ ವಿಚಾರವನ್ನು ತಿಳಿಸಿದ್ದೇವೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪಕ್ಷಕ್ಕೆ ಯಾರನ್ನಾದರೂ ಸೇರಿಸಿ ಕೊಳ್ಳುವ ಸಂಬಂಧ ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ಕೇಳವು ಅವಶ್ಯಕತೆಯಿಲ್ಲ. ತಾಲ್ಲೂಕು ಕಾಂಗ್ರೆಸ್ನಲ್ಲಿ ಯಾವುದೇ ರೀತಿಯ ಗುಂಪುಗಾರಿಕೆ ಇಲ್ಲ. ಎಲ್ಲಾ ಹಳ್ಳಿಗಳಲ್ಲಿ ಪಕ್ಷದ ಸಂಘಟನೆ ಮಾಡಲಾಗುತ್ತಿದೆ ಎಂದರು.
ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎನ್.ಮಾಧವೇಗೌಡ ಅವರನ್ನು ಒಂದು ತಿಂಗಳಲ್ಲಿ ಬದಲಾಯಿಸಿ ವೈ.ಟಿ.ದಾಮೋದರ್ ಅವರನ್ನು ನೇಮಕ ಮಾಡುವುದಾಗಿ ತಾವು ಎಲ್ಲಿಯೂ ಹೇಳಿಕೆ ನೀಡಿಲ್ಲ. ಮಾಧವೇಗೌಡರನ್ನು ಅಧ್ಯಕ್ಷರನ್ನಾಗಿ ಮುಂದುವರೆಸಲು ಸ್ವಯಂ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ ರುದ್ರೇಶ್ಗೌಡ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣೇಶ್ ಅವರೊಂದಿಗೆ ಚೀಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಕೇಶವಮೂರ್ತಿ, ಬೊಮ್ಮೇನಹಳ್ಳಿ ವೆಂಕಟೇಶ್, ಮರೂರು ಜಗದೀಶ್, ಚಂದ್ರು ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎನ್. ಮಾಧವೇಗೌಡ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರೇ ಪಕ್ಷಕ್ಕೆ ಬರುವವರನ್ನು ಸೇರ್ಪಡೆ ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಬೇರೆ ಪಕ್ಷದವರು ಯಾರೇ ಕಾಂಗ್ರೆಸ್ಗೆ ಬಂದರೂ ಅವರನ್ನು ಸ್ವಾಗತಿಸುವುದಾಗಿ ಹೇಳಿದರು. ಕಾಂಗ್ರೆಸ್ ಮುಖಂಡರಾದ ಕೆ.ಎಸ್. ಪೂರ್ಣೇಶ್, ಅಜಿತ್, ಯಶೋಧರಕುಮಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.