ಹಾಸನ: ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳು ಕೀಳರಿಮೆ ತೊರೆದು ಆತ್ಮವಿಶ್ವಾಸದಿಂದ ತಮ್ಮ ಪ್ರತಿಭೆ ಅಭಿವ್ಯಕ್ತಗೊಳಿಸಬೇಕು ಎಂದು ಹಾಸನ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದ (ಹಿಮ್ಸ್) ನಿರ್ದೇಶಕ ಡಾ.ಬಿ.ಸಿ. ರವಿಕುಮಾರ್ ಸಲಹೆ ನೀಡಿದರು.
ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ನಗರದ ಬ್ರಹ್ಮಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ನ ಬಿಳಿಯಮ್ಮ ಈರೇಗೌಡ ಪ್ರಥಮ ದರ್ಜೆ ಕಾಲೇಜು, ಸಂಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಮತ್ತು ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
ವಿದ್ಯೆಗೆ ವಿನಯವೇ ಭೂಷಣ. ಯಶಸ್ಸಿನ ಹಾದಿಯಲ್ಲಿ ಸಾಗಲು ಪ್ರತಿಭೆಯೊಂದಿಗೆ ಉತ್ತಮ ನಡವಳಿಕೆಯೂ ಮುಖ್ಯ. ಗುರಿ ಸಾಧನೆಯಲ್ಲಿ ಸಾಗುವಾಗ ಎದುರಾಗುವ ಎಡರುತೊಡರುಗಳಿಗೆ ಎದೆಗುಂದದೆ ಗುರುಹಿರಿಯರಲ್ಲಿ ಗೌರವ ಇಟ್ಟುಕೊಂಡು ಅವರ ಮಾರ್ಗದರ್ಶನದಲ್ಲಿ ಮುನ್ನಡೆದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ವಿದ್ಯಾರ್ಥಿ ಜೀವನದಲ್ಲಿ ಸಮಯ ವ್ಯರ್ಥ ಮಾಡದೆ ವಿದ್ಯಾಭ್ಯಾಸ ಮತ್ತು ವ್ಯಕ್ತಿತ್ವ ನಿರ್ಮಾಣದೆಡೆಗೆ ಗಮನ ನೀಡಬೇಕು ಎಂದು ತಿಳಿಸಿದರು.
ಹಿರಿಯ ಪತ್ರಕರ್ತೆ ಲೀಲಾವತಿ ಮಾತನಾಡಿ, ಯುವ ಜನಾಂಗ ಮೊಬೈಲ್ ಪ್ರಪಂಚದಿಂದ ಹೊರಬಂದು ಅಧ್ಯಯನದತ್ತ ಮುಖ ಮಾಡಿದರೆ ಭವಿಷ್ಯ ಸುಂದರವಾಗುತ್ತದೆ. ಕ್ಷಣಿಕ ಸುಖಕ್ಕೆ ಆಸೆಪಟ್ಟರೆ ಬದುಕು ದಾರಿತಪ್ಪುತ್ತದೆ ಎಂದು ಎಚ್ಚರಿಸಿದರು.
ಕಾಲೇಜಿನ ಪ್ರಾಂಶುಪಾಲ ಬಿ.ಈ. ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳು ಸಮಯದ ಮಹತ್ವ ಅರಿತು ಅಧ್ಯಯನ ನಡೆಸಬೇಕು. ತಂತ್ರಜ್ಞಾನದ ಫಲಗಳನ್ನು ವಿದ್ಯಾಭ್ಯಾಸಕ್ಕೆ ಪೂರಕವಾಗಿ ಬಳಸಿಕೊಳ್ಳಬೇಕು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಮಾರ್ಗದರ್ಶನ ಮಾಡಿದರು.
ಅಂತರಕಾಲೇಜು ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉಪನ್ಯಾಸಕರಾದ ಅಕ್ಷಯ್ ಕುಮಾರ್ ಮತ್ತು ಅಂಬಾ ಭವಾನಿ ನಿರ್ವಹಿಸಿದರು. ಟ್ರಸ್ಟ್ ಉಪಾಧ್ಯಕ್ಷ ಮರೀಗೌಡ, ಸಂಜೆ ಕಾಲೇಜು ಪ್ರಾಂಶುಪಾಲೆ ಎಚ್.ಎ. ರೇಖಾ, ಪ್ರಾಧ್ಯಾಪಕರಾದ ಎಚ್.ಬಿ. ಅಜಿತ್ ಪ್ರಸಾದ್, ಎಚ್.ಪಿ. ಸುಮಾ ವೀಣಾ, ಮನು ಹಿರಿಯಾಳ್, ಅಂಬಾ ಭವಾನಿ, ಬಿ.ಡಿ. ಗಿರೀಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.