ADVERTISEMENT

ಗಂಗಾಧರಪ್ಪಗೆ ಅಂತಿಮ ನಮನ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2012, 7:01 IST
Last Updated 5 ಡಿಸೆಂಬರ್ 2012, 7:01 IST

ಅರಸೀಕೆರೆ: ಸೋಮವಾರ ಮಧ್ಯಾಹ್ನ ನಿಧನ ಹೊಂದಿದ ಮಾಜಿ ಶಾಸಕ ಡಿ.ಬಿ. ಗಂಗಾಧರಪ್ಪ ಅವರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಅವರ ತೋಟದಲ್ಲಿ ನಡೆಯಿತು.

ಪಟ್ಟಣದ ನೂರಾರು ಗಣ್ಯರು, ಅಭಿಮಾನಿಗಳು, ಅನೇಕ ಮಠಾಧೀಶರು ಪಾಲ್ಗೊಂಡು ಅಂತಿಮ ಗೌರವ ಸಲ್ಲಿಸಿದರು. ಬೆಳಿಗ್ಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾರ್ಥೀವ ಶರೀರದ ಮೆರವಣಿಗೆ ನಡೆಯಿತು.

ಮೆರವಣಿಗೆ ಸಾಗುವ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನರು ಅಗಲಿದ ನಾಯಕನಿಗೆ ಕಂಬನಿ ಮಿಡಿದರು.
ಮೆರವಣಿಗೆಯ ನಂತರ ಅವರ ತೋಟದಲ್ಲಿ ವೀರಶೈವ ಧರ್ಮದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.

ಯಳನೋಡು ಸಂಸ್ಥಾನದ ಜ್ಞಾನಪ್ರಭು ಸಿದ್ದರಾಮ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಪುಷ್ಪಗಿರಿ ಸಂಸ್ಥಾನದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಕೋಳುಗುಂದ ಕೇದಿಗೆ ಮಠದ ಜಯಚಂದ್ರಶೇಖರ ಸ್ವಾಮೀಜಿ, ಮಾರಗೊಂಡನಹಳ್ಳಿ ಮಠದ ಬಸವಲಿಂಗಾನಂದ ಸ್ವಾಮೀಜಿ, ಕುಪ್ಪೂರು-ತಮ್ಮಡಿಹಳ್ಳಿ ಮಠದ ಡಾ.ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ, ಶಿಡ್ಲೆಹಳ್ಳಿ ಮಠದ ಇಮ್ಮಡಿ ಕರಿಬಸವದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ,ಡಿ.ಎಂಕುರ್ಕೆ ಬೂದಿಹಾಲ್ ವಿರಕ್ತ ಮಠದ ರಾಜಶೇಖರ ಸ್ವಾಮೀಜಿ, ಮಾಡಾಳು ಶಿವಬಸವ ಕುಮಾರಾಶ್ರಮದ ತೋಂಟದಾರ‌್ಯ ಸ್ವಾಮೀಜಿ ಅವರ ಸಾನ್ನಿಧ್ಯದ್ಲ್ಲಲಿ ಅಂತಿಮ ಅಂತ್ಯ ಸಂಸ್ಕಾರ ನಡೆಯಿತು.

ಮಂಗಳವಾರ ಬೆಳಿಗ್ಗೆ ಮೃತರ ನಿವಾಸಕ್ಕೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಶಾಸಕ ಎಚ್.ಎಸ್.ಪ್ರಕಾಶ್, ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಮುಂತಾದವರು ಗಂಗಾಧರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ, ಅಂತಿಮ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.