ಹಾಸನ:`ಗ್ರಾಮೀಣ ಪ್ರದೇಶದ ಮಹಿಳೆಯರು ಸಾಹಿತ್ಯ ಕ್ಷೇತ್ರದ ರಕ್ಷಾ ಕವಚ ಇದ್ದ ಹಾಗೆ' ಎಂದು ಸಾಹಿತಿ ಕುಂ. ವೀರಭದ್ರಪ್ಪ ನುಡಿದರು.
ಆಲೂರು ಪಟ್ಟಣದ ಒಕ್ಕಲಿಗರ ಸಮುದಾಯ ಭವನದ ರಾಜಾರಾವ್ ವೇದಿಕೆಯಲ್ಲಿ ಬುಧವಾರ ಆಯೋಜಿಸಿದ್ದ ತಾಲ್ಲೂಕುಮಟ್ಟದ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
`ಹಳ್ಳಿಗಳು ಸಾಹಿತ್ಯ ಲೋಕದ ಮೂಲ ಸ್ಥಾನಗಳಾಗಿದ್ದು, ಅವುಗಳನ್ನು ಉಳಿಸಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡುವ ಮೂಲಕ ಗ್ರಾಮೀಣ ಭಾಗದಲ್ಲಿ ಸಾಹಿತ್ಯ ಕೃಷಿ ಇನ್ನಷ್ಟು ಹೆಚ್ಚಾಗುವಂತೆ ಮಾಡಬೇಕು. ಸಾಹಿತ್ಯದ ಓದಿನಿಂದ ಜೀವನದಲ್ಲಿ ಆತ್ಮವಿಶ್ವಾಸ ಮೂಡುತ್ತದೆ. ಬದುಕು ಕಟ್ಟಿಕೊಳ್ಳುವ ಕಲೆಯನ್ನು ಸಾಹಿತ್ಯ ಕಲಿಸುತ್ತದೆ' ಎಂದರು.
`ಶಾಲೆಗಳಲ್ಲಿ ಕನ್ನಡ ಪರಿವೀಕ್ಷಣಾ ಸಮಿತಿ ಸ್ಥಾಪಿಸುವ ಮೂಲಕ ಮಕ್ಕಳಲ್ಲಿ ಕನ್ನಡ ಜಾಗೃತಿ ಮೂಡಿಸಿ ಭಾಷೆ ಬೆಳೆಸುವ ಕೆಲಸ ಮಾಡಬೇಕಾಗಿದೆ. ರಾಜ್ಯ ಸರ್ಕಾರ ತನ್ನ ಸಂಪೂರ್ಣ ವ್ಯವಹಾರವನ್ನು ಕನ್ನಡ ಭಾಷೆಯಲ್ಲೇ ನಡೆಸಬೇಕು. ಉನ್ನತ ಅಧಿಕಾರಿಗಳಿಗೆ ಕನ್ನಡ ಭಾಷೆಯ ಬಳಕೆ ಕಡ್ಡಾಯಗೊಳಿಸಬೇಕು' ಎಂದು ಅವರು ಒತ್ತಾಯಿಸಿದರು.
`ಮುಸ್ಲಿಂ ಜನಾಂಗದವರೂ ಇತ್ತೀಚೆಗೆ ಕನ್ನಡ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಕನ್ನಡ ಭಾಷೆ ಮತ್ತಷ್ಟು ಶ್ರೀಮಂತಗೊಳ್ಳಲು ಸಹಕಾರಿಯಾಗಿದೆ' ಎಂದರು.
ಶಾಸಕ ಎಚ್.ಕೆ. ಕುಮಾರಸ್ವಾಮಿ, ಸಮ್ಮೇಳನಾಧ್ಯಕ್ಷ ನಾಗರಾಜು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ಎಲ್. ಜನಾರ್ದನ್, ತಾಲ್ಲೂಕು ಘಟಕದ ಅಧ್ಯಕ್ಷ ಗುಲಾಂ ಸತ್ತಾರ್ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.