ಬೇಲೂರು: `ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಆಘಾತಕಾರಿಯಾಗಿ ಪರಿಣಮಿಸಿದೆ' ಎಂದು ಮೂಡಿಗೆರೆ ಶಾಸಕ ಬಿ.ಬಿ.ನಿಂಗಯ್ಯ ಹೇಳಿದರು.
ಬೇಲೂರು ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಕಾಫಿ ಕುಟೀರದ ವಾರ್ಷಿಕೋತ್ಸವ ಮತ್ತು ಶಾಸಕರುಗಳಿಗೆ ಸೋಮವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಸ್ವಾತಂತ್ರ್ಯಾ ನಂತರದಲ್ಲಿ ಎರಡು ಬಾರಿ ಕಂದಾಯ ಭೂಮಿ ಅರಣ್ಯ ಇಲಾಖೆಗೆ ಮತ್ತು ಅರಣ್ಯ ಭೂಮಿ ಕಂದಾಯ ಇಲಾಖೆಗೆ ವರ್ಗಾವಣೆಯಾದ ಸಂದರ್ಭದಲ್ಲಿ ಸರ್ಕಾರ ಸರ್ವೇ ನಡೆಸಿ ಗಡಿ ಗುರುತಿಸದಿರುವುದೇ ಸುಪ್ರೀಂಕೋರ್ಟ್ನ ಇಂದಿನ ಆದೇಶಕ್ಕೆ ಕಾರಣವಾಗಿದೆ ಎಂದರು.
ಅರಣ್ಯ ಭೂಮಿ ಒತ್ತುವರಿ ಮಾಡಿರುವವರ ಪೈಕಿ ಬಡ ಬೆಳೆಗಾರರೇ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಇವರ ಹಿತದೃಷ್ಟಿ ಇಟ್ಟುಕೊಂಡು ಒತ್ತುವರಿ ತೆರವು ಸಂಬಂಧ ಸುಪ್ರೀಂಕೋರ್ಟ್ಗೆ ಕಾಲಾವಕಾಶ ಕೋರಿ ಮನವಿ ಸಲ್ಲಿಸಬಹುದಾಗಿದೆ. ಮಲೆನಾಡು ಜಿಲ್ಲೆಗಳಲ್ಲಿ ಕೆಲಸ ಮಾಡಿ ಇಲ್ಲಿನ ಸಮಸ್ಯೆಯ ಬಗ್ಗೆ ಅರಿವಿರುವ ಐ.ಎ.ಎಸ್. ಐ.ಎಫ್.ಎಸ್ ಅಧಿಕಾರಿಗಳನ್ನು ಬೆಳೆಗಾರರ ಸಂಘಗಳು ಕರೆಸಿ ಚರ್ಚಿಸುವುದು ಅಗತ್ಯವಾಗಿದೆ. ಮಲೆನಾಡು ಮತ್ತು ಬಯಲುಸೀಮೆ ಎರಡೂ ಪ್ರದೇಶಗಳಲ್ಲೂ ಜಮೀನು ಒತ್ತುವರಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಶಾಸಕರು ಒಟ್ಟಾಗಿ ಹೋರಾಟ ಮಾಡುವುದು ಅವಶ್ಯಕವಾಗಿದೆ ಎಂದ ತಿಳಿಸಿದರು.
ಕಾನೂನು ತಿದ್ದುಪಡಿ ಅಗತ್ಯ
ಶಾಸಕ ವೈ.ಎನ್.ರುದ್ರೇಶ್ಗೌಡ ಮಾತನಾಡಿ, ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವುದು ಸರಿಯಲ್ಲ. ಈ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ ಮಾಡಿ ಹೊಸ ಕಾಯಿದೆ ಜಾರಿಗೊಳಿಸುವುದು ಅಗತ್ಯವಾಗಿದೆ. ಸಣ್ಣ ಬೆಳೆಗಾರರು ಒತ್ತುವರಿ ಮಾಡಿರುವ ಅರಣ್ಯ ಭೂಮಿ ತೆರವುಗೊಳಿಸುವುದಿಲ್ಲ. ದೊಡ್ಡ ಬೆಳೆಗಾರರು ಒತ್ತುವರಿ ಮಾಡಿರುವ ಅರಣ್ಯ ಭೂಮಿಯನ್ನು ಮಾತ್ರ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಅಭಿನಂದನೆ: ಬೇಲೂರು ಶಾಸಕ ವೈ.ಎನ್.ರುದ್ರೇಶ್ಗೌಡ, ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ, ಮೂಡಿಗೆರೆ ಶಾಸಕ ಬಿ.ಬಿ.ನಿಂಗಯ್ಯ, ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರನ್ನು ಇದೇ ವೇಳೆ ಅಭಿನಂದಿಸಲಾಯಿತು.
ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ತೊ.ಚ. ಅನಂತಸುಬ್ಬರಾಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಬೆಳೆಗಾರರ ಒಕ್ಕೂಟದ ಮಾಜಿ ಅಧ್ಯಕ್ಷ ಬಿ.ಎ. ಜಗನ್ನಾಥ್, ಡಿ.ಬಿ. ಸುಬ್ಬೇಗೌಡ, ಎಚ್.ಡಿ.ಪಿ.ಎ. ಅಧ್ಯಕ್ಷ ಮುಜಾಯಿದ್ ಆಲಂ, ತಾಲ್ಲೂಕು ಕಾಫಿ ಬೆಳೆಗಾರರ ಸಂಘದ ಉಪಾಧ್ಯಕ್ಷರಾದ ಎಸ್.ಎಂ. ದಿನೇಶ್, ಕರ್ಕಿಹಳ್ಳಿ ರಮೇಶ್, ಗೌರವ ಕಾರ್ಯದರ್ಶಿ ಜಿ.ಬಿ.ಶ್ರೀನಿವಾಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.