ADVERTISEMENT

ಮುಚ್ಚುತ್ತಿರುವ ಸರ್ಕಾರಿ ಶಾಲೆ: ರೇವಣ್ಣ ವಿಷಾದ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 9:25 IST
Last Updated 4 ಅಕ್ಟೋಬರ್ 2012, 9:25 IST

ಹೊಳೆನರಸೀಪುರ: ಇಂದಿನ ದಿನದಲ್ಲಿ ಖಾಸಗಿ ಶಾಲಾ ಕಾಲೇಜುಗಳು ಹಣ ಗಳಿಸುವ ಕೇಂದ್ರಗಳಾಗಿವೆ. ಸರ್ಕಾರದ ನೀತಿಯಿಂದ ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೂ ಆಡಳಿತ ನಡೆಸುತ್ತಿರುವ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿಲ್ಲ ಎಂದು ಶಾಸಕ ಎಚ್.ಡಿ. ರೇವಣ್ಣ ಆರೋಪಿಸಿದರು.
ಮಹಿಳಾ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಕಳೆದ 50 ವರ್ಷದಲ್ಲಿ ಹಿಂದಿನ ಸರ್ಕಾರಗಳು ಶಿಕ್ಷಣ ಇಲಾಖೆಗೆ ನೀಡಿದ್ದಕ್ಕಿಂತ, ಹೆಚ್ಚಿನ ನೆರವನ್ನು ಮುಖ್ಯಮಂತ್ರಿ ಆಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿ ನೀಡಿದರು. ರಾಜ್ಯದಲ್ಲಿ 82 ಪ್ರಥಮ ದರ್ಜೆ ಕಾಲೇಜುಗಳನ್ನು ಪ್ರಾರಂಭಿಸಿ ಶಿಕ್ಷಣ ಇಲಾಖೆ ಅಭಿವೃದ್ಧಿಗೆ 1500 ಕೋಟಿ ರೂ. ನೀಡಿದರು. ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಎಲ್ಲರನ್ನೂ ಕಾಯಂಗೊಳಿಸಬೇಕು.

ಸರ್ಕಾರ ಇತರ ಇಲಾಖೆಗಳಿಗಿಂತ ಹೆಚ್ಚಿನ ಅನುದಾನವನ್ನು ಶಿಕ್ಷಣ ಇಲಾಖೆ ಮತ್ತು ರೈತರಿಗೆ ನೀಡಬೇಕು ಎಂದು ಆಗ್ರಹಿಸಿದರು.


ಹಾಸನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಕವಿತಾ ಮಾತನಾಡಿದರು. ಪುರಸಭಾಧ್ಯಕ್ಷೆ ವಿನೋದಾ, ಕಾಲೇಜು ಅಭಿವೃದ್ಧಿ ಮಂಡಳಿಯ ಟಿ.ಮಲ್ಲೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಪಾಪಣ್ಣಿ ಇದ್ದರು.

ಪ್ರಾಂಶುಪಾಲ ಬಸವಣ್ಣ ಅಧ್ಯಕ್ಷತೆ ವಹಿಸಿದ್ದರು. ಸಿಂಧು ಕಾರ್ಯಕ್ರಮ ನಿರೂಪಿಸಿದರು. ಶಿವರಾಮೇಗೌಡ ಸ್ವಾಗತಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT