ADVERTISEMENT

ರಸ್ತೆ ವಿಸ್ತರಣೆಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2014, 5:21 IST
Last Updated 8 ಜನವರಿ 2014, 5:21 IST

ಬೇಲೂರು: ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಪಟ್ಟಣದ ಮುಖ್ಯರಸ್ತೆಯನ್ನು ವಿಸ್ತರಣೆ ಮಾಡಬೇಕು ಮತ್ತು ಗುಂಡಿ ಬಿದ್ದಿರುವ ರಸ್ತೆಗೆ ಡಾಂಬರೀಕರಣ ಮಾಡಬೇಕು ಎಂದು ಆಗ್ರಹಿಸಿ ಇಲ್ಲಿನ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಮಂಗಳವಾರ ರಸ್ತೆತಡೆ ನಡೆಸಿದರು.

ಪ್ರವಾಸಿ ಮಂದಿರದ ಬಳಿಯಿಂದ ಪಟ್ಟಣದ ಮುಖ್ಯರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಜಯಕರ್ನಾಟಕ ಸಂಘಟನೆಯ ಕಾರ್ಯಕರ್ತರು ಮುಖ್ಯರಸ್ತೆ ಅಗಲೀಕರಣಗೊಳಿಸಲು ಮತ್ತು ರಸ್ತೆ ದುರಸ್ತಿಗೊಳಿಸಲು ವಿಫಲವಾಗಿರುವ ಶಾಸಕರು, ಜಿಲ್ಲಾಡಳಿತ ಮತ್ತು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬಳಿಕ ಬಸವೇಶ್ವರ ವೃತ್ತದಲ್ಲಿ ಕೆಲಕಾಲ ರಸ್ತೆತಡೆ ನಡೆಸಿದ ಪ್ರತಿಭಟನಾಕಾರರು ನಂತರ ತಹಶೀಲ್ದಾರ್‌ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.
ಸಂಘಟನೆ ತಾಲ್ಲೂಕು ಗೌರವಾಧ್ಯಕ್ಷ ವಿ.ಎಸ್‌. ಬೋಜೇಗೌಡ ಮಾತನಾಡಿ, ಪ್ರವಾಸಿ ಕೇಂದ್ರವಾಗಿರುವ ಬೇಲೂರಿಗೆ ಪ್ರತಿನಿತ್ಯ ದೇಶ ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಬರುತ್ತಾರೆ. ಆದರೆ, ಪಟ್ಟಣದ ಮುಖ್ಯರಸ್ತೆ ಅತ್ಯಂತ ಕಿರಿದಾಗಿದ್ದು, ವಾಹನ ಸಂಚರಿಸಲು ತೀವ್ರ ತೊಂದರೆಯುಂಟಾಗಿದೆ.

ಅಲ್ಲದೆ ರಸ್ತೆ ಪೂರ್ತಿ ಗುಂಡಿ ಬಿದ್ದು ಹಾಳಾಗಿದ್ದರೂ ದುರಸ್ತಿ ಪಡಿಸಲು ಕ್ರಮ ಕೈಗೊಂಡಿಲ್ಲ. ಈ ಕುರಿತು ಶಾಸಕ ವೈ.ಎನ್‌. ರುದ್ರೇಶ್‌ಗೌಡ ನಿರ್ಲಕ್ಷ್ಯ ತೋರಿದ್ದಾರೆ. ತಕ್ಷಣ ರಸ್ತೆ ದುರಸ್ತಿ ಪಡಿಸಲು ಮತ್ತು ಅಗಲೀಕರಣಗೊಳಿಸಲು ಕ್ರಮ ಕೈಗೊಳ್ಳದಿದ್ದರೆ, ಬೇಲೂರು ಬಂದ್‌ ನಡೆಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಅಧ್ಯಕ್ಷ ಅರುಣ್‌ಕುಮಾರ್‌, ಪ್ರಮುಖರಾದ ಬಿ.ಎಲ್‌. ಲಕ್ಷ್ಮಣ್‌, ಜಯಂತ್‌, ಬಿ.ಬಿ. ಶಿವರಾಜು, ಮಂಜುನಾಥ್‌, ಜಯಪ್ರಕಾಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.