ADVERTISEMENT

ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚಳ

ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಸಚಿವ ಎ.ಮಂಜು ಕಳವಳ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2017, 8:43 IST
Last Updated 3 ಅಕ್ಟೋಬರ್ 2017, 8:43 IST

ಹಾಸನ: ‘ಇಂದಿನ ಮಕ್ಕಳು ಪೋಷಕರ ಬಗ್ಗೆ ನಿರ್ಲಕ್ಷ್ಯ ಭಾವನೆ ತೋರುತ್ತಿರುವುದರಿಂದ ವೃದ್ಧಾಶ್ರಮಗಳ ಸಂಖ್ಯೆ ಹೆಚ್ಚುತ್ತಿವೆ’ ಎಂದು ಪಶುಸಂಗೋಪನೆ ಸಚಿವ ಎ.ಮಂಜು ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಹೊರವಲಯದ ಚೈತನ್ಯ ವೃದ್ಧಾ ಶ್ರಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಎಲ್ಲಾ ಹಿರಿಯ ನಾಗರಿಕ ಸ್ವಯಂ ಸೇವಾ ಸಂಸ್ಥೆ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಮೊದಲು ಹಿರಿಯರನ್ನು ಗೌರವಿಸುವುದನ್ನು ಕಲಿಯಬೇಕು. ಪ್ರಸ್ತುತ ಯುವ ಜನಾಂಗ ಹಿರಿಯರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ. ಅವರ ಮಾರ್ಗದರ್ಶನ ಪಡೆಯದೆ ಭವಿಷ್ಯ ರೂಪಿಸಿಕೊಳ್ಳುವುದು ಕಷ್ಟ. ಹಿರಿಯರಿಗೆ ಸರ್ಕಾರ ಹಲವು ಸವಲತ್ತುಗಳನ್ನು ಕೊಡುತ್ತಿದೆ. ಆದರೆ, ಅವುಗಳು ಸಮರ್ಪಕವಾಗಿ ಸದ್ಬಳಕೆ ಆಗುತ್ತಿವೆಯೇ ಎಂಬುದನ್ನು ಜನಪ್ರತಿನಿಧಿಗಳು ಮನಗಾಣಬೇಕು ಎಂದು ಹೇಳಿದರು.

ADVERTISEMENT

ಕ್ಷೇತ್ರದ ಶಾಸಕ ಎಚ್.ಎಸ್. ಪ್ರಕಾಶ್ ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ವಿತರಿಸಲು ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು. ಜನಪರ ಯೋಜನೆಗಳು ಅರ್ಹರಿಗೆ ತಲುಪಬೇಕು. ಅಧಿಕಾರ ಶಾಶ್ವತವಲ್ಲ. ಆದರೆ, ಅವಧಿಯಲ್ಲಿ ನಿರ್ವಹಿಸುವ ಕೆಲಸಗಳು ನಮ್ಮನ್ನು ಎತ್ತರಕ್ಕೆ ಕೊಂಡೊಯ್ಯುತ್ತವೆ. ಪ್ರತಿ ಕುಟುಂಬದಲ್ಲೂ ಅಜ್ಜಿ ಇರಬೇಕು. ಹಿರಿಯರ ಮಾರ್ಗದರ್ಶನ ಪಾಲಿಸಿದರೆ ಪ್ರಗತಿ ಸಾಧಿಸಬಹುದು ಎಂದರು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹಿರಿಯ ನಾಗರಿಕರಾದ ಪಾಂಡುರಂಗ ಮತ್ತು ನಾಗರಾಜು ಅವರನ್ನು ಸನ್ಮಾನಿಸಲಾಯಿತು. ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ನಿವೃತ್ತ ನಾಗರೀಕರ ವೇದಿಕೆ ಅಧ್ಯಕ್ಷ ಅನಂತರಾಮು, ತಹಶೀಲ್ದಾರ್ ಶಿವಶಂಕರಪ್ಪ, ಚೈತನ್ಯ ವೃದ್ಧಾಶ್ರಮದ ನಿರ್ದೇಶಕ ರಾಜಣ್ಣ, ಇಲಾಖೆಯ ಮಲ್ಲೇಶ್, ಕಲಾವಿದ ಬೋರೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಕೆ. ಪದ್ಮಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.