ADVERTISEMENT

ವೈದ್ಯರ ನೇಮಕಕ್ಕೆ ಆಗ್ರಹಿಸಿ ಆಸ್ಪತ್ರೆ ಎದುರು ಧರಣಿ

​ಪ್ರಜಾವಾಣಿ ವಾರ್ತೆ
Published 5 ಜೂನ್ 2013, 6:23 IST
Last Updated 5 ಜೂನ್ 2013, 6:23 IST

ಹಿರೀಸಾವೆ: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಅಗತ್ಯವಿರುವ ವೈದ್ಯರು ಮತ್ತು ಸಿಬ್ಬಂದಿ ನೇಮಿಸುವಂತೆ ಒತ್ತಾಯಿಸಿ ಮಂಗಳವಾರ ವಿವಿಧ ದಲಿತ ಪರ ಸಂಘಟನೆಗಳು ಮಂಗಳವಾರ ಆರೋಗ್ಯ ಕೇಂದ್ರ ಮುಂದೆ ಪ್ರತಿಭಟನೆ ನಡೆಸಿದವು.

ಶ್ರೀಕಂಠಯ್ಯ ವೃತ್ತದಿಂದ ಜಾಥಾದಲ್ಲಿ ಆಗಮಿಸಿದ ಸಂಘಟನೆಗಳ ಕಾರ್ಯಕರ್ತರು, ಆಸ್ಪತ್ರೆ ಮುಂದೆ ಧರಣಿ ನಡೆಸಿ, ಆರೋಗ್ಯ ಇಲಾಖೆಯ ಅಧಿಕಾರಿಗಳು  ಮತ್ತು   ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಆಸ್ಪತ್ರೆಯಲ್ಲಿ 5 ವೈದ್ಯರ ಹುದ್ದೆಗಳಿದ್ದು, ಒಂದು ವರ್ಷದಿಂದ ಇಬ್ಬರು ವೈದ್ಯರು ಹಗಲಿನ ವೇಳೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾತ್ರಿ ಪಾಳಿಗೆ ವೈದ್ಯರಿಲ್ಲ. 18 ಡಿ. ಗ್ರೂಪ್ ನೌಕರ ಹುದ್ದೆಗಳಿದ್ದು, ಇಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2 ಶೂಶ್ರಕಿಯರ ಹುದ್ದೆ ಖಾಲಿ ಇವೆ. ಆಸ್ಪತ್ರೆಗಳಲ್ಲಿ ಹಲವು ಸಮಸ್ಯೆಗಳಿದ್ದು ಪರಿಹರಿಸುವಂತೆ ಪ್ರತಿಭಟನಕಾರರು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾ ಪಂಚಾಯಿತಿ  ಅಧ್ಯಕ್ಷೆ ಡಿ.ಜಿ. ಅಂಬಿಕಾ ರಾಮಕೃಷ್ಣ ಮಾತನಾಡಿ, ವೈದ್ಯರನ್ನು ನೇಮಿಸುವಂತೆ ಸರ್ಕಾರಕ್ಕೆ ಜಿಲ್ಲಾ ಪಂಚಾಯಿತಿ ವತಿಯಿಂದ ಹಲವು ಬಾರಿ ಪತ್ರ ಬರೆದಿದ್ದೇವೆ. ಸರ್ಕಾರ ವೈದ್ಯರ ನೇಮಕ ಮಾಡಿದರೆ ಮಾತ್ರ ಸಮಸ್ಯೆ ಬಗೆಹರಿಸಲು ಸಾಧ್ಯ. ಇದು ಸರ್ಕಾರದ ಮಟ್ಟದಲ್ಲಿ ಆಗಬೇಕು. ಈ ಕುರಿತು ಗಮನಹರಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶ್ಯಾಮಲಾ ದೇವಿ, ತಾಲ್ಲೂಕು ಆರೋಗ್ಯ ಅಧಿಕಾರಿ ನಾಗೇಶ್ ಮನವಿ ಸ್ವೀಕರಿಸಿದರು. ಸಂಘಟನೆಗಳ ಗೊವಿಂದರಾಜು,  ಮಂಜುನಾಥ್, ಮಧು, ನಂಜುಂಡ, ನಾಗರಾಜು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.