ಹಾಸನ: ಶಿಕ್ಷಣ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸುವುದು, ಡೊನೇಷನ್ ಹಾವಳಿ ನಿಯಂತ್ರಿಸುವುದು, ಖಾಸಗಿ ವಿ.ವಿ. ಸ್ಥಾಪನೆ ಕೈಬಿಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ನೇತೃತ್ವದಲ್ಲಿ ಗುರುವಾರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
`ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಅದು ಸರಿಯಾಗಿ ಜಾರಿಯಾಗುತ್ತಿಲ್ಲ. ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಮಿತಿಮೀರಿ ಹಿಂದುಳಿದವರು, ಅಲ್ಪಸಂಖ್ಯಾತ ಮಕ್ಕಳಿಗೆ ಈ ಶಾಲೆಗಳು ಶಿಕ್ಷಣ ನಿರಾಕರಿಸುತ್ತಿವೆ. ಡೊನೇಷನ್ ಹಾವಳಿ ತಡೆಯಲು ಪ್ರತಿ ಜಿಲ್ಲೆಯಲ್ಲಿ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ರಚಿಸಬೇಕು' ಎಂದು ಆಗ್ರಹಿಸಿದರು.
`ಸರ್ಕಾರಿ ಶಾಲೆಗಳನ್ನು ಮುಚ್ಚಿರುವುದು ಸರಿಯಲ್ಲ. ಮುಚ್ಚಿರುವ ಶಾಲೆಗಳನ್ನು ಮತ್ತೆ ತೆರೆಯಬೇಕು, ಎಲ್ಲ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಿಗೆ ಮೂಲ ಸೌಲಭ್ಯ ಒದಗಿಸಬೇಕು. ಹಿಂದಿನ ಸರ್ಕಾರ ಪಠ್ಯಗಳನ್ನು ಕೇಸರೀಕರಣಗೊಳಿಸಿದ್ದು, ಅದನ್ನು ಮತ್ತೆ ಪರಿಷ್ಕರಿಸಬೇಕು, ಸಾಹಿತಿ, ಚಿಂತಕರನ್ನೊಳಗೊಂಡ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ರಚಿಸಬೇಕು, ಹಾಸ್ಟೆಲ್ಗಾಗಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕು, ಅವರ ಭತ್ಯೆಯನ್ನೂ ಹೆಚ್ಚಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ನಗರದ ಆರ್.ಸಿ. ರಸ್ತೆಯಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಪೃಥ್ವಿ ಎಂ.ಜಿ. ಅನ್ಷಾದ್, ಪ್ರದೀಪ್ ಕುಮಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.