ADVERTISEMENT

‘ಕಾಚೇನಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ’

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2013, 7:06 IST
Last Updated 24 ಡಿಸೆಂಬರ್ 2013, 7:06 IST

ಹಾಸನ: ಎರಡೂವರೆ ದಶಕಗಳಿಂದ ನನೆಗುದಿಗೆ ಬಿದ್ದಿರುವ ಕಾಚೇನಹಳ್ಳಿ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರ ದಂಡಿಗನಹಳ್ಳಿಯ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

‘ಈ ಭಾಗದ ರೈತರು ನೀರಿನ ಕೊರತೆಯಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮಳೆಯ ಕೊರತೆಯಿಂದ ಬೆಳೆ ನಾಶವಾಗಿದೆ, ದನಕರುಗಳಿಗೂ ಕುಡಿಯಲು ನೀರಿಲ್ಲದ ಸ್ಥಿತಿ ಉಂಟಾಗಿದೆ. ಸಾವಿರ ಅಡಿ ಕೊಳವೆಬಾವಿ ಕೊರೆದರೂ ನೀರು ಲಭಿಸುತ್ತಿಲ್ಲ. ಸರ್ಕಾರ ಇತ್ತ ಗಮನಹರಿಸಿ ಈ ಯೋಜನೆ­ಯನ್ನು ಪೂರ್ಣಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಾಲೆಯ ಸರಪಳಿ 5.20 ಕಿ.ಮೀ. ನಿಂದ 7.70ಕಿ.ಮೀ. ವರೆಗಿನ ಕಾಮಗಾರಿ ಸ್ಥಗಿತಗೊಂಡಿದೆ. ಅರಣ್ಯ ಇಲಾಖೆಯವರು ಈ ಭೂಮಿಗೆ ಬದಲಾಗಿ ಬೇರೆ ಭೂಮಿ ನೀಡುವಂತೆ ಒತ್ತಾಯ ಮಾಡಿದ್ದರಿಂದ ಈ ಸಮಸ್ಯೆ ಉಂಟಾಗಿದೆ.

ಇದಕ್ಕೆ ಬದಲಾಗಿ ಬಾಗೇಶಪುರ ಗ್ರಾಮದ ರಂಗಾಪುರ ಕಾವಲ್‌ ಸರ್ವೆ ನಂ.1ರ ಭೂಮಿಯನ್ನು ಬಳಸಬಹುದು ಎಂದು ಎರಡು ಬಾರಿ ಪತ್ರ ಬರೆದಿದ್ದರೂ ಇಲಾಖೆಯಿಂದ ಇದಕ್ಕೆ ಉತ್ತರ ಲಭಿಸಿಲ್ಲ. ಇವೆಲ್ಲವುಗಳಿಂದ ರೈತರ ಸಮಸ್ಯೆ­ಗಳಿಗೆ ಕೊನೆಯೇ ಇಲ್ಲದಂತಾಗಿದೆ.

ಆದ್ದರಿಂದ ಈ ಕೂಡಲೇ ಸರ್ಕಾರ ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿ ಇತ್ತ ಗಮನಹರಿಸಿ ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಂಡು ರೈತರ ಕಣ್ಣೀರು ಒರೆಸಬೇಕು’ ಎಂದು ದಂಡಿಗನಹಳ್ಳಿ ಹೋಬಳಿ ಕಾಚೇನಹಳ್ಳ–ಆಲಗೊಂಡನಹಳ್ಳಿ ಏತನೀರಾವರಿ ಹೋರಾಟಗಾರರ ಸಮಿತಿಯವರು ಒತ್ತಾಯಿಸಿದರು.

ನಗರದ ಹೇಮಾವತಿ ಪ್ರತಿಮೆ ಮುಂದಿನಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು ಎನ್‌.ಆರ್‌. ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.