ಚನ್ನರಾಯಪಟ್ಟಣ: ಕಟ್ಟಡ ಕಾರ್ಮಿಕರು ಕಾನೂನು ಬದ್ಧ ಸವಲತ್ತು ಪಡೆದುಕೊಳ್ಳಬೇಕು ಎಂದು ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶ ಎಸ್.ಟಿ. ದೇವರಾಜ ಹೇಳಿದರು.
ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆಗಳ ಆಶ್ರಯದಲ್ಲಿ ಬುಧವಾರ ಪಟ್ಟಣದಲ್ಲಿ ಕಟ್ಟಡ ಕಾರ್ಮಿಕರಿಗೆ ಏರ್ಪಡಿಸಿದ್ದ ‘ಕಾನೂನು ಅರಿವು ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.
ಕಟ್ಟಡ ಕಾರ್ಮಿಕರು ತಮ್ಮ ಮಕ್ಕಳನ್ನು ಓದಿಸಬೇಕು. ಕಾನೂನು ಪ್ರಕಾರ ಲಭ್ಯ ಇರುವ ಶೈಕ್ಷಣಿಕ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಮಿಕ ನಿರೀಕ್ಷಕ ಎಚ್.ಕೆ. ಪ್ರಭಾಕರ್ ಮಾತನಾಡಿ, ತಾಲ್ಲೂಕಿನಲ್ಲಿ 1,443 ಕಟ್ಟಡ ಕಾರ್ಮಿಕರಿದ್ದಾರೆ. ಇವರ ಮಕ್ಕಳಿಗೆ ಶೈಕ್ಷಣಿಕ ಸವಲತ್ತು ಒದಗಿಸುವ ನಿಟ್ಟಿನಲ್ಲಿ 112 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು.
ಅದರಲ್ಲಿ 28 ಅರ್ಜಿ ವಿಲೇವಾರಿ ಮಾಡಿ ₨ 1.21 ಲಕ್ಷ ಧನ ಸಹಾಯ ನೀಡಲಾಗಿದೆ ಎಂದರು. ಶೀಘ್ರಗತಿ ನ್ಯಾಯಾಲಯದ ನ್ಯಾಯಾಧೀಶ ಎಚ್.ಸಿ. ಶಾಮ್ಪ್ರಸಾದ್, ವಕೀಲರ ಸಂಘದ ಅಧ್ಯಕ್ಷ ವೈ.ಕೆ. ಪುಟ್ಟಸ್ವಾಮಿಗೌಡ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಪ್ಪ, ಸಿ.ಜಿ. ಮಂಜಪ್ಪ, ಸಿ.ಎಂ. ಅನಿಲ್ಕುಮಾರ್ ಇದ್ದರು. ಕಾರ್ಮಿಕ ನಿರೀಕ್ಷಕ ಎಚ್.ಕೆ. ಪ್ರಭಾಕರ್, ವಕೀಲ ಹಲಗಪ್ಪ ಇದ್ದರು. ಕಟ್ಟಡ ಕಾರ್ಮಿಕರಿಗೆ ಗುರುತಿನ ಪತ್ರ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.